ಬೆಂಗಳೂರು: ಕರೊನಾ ಸಂಕಷ್ಟ ಕಾಲದಲ್ಲಿ ವೇತನವಿಲ್ಲದೆ ಕಂಗೆಟ್ಟಿರುವ ರಾಜ್ಯದ ಸುಮಾರು ಎರಡೂವರೆ ಲಕ್ಷ ಖಾಸಗಿ ಶಾಲಾ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ನೆರವಿಗೆ ಸರ್ಕಾರ ತಕ್ಷಣವೇ ಮುಂದಾಗಬೇಕು ಎಂದು ಮಾಜಿಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಟ್ವಿಟ್ ಮೂಲಕ ಶಿಕ್ಷಕರ ನೆರವಿಗೆ ಸರ್ಕಾರವನ್ನು ಒತ್ತಾಯಿಸಿರುವ ಅವರು,ರಾಜ್ಯದಾದ್ಯಂತ 20 ಸಾವಿರಕ್ಕೂ ಹೆಚ್ಚು ಖಾಸಗಿ ಶಾಲೆಗಳ ಶಿಕ್ಷಕರಿಗೆ ಕಳೆದ ಏಪ್ರಿಲ್ ನಿಂದ ವೇತನ ಸಿಗದೇ ದೈನಂದಿನ ಜೀವನ ಸಾಗಿಸಲು ಪರದಾಡುತ್ತಿದ್ದಾರೆ. ಅತಿಥಿ ಉಪನ್ಯಾಸಕರ ನೋವು ಇದಕ್ಕಿಂತ ಭಿನ್ನವಾಗಿಲ್ಲ. ಸರ್ಕಾರ ಈ ಬಗ್ಗೆ ಖಾಸಗಿ ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿ ಅತಂತ್ರಕ್ಕೆ ಸಿಲುಕಿರುವ ಶಿಕ್ಷಕರ ನೆರವಿಗೆ ತಕ್ಷಣ ಧಾವಿಸಬೇಕು.
ಕೆಲ ಖಾಸಗಿ ಶಾಲೆಗಳಲ್ಲಿ ಶೇಕಡ ಐವತ್ತಕ್ಕಿಂತಲೂ ಕಡಿಮೆ ವೇತನ ನೀಡುತ್ತಿದ್ದರೂ ಸಕಾಲಕ್ಕೆ ಪಾವತಿಸುತ್ತಿಲ್ಲ. ಬೇರೆ ಉದ್ಯೋಗ ಗೊತ್ತಿಲ್ಲದ ಲಕ್ಷಾಂತರ ಖಾಸಗಿ ಶಿಕ್ಷಕ ಸಮುದಾಯ ಮನೆ ಬಾಡಿಗೆ ಕಟ್ಟಲೂ ಆಗದೆ ಭವಿಷ್ಯದ ಬಗ್ಗೆ ಚಿಂತಾಕ್ರಾಂತರಾಗಿದ್ದಾರೆ. ಇಂತಹ ಶಿಕ್ಷಕರಿಗೆ ಸರ್ಕಾರ ವಿಶೇಷ ಆರ್ಥಿಕ ನೆರವು ಮತ್ತು ಸಾಲ ಸೌಲಭ್ಯ ಒದಗಿಸಬೇಕು.
ವಿದ್ಯಾರ್ಥಿಗಳು ಶುಲ್ಕ ಕಟ್ಟುತ್ತಿಲ್ಲ ಎಂಬ ಕಾರಣ ಹೇಳಿ ಶಿಕ್ಷಕರನ್ನು ಕೆಲಸದಿಂದ ತೆಗೆಯಲು ಆಡಳಿತ ಮಂಡಳಿಗಳು ಮುಂದಾಗುತ್ತಿರುವುದನ್ನು ತಪ್ಪಿಸಲು ಸರ್ಕಾರ ತಡಮಾಡದೆ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ.