ದೊಡ್ಡಬಳ್ಳಾಪುರ : ಪೋಷಣ್ ಮಾಸಾಚರಣೆ ಕಾರ್ಯಕ್ರಮದಡಿ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸಿ, ಅಂಗನವಾಡಿಗಳ ಮೂಲಕ ಆರೋಗ್ಯ ಸುಧಾರಣೆ ಸೇರಿದಂತೆ ಉತ್ತಮ ಪೌಷ್ಠಿಕಾಂಶ ಆಹಾರ ನೀಡುವ ಮೂಲಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಅಪೌಷ್ಠಿಕ ಮುಕ್ತ ಜಿಲ್ಲೆಯನ್ನಾಗಿಸಲು ಕೈಜೋಡಿಸಬೇಕು ಎಂದು ವಿವಿಧ ಇಲಾಖಾಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು “ಪೋಷಣ್ ಅಭಿಯಾನ ಯೋಜನೆ ಅಡಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಷ್ಟ್ರೀಯ ಪೋಷಣಾ ಯೋಜನೆಯಡಿ ಸೆಪ್ಟೆಂಬರ್ 8 ರಿಂದ 30 ರವರೆಗೆ ಪೋಷಣ್ ಮಾಸಾಚರಣೆ ಆಚರಿಸಲಾಗುತ್ತಿದ್ದು, ಪೋಷಣ್ ಮಾಸಾಚರಣೆ ಕಾರ್ಯಕ್ರಮದಡಿ ತೀವ್ರ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರುತಿಸುವಿಕೆ ಮತ್ತು ಚಿಕಿತ್ಸೆ ನೀಡುವುದು ಹಾಗೂ ಕೈತೋಟಗಳನ್ನು ಬೆಳೆಸಿ ಪೌಷ್ಠಿಕ ಆಹಾರ ಸೇವಿಸಲು ಉತ್ತೇಜಿಸುವಂತಹ ಚಟುವಟಿಕೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರಲ್ಲದೆ, ಜಿಲ್ಲೆಯ 250 ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಠಿಕ ಕೈತೋಟಗಳ ನಿರ್ಮಿಸಿ, ಮಕ್ಕಳ ಪೋಷಣೆ ಜೊತೆಗೆ ಸಸ್ಯಗಳ ಪೋಷಣೆಯನ್ನು ನಿರ್ವಹಿಸುವಂತೆ ತಿಳಿಸಿದರು ಹಾಗೂ ಹಸಿರು ಸೊಪ್ಪು, ನುಗ್ಗೆ ಗಿಡ, ಪಪ್ಪಾಯ ಸೇರಿದಂತೆ ಸ್ಥಳೀಯವಾಗಿ ದೊರೆಯುವ ಗಿಡಗಳಿಗೆ ಪ್ರಾತಿನಿಧ್ಯ ನೀಡಿ ಅನುಕೂಲವಾಗುವಂತೆ ಕೈ ತೋಟವನ್ನು ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಪೂರ್ಣಗೊಳಿಸಲು ಸೂಚಿಸಿದರು.
ತಾಯಿ ಮತ್ತು ಮಗುವಿನ ಆರೋಗ್ಯ ಉತ್ತಮ ಪಡಿಸುವ ಮಹತ್ವಾಕಾಂಕ್ಷೆ ಯೋಜನೆ ಇದಾಗಿದ್ದು, ವಿವಿಧ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಿಗೆ ಸೂಚಿಸಿದರು.
ಪೋಷಣ್ ಅಭಿಯಾನವನ್ನು ಜಿಲ್ಲೆಯ ಎಲ್ಲಾ ಅಂಗನವಾಡಿಗಳಲ್ಲಿ ಪರಿಣಾಕಾರಿಯಾಗಿ ಹಮ್ಮಿಕೊಳ್ಳಬೇಕು ಹಾಗೂ ಜಿಲ್ಲೆಯ ಎಲ್ಲಾ ಅರ್ಹ ತಾಯಿ ಮತ್ತು ಮಗು ಫಲಾನುಭವಿಗಳಿಗೆ ಉಪಯೋಗವಾಗುವಂತೆ ಅಧಿಕಾರಿಗಳು, ಸಿಬ್ಬಂದಿ ಕಾರ್ಯನಿರ್ವಹಿಸಬೇಕು ಎಂದರು.
ಅಂಗನವಾಡಿಗಳಲ್ಲಿ, ಶುದ್ಧ ಕುಡಿಯುವ ನೀರು, ಸ್ವಚ್ಛತೆ ಮತ್ತು ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು ಎಂದರಲ್ಲದೆ, ಸ್ವಚ್ಛತೆ ಸೇರಿದಂತೆ ಉತ್ತಮ ಆರೋಗ್ಯದ ಮಹತ್ವ ಕುರಿತು ಜಾಗೃತಿ ಶಿಕ್ಷಣ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಪುಷ್ಪ.ಜಿ.ರಾಯ್ಕರ್ ಅವರು ಪೋಷಣ್ ಅಭಿಯಾನ ಕಾರ್ಯಕ್ರಮದ ರೂಪುರೇಷೆಗಳ ಕುರಿತ ಮಾಹಿತಿಯನ್ನು ಸಭೆಗೆ ನೀಡಿದರು.
ತಾಯಿ ಮತ್ತು ಮಗುವಿನಲ್ಲಿನ ಅಪೌಷ್ಠಿಕತೆ ನಿವಾರಣೆ ಮಾಡುವುದು, ಆರೋಗ್ಯ ಸುಧಾರಣೆ, ಸ್ವಚ್ಛತೆ ಸೇರಿದಂತೆ ಹಲವು ಆಯಾಮಗಳಲ್ಲಿ ತಾಯಿ ಮಗುವಿನ ಆರೋಗ್ಯವನ್ನು ಉತ್ತಮ ಪಡಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರಲ್ಲದೆ, ಪೋಷಣ್ ಅಭಿಯಾನವು ಸೆಪ್ಟೆಂಬರ್ ತಿಂಗಳ ಅಂತ್ಯದವರೆಗೂ ಜಿಲ್ಲಾ, ತಾಲ್ಲೂಕು ಮಟ್ಟದಲ್ಲಿ, ಅಂಗನವಾಡಿಗಳಲ್ಲಿ ನಡೆಯಲಿದ್ದು, ತಾಯಂದಿರಲ್ಲಿ ರಕ್ತಹೀನತೆ ತಪಾಸಣೆ ನಡೆಸಿ, ಪೌಷ್ಠಿಕ ಆಹಾರಗಳ ಕುರಿತು ಮಾಹಿತಿ ನೀಡಲಾಗುವುದು ಹಾಗೂ ಸಿರಿಧಾನ್ಯಗಳ ಬಳಕೆ ಹಾಗೂ ಮಹತ್ವವನ್ನು ತಿಳಿಸುವ ಸಂಬಂಧ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ವಿನುತಾರಾಣಿ.ಬಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ, ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

