ದೊಡ್ಡಬಳ್ಳಾಪುರ: ಕರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆ ಸರ್ಕಾರದ ಆದೇಶದಂತೆ, ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ, ಸಾಮಾಜಿಕ/ರಾಜಕೀಯ/ ಕ್ರೀಡೆ/ಮನೋರಂಜನೆ/ ಶೈಕ್ಷಣಿಕ/ ಸಾಂಸ್ಕ್ರತಿಕ/ ಧಾರ್ಮಿಕ ಕಾರ್ಯಗಳು ಮತ್ತು ಇತರೆ ಬೃಹತ್ ಸಭೆಗಳಿಗೆ ಅನುಮತಿ ಇಲ್ಲವೆಂದು ವಿಪತ್ತು ನಿರ್ವಹಣಾ ಕಾಯ್ದೆ-2005ರ ಅಡಿಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಆದೇಶಿಸಿದ್ದಾರೆ.
ಶ್ರೀ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ಭಕ್ತಿ ಪೂರ್ವಕವಾಗಿ ದೇವಸ್ಥಾನದೊಳಗೆ, ತಮ್ಮ ಮನೆಗಳಲ್ಲಿ ಅಥವಾ ಸರ್ಕಾರಿ/ ಖಾಸಗಿ/ ಸಾರ್ವಜನಿಕ ಬಯಲು ಪ್ರದೇಶಗಳಲ್ಲಿ ಕನಿಷ್ಠ ಸಂಖ್ಯೆಯೊಂದಿಗೆ ಆಚರಿಸಬಹುದು. ಈ ರೀತಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವವರು ಗಣೇಶ ಮೂರ್ತಿಯನ್ನು ನಾಲ್ಕು ಅಡಿ ಎತ್ತರ ಮೀರದಂತೆ ಹಾಗೂ ಮನೆಯೊಳಗೆ ಎರಡು ಅಡಿ ಮೀರದಂತೆ ಪ್ರತಿಷ್ಠಾಪಿಸುವುದು. ಪಾರಂಪರಿಕ ಗಣೇಶೋತ್ಸವ ಸಮಿತಿಗಳು/ಮಂಡಳಿಗಳು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡಲು ಮುನಿಸಿಪಲ್ ಕಾರ್ಪೊರೇಷನ್/ ಸ್ಥಳೀಯ ಆಡಳಿತದಿಂದ ಪೂರ್ವಾನುಮತಿಯನ್ನು ಪಡೆಯತಕ್ಕದ್ದು. ಒಂದು ವಾರ್ಡಿಗೆ/ ಗ್ರಾಮಕ್ಕೆ ಒಂದು ಸಾರ್ವಜನಿಕ ಗಣೇಶೋತ್ಸವವನ್ನು ಮಾತ್ರ ಆಚರಿಸಲು ಪ್ರೋತ್ಸಾಹಿಸುವುದು. ಇಂತಹ ಸ್ಥಳಗಳಲ್ಲಿ 20 ಜನಕ್ಕೆ ಸೀಮಿತವಾದ ಆವರಣವನ್ನು ನಿರ್ಮಿಸುವುದು, ಒಮ್ಮೆಲೆ 20ಕ್ಕಿಂತ ಹೆಚ್ಚಿನ ಜನ ಸೇರದಂತೆ ಭಕ್ತಾಧಿಗಳಿಗೆ ಅನುವು ಮಾಡುವುದು.
ಗಣೇಶ ಮೂರ್ತಿ ಪ್ರತಿಷ್ಠಾಪನೆ ಸ್ಥಳದಲ್ಲಿ ಯಾವುದೇ ರೀತಿಯ ಸಾಂಸ್ಕ್ರತಿಕ/ ಸಂಗೀತ/ ನೃತ್ಯ ಇನ್ನಿತರೆ ಯಾವುದೇ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲು ಅವಕಾಶವಿರುವುದಿಲ್ಲ. ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ಕಾರಣಕ್ಕಾಗಲಿ ಅಥವಾ ಯಾವುದೇ ಸಂದರ್ಭಗಳಲ್ಲಿ ಯಾವುದೇ ರೀತಿಯ ಮೆರವಣಿಗೆಯನ್ನು ಹೊರಡಿಸತಕ್ಕದ್ದಲ್ಲ/ಮಾಡತಕ್ಕದ್ದಲ್ಲ. ಇದನ್ನು ಸಂಪೂರ್ಣವಾಗಿ ನಿರ್ಬಂಧಿಸಿದೆ. ಪಾರಂಪರಿಕ ಗಣೇಶ ಮೂರ್ತಿ ಮತ್ತು ಮನೆಯಲ್ಲಿ ವಿಗ್ರಹಗಳನ್ನು ಪೂಜಿಸುವವರು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸುವುದು ಮತ್ತು ಸರ್ಕಾರಿ/ಖಾಸಗಿ ಬಯಲು ಪ್ರದೇಶಗಳಲ್ಲಿ ಪ್ರತಿಷ್ಠಾಪಿಸಲು ಗಣೇಶ ಮೂರ್ತಿಗಳನ್ನು ಅತೀ ಸಮೀಪವಾಗುವಂತಹ ಮಾರ್ಗಗಳನ್ನು ಬಳಸಿಕೊಂಡು ಮಹಾನಗರ ಪಾಲಿಕೆ/ ಜಿಲ್ಲಾಡಳಿತ ಹತ್ತಿರದ ಸ್ಥಳೀಯ ಸಂಸ್ಥೆಗಳ/ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವತಿಯಿಂದ ಈಗಾಗಲೇ ನಿರ್ಮಿಸಲಾದ ಹೊಂಡ ಅಥವಾ ಮೊಬೈಲ್ ಟ್ಯಾಂಕ್ಗಳಲ್ಲಿ ಅಥವಾ ಕೃತಕ ವಿಸರ್ಜನಾ ಟ್ಯಾಂಕರ್ಗಳಲ್ಲಿ ವಿಸರ್ಜಿಸುವುದು.
ಶ್ರೀ ಗಣೇಶ ಚತುರ್ಥಿ ಆಚರಿಸುವ ದೇವಸ್ಥಾನ/ ಸಾರ್ವಜನಿಕ ಸ್ಥಳಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡುವುದು ಹಾಗೂ ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದು. ದರ್ಶನಕ್ಕಾಗಿ ಬರುವ ಭಕ್ತರಿಗೆ ಕನಿಷ್ಠ ಆರು ಅಡಿ ಸಾಮಾಜಿಕ ಅಂತರವನ್ನು ಗುರುತಿಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು. ಭಕ್ತಾಧಿಗಳು ಮತ್ತು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರತಕ್ಕದ್ದು. ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಠಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ನಗರಸಭೆ/ಪುರಸಭೆ, ತಾಲ್ಲೂಕು ಪಂಚಾಯಿತಿ/ಗ್ರಾಮ ಪಂಚಾಯಿತಿ ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸುವುದು.
ಗಣೇಶೋತ್ಸವ ಆಚರಣೆ ಕಾಲಕ್ಕೆ ಸಂದರ್ಭಕ್ಕನುಗುಣವಾಗಿ ಸರ್ಕಾರ, ಜಿಲ್ಲಾಡಳಿತ, ಪೊಲೀಸ್, ನಗರಸಭೆ/ಪುರಸಭೆ, ತಾಲ್ಲೂಕು ಪಂಚಾಯಿತಿ/ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆ/ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ/ನಿರ್ದೇಶನ ಹಾಗೂ ಸೂಚನೆಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು. ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಶ್ರೀ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದಲೇ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು. ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ/ಮಾರ್ಗಸೂಚಿಗಳನ್ನು ಉಲ್ಲಂಘಿಸುವವರ ವಿರುದ್ಧ ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ ಸೆಕ್ಷನ್ 188ರ ಅಡಿಯಲ್ಲಿ ಶಿಸ್ತಿನ/ಕಾನೂನು ಕ್ರಮ ಮತ್ತು ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಪಿ.ಎನ್.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.