ದೊಡ್ಡಬಳ್ಳಾಪುರ: ರಾಜ್ಯವನ್ನು ಮಾದವಸ್ತುಗಳ ಮಾರಾಟದಿಂದ ಮುಕ್ತವಾಗಿಸುವ ನಿಟ್ಟಿನಲ್ಲಿ ಪೊಲೀಸರು ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಪೊಲೀಸರ ಕೆಲಸಕ್ಕೆ ಸಾರ್ವಜನಿಕರ ಸಹಕಾರವು ಮುಖ್ಯ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್ ಹೇಳಿದರು.
ಅವರು ನಗರದಲ್ಲಿ ಪೊಲೀಸ್ ಇಲಾಖೆ ಹಾಗೂ ವಿವಿಧ ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಬುಧವಾರ ಪ್ರಾರಂಭವಾದ ಭರವಸೆ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ಜಿಲ್ಲೆಯಲ್ಲಿ ಗಾಂಜಾ ಸೊಪ್ಪು ಬೆಳೆಸುತ್ತಿದ್ದ ಹಾಗೂ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದವರ ವಿರುದ್ದ 40 ಪ್ರಕರಣಗಳು ದಾಖಲಾಗಿದ್ದು,52 ಜನರನ್ನು ಬಂಧಿಸಲಾಗಿದೆ. ಇದಲ್ಲದೆ ಜಿಲ್ಲೆಗೆ ಮಾದಕವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಪ್ರಮುಖ ಆರೋಪಿ ಇಸ್ಮಾಯಿಲ್ಖಾನ್ ಎಂಬಾತನನ್ನು ಬಂಧಿಸಲಾಗಿದೆ ಎಂದರು.
ಲಾಕ್ಡೌನ್ ನಂತರ ರೈತರು ಸೇರಿದಂತೆ ಹಲವಾರು ಜನರ ಉದ್ಯೋಗಗಳಲ್ಲಿ ಸಾಕಷ್ಟು ಬದಲಾವಣೆಯಾಗಿವೆ.ಸಾಕಷ್ಟು ಜನ ಉದ್ಯೋಗಗಳನ್ನು ಕಳೆದುಕೊಂಡಿದ್ದಾರೆ. ಇದಲ್ಲದೆ ನಗರ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಅಂತರವು ಇದೆ. ಈ ಎಲ್ಲವನ್ನು ಸರಿಪಡಿಸುವ ಮೂಲಕಿ ಪೊಲೀಸ್ ಇಲಾಖೆ ಜನಸ್ನೇಹಿಯಾಗಿಯು ಕೆಲಸ ಮಾಡುವ ನಿಟ್ಟಿನಲ್ಲಿ ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಕೆಲಸ ಆರಂಭಿಸಲಾಗಿದೆ. ಈ ನಿಟ್ಟಿನಲ್ಲಿ ಭರವಸೆ ತಂಡಲ್ಲಿ ಶಿಕ್ಷಣ, ಕೃಷಿ,ಕ್ರೀಡೆ ಹಾಗೂ ಮಹಿಳೆಯರಿಗೆ ಸ್ವಯಂ ಉದ್ಯೋಗ ಕಲ್ಪಿಸುವಲ್ಲಿ ಪರಿಣಿತಿ ಹೊಂದಿರುವ ತಂಡದ ಸದಸ್ಯರು ಕೆಲಸ ಮಾಡಲಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಡಿವೈಎಸ್ಪಿ ಟಿ.ರಂಗಪ್ಪ, ಮಾದಕವಸ್ತುಗಳ ಮಾರಾಟಗಾರರನ್ನು ಬಂಧಿಸುವ ಕೆಲಸ ಪೊಲೀಸ್ ಇಲಾಖೆ ಮಾಡುತ್ತದೆ.ಆದರೆ ಪೋಷಕರು ನಮ್ಮ ಮಕ್ಕಳು ಏನು ಮಾಡುತ್ತಿದ್ದಾರೆ ಎನ್ನುವ ಕಡೆಗೆ ಸದಾ ನಿಗಾವಹಿಸಬೇಕು.ಯುವ ಸಮುದಾಯ ಚಟಕ್ಕೆ ದಾಸರಾಗದಂತೆ ನೋಡಿಕೊಳ್ಳುವಲ್ಲಿ ಸಾರ್ವಜನಿಕರ ಸಹಕಾರವು ಮುಖ್ಯ ಎಂದರು.
ಇದೇ ಸಂದರ್ಭದಲ್ಲಿ ಇತ್ತೀಚೆಗೆ ತಾಲ್ಲೂಕಿನ ಹುಲಿಕುಂಟೆ ಗ್ರಾಮದ ತೋಟದ ಮನೆ ದರೋಡೆ ಸಂದರ್ಭದಲ್ಲಿ ಹತ್ಯೆ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಶ್ರಮಿಸಿದ ಸಿಬ್ಬಂದಿಗೆ ಪ್ರಶಂಸಾ ಪತ್ರಗಳನ್ನು ನೀಡಿ ಅಭಿನಂದಿಸಲಾಯಿತು.
ಕಾರ್ಯಕ್ರಮದಲ್ಲಿ ಐಜಿಪಿ ಸೀಮಂತ್ ಕುಮಾರ್ ಸಿಂಗ್, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀಗಣೇಶ್, ಸರ್ಕಲ್ ಇನ್ಸ್ಪೆಕ್ಟರ್ ರಾಘವ ಎಸ್.ಗೌಡ, ಡಾ.ಮಲ್ಲಿಕಾರ್ಜುನ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಜರಿದ್ದರು.

