ಮಡಿಕೇರಿ: ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಮತ್ತು ಕಂದಾಯ ಸಚಿವರಾದ ಆರ್.ಅಶೋಕ್ ಅವರು ತಲಕಾವೇರಿ ಬಳಿ ಉಂಟಾಗಿರುವ ಭೂಕುಸಿತ ಪ್ರದೇಶಕ್ಕೆ ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಭೂಕುಸಿತ ಉಂಟಾಗಿರುವ ಬಗ್ಗೆ ಶಾಸಕರಾದ ಕೆ.ಜಿ.ಬೋಪಯ್ಯ ಅವರಿಂದ ಮಾಹಿತಿ ಪಡೆದ ಕಂದಾಯ ಸಚಿವರು ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಬೇಕು ಎರಡು ದಿನದೊಳಗೆ ಕಾರ್ಯಾಚರಣೆ ಮುಗಿಯಬೇಕು. ಆ ನಿಟ್ಟಿನಲ್ಲಿ ಹೆಚ್ಚಿನ ಜನರನ್ನು ನಿಯೋಜಿಸುವಂತೆ ಎಂಜಿನಿಯರ್ಗಳಿಗೆ ಸೂಚಿಸಿದರು.

ಕಾರ್ಯಾಚರಣೆಯನ್ನು ಐದು ತಂಡವಾಗಿ ಮೂರು ಪಾಳಿಯಲ್ಲಿ ನಿರ್ವಹಿಸಬೇಕು. ಎನ್ಡಿಆರ್ಎಫ್, ಎಸ್ಡಿಆರ್ಎಫ್, ಪೊಲೀಸ್, ಅಗ್ನಿಶಾಮಕ ಇಲಾಖೆ, ಗೃಹರಕ್ಷಕದಳ ಹಾಗೂ ಸ್ಥಳೀಯರು ಸೇರಿದಂತೆ 150 ಕ್ಕೂ ಹೆಚ್ಚು ಜನರನ್ನು ನಿಯೋಜಿಸಿಕೊಂಡು ತ್ವರಿತವಾಗಿ ಕಾರ್ಯಾಚರಣೆ ಕೈಗೊಳ್ಳುವಂತೆ ಲೋಕೋಪಯೋಗಿ ಮತ್ತು ಜಿ.ಪಂ.ಎಂಜಿನಿಯರ್ಗಳಿಗೆ ಆರ್.ಅಶೋಕ್ ಸ್ಪಷ್ಟ ನಿರ್ದೇಶನ ನೀಡಿದರು.

ಪ್ರಕೃತಿ ವಿಕೋಪ ನಿರ್ವಹಣೆಗೆ ಕಂದಾಯ ಇಲಾಖೆಯಲ್ಲಿ ಹೆಚ್ಚಿನ ಹಣವಿದ್ದು, ಕೇಂದ್ರ ಸರ್ಕಾರ 310 ಕೋಟಿ ರೂ ನೀಡಿದೆ. ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ ಹೆಚ್ಚಿನ ಹಣವಿದ್ದು, ಈಗ ಪ್ರಕೃತಿ ವಿಕೋಪ ನಿರ್ವಹಣೆಗೆ 5 ಕೋಟಿ ರೂ ಬಿಡುಗಡೆ ಮಾಡಲಾಗಿದೆ ಎಂದು ಕಂದಾಯ ಸಚಿವರಾದ ಆರ್.ಅಶೋಕ್ ಅವರು ವಿವರಿಸಿದರು.
ಪ್ರಕೃತಿ ವಿಕೋಪ ಸಂಬಂಧ ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ವೀಡಿಯೋ ಸಂವಾದವಿದ್ದು, ರಾಜ್ಯದ ಪರಿಸ್ಥಿಯ ಬಗ್ಗೆ ಮಾಹಿತಿ ನೀಡಲಾಗುದು. ಜೊತೆಗೆ ಹೆಚ್ಚಿನ ಹಣ ಬಿಡುಗಡೆಗೆ ಮನವಿ ಮಾಡಲಾಗುವುದು ಎಂದು ಆರ್.ಅಶೋಕ್ ಅವರು ತಿಳಿಸಿದರು.ಪ್ರಕೃತಿ ವಿಕೋಪವನ್ನು ಸರ್ಕಾರ ಸಮರ್ಥವಾಗಿ ನಿಭಾಯಿಸುತ್ತಿದೆ. ರಾಜ್ಯದ ಉತ್ತರ ಭಾಗದಲ್ಲಿಯೂ ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ಗಮನ ಹರಿಸಲಾಗಿದೆ. ಪ್ರಕೃತಿ ವಿಕೋಪದಿಂದ ಉಂಟಾಗಿರುವ ಬೆಳೆ ಹಾನಿಗೆ ಪರಿಹಾರ ನೀಡಲಾಗುವುದು ಎಂದರು.
ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಮಾತನಾಡಿ ಭೂಕುಸಿತ ಪ್ರದೇಶದಲ್ಲಿ ಕಾರ್ಯಾಚರಣೆಯನ್ನು ಮುಂದುವರೆಸಲಾಗಿದೆ. ಕಾರ್ಯಾಚರಣೆ ಸಂದರ್ಭದಲ್ಲಿ ಬೆಡ್ಶೀಟ್ ಸಿಕ್ಕಿದ್ದು, ದೇಹ ಸಿಗಲಿದೆ. ಕುಟುಂಬದವರಿಗೆ ನಿಯಮಾನುಸಾರ ಪರಿಹಾರ ನೀಡಲಾಗುವುದು ಎಂದರು.
ಘಟನೆ ನಡೆದ ಸ್ಥಳ ಮತ್ತು ಆ ಸ್ಥಳದಿಂದ 65 ಅಡಿ ಕೆಳಗಿನ ಪ್ರದೇಶದಲ್ಲಿ ಎನ್ಡಿಆರ್ಎಫ್ ಮತ್ತು ಪೊಲೀಸ್ ಇಲಾಖೆಯ ತಂಡ ಶೋಧ ಕಾರ್ಯ ಮುಂದುವರೆಸಿದೆ. ಶೀಘ್ರದಲ್ಲಿಯೇ ಶೋಧ ಕಾರ್ಯ ಮುಗಿಯುವ ವಿಶ್ವಾಸವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.ಕಾರ್ಯಾಚರಣೆಗೆ ಎಲ್ಲರೂ ಸಹಕರಿಸಬೇಕು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಬಡ ಜನರ ಶ್ರೇಯೋಭಿವೃದ್ಧಿಗೆ ಸ್ಪಂದಿಸುವಲ್ಲಿ ಸದಾ ಸಿದ್ಧವಿದೆ ಎಂದು ವಿ.ಸೋಮಣ್ಣ ಹೇಳಿದರು.
ಸಂಸದರಾದ ಪ್ರತಾಪ್ ಸಿಂಹ ಮಾತನಾಡಿ, ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ ಪರಿಹಾರ ನೀಡಲಾಗುತ್ತಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಬಡ ಜನರ ಕಲ್ಯಾಣಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರ ಕೃಷಿಕರು, ಕಾರ್ಮಿಕರು ಹಾಗೂ ಇತರರಿಗೆ ಎಲ್ಲಾ ರೀತಿಯ ಮೂಲ ಸೌಲಭ್ಯ ಕಲ್ಪಿಸಲು ಮಂದಾಗಿದೆ ಎಂದರು.ಶಾಸಕರಾದ ಕೆ.ಜಿ ಬೋಪಯ್ಯ ಅವರು ಮಾತನಾಡಿ, ಭೂಕುಸಿತ ಪ್ರದೇಶ ಸಂಬಂಧಿಸಿದಂತೆ ಕಂದಾಯ ಸಚಿವರ ಗಮನಕ್ಕೆ ತಂದರು ಶಾಸಕರಾದ ಅಪ್ಪಚ್ಚು ರಂಜನ್ ಅವರು ಕಾರ್ಯಾಚರಣೆ ಬಗ್ಗೆ ಹಲವು ಸಲಹೆ ನೀಡಿದರು.ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಭೂಕುಸಿತ ಪ್ರದೇಶದಲ್ಲಿ ಕೈಗೊಳ್ಳಲಾಗಿರುವ ಕಾರ್ಯಾಚರಣೆ ಮತ್ತಿತರ ಬಗ್ಗೆ ಹಲವು ಮಾಹಿತಿ ನೀಡಿದರು.
ವಿಧಾನ ಪರಿಷತ್ ಸದಸ್ಯರಾದ ಸುನೀಲ್ ಸುಬ್ರಮಣಿ, ಜಿ.ಪಂ.ಉಪಾಧ್ಯಕ್ಷರಾದ ಲೋಕೇಶ್ವರಿ ಗೋಪಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರಾ, ಲೋಕೋಪಯೋಗಿ ಇಇ ಮದನ್ ಮೋಹನ್, ಜಿ.ಪಂ.ಇಇ ಪ್ರಭು, ತಹಶೀಲ್ದಾರ್ ಮಹೇಶ್, ಡಿವೈಎಸ್ಪಿ ದಿನೇಶ್ ಕುಮಾರ್ ಇತರರು ಇದ್ದರು.
