ದೊಡ್ಡಬಳ್ಳಾಪುರ: ಕರೊನಾ ವೈರಾಣು ಸೋಂಕು ಪಸರಿಕೆ ಭೀತಿ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ, ಜಿಲ್ಲೆಯಲ್ಲಿ ಜಾರಿಯಲ್ಲಿರುವ ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ,ಚುನಾವಣಾ ಆಯೋಗ ಹಾಗೂ ಕೋವಿಡ್-19 ಮಾರ್ಗಸೂಚಿ ಅನ್ವಯ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಿಸಲು ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ನಡೆದ 65ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್-19 ಸಾಂಕ್ರಾಮಿಕ ಬಿಕ್ಕಟ್ಟನಿಂದಾಗಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳು, ಮೆರವಣಿಗೆ, ಜಾಥಾ ಕಾರ್ಯಕ್ರಮ ಆಯೋಜಿಸುವಂತಿಲ್ಲಎಂದರಲ್ಲದೆ, ಕೋವಿಡ್-19 ಮುನ್ನೆಚ್ಚರಿಕೆ ಕ್ರಮವಾಗಿ ಕಡ್ಡಾಯವಾಗಿ ಮುಖಗವಸು ಧರಿಸಬೇಕು ಹಾಗೂ ಕಾರ್ಯಕ್ರಮದಲ್ಲಿ ಚಿಕ್ಕ ಮಕ್ಕಳು ಸೇರಿದಂತೆ 60 ವರ್ಷ ಮೇಲ್ಪಟ್ಟ ಹಿರಿಯರು ಭಾಗವಹಿಸುವಂತಿಲ್ಲ ಎಂದು ತಿಳಿಸಿದರು.
ಕಳೆದ ವರ್ಷದಂತೆ ಈ ಬಾರಿಯೂ ಅರ್ಥಪೂರ್ಣವಾಗಿ, ಶಿಸ್ತು, ಸಂಯಮ ಹಾಗೂ ಸರಳವಾಗಿ ಕನ್ನಡ ರಾಜ್ಯೋತ್ಸವ ದಿನಾಚರಣೆಯಯನ್ನು ಆಚರಿಸಬೇಕೆಂದರಲ್ಲದೆ, ನಿಗದಿಯಂತೆ ನವೆಂಬರ್ 01 ರಂದು ಬೆಳಿಗ್ಗೆ 9.00 ಗಂಟೆಗೆ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಕಾರ್ಯಕ್ರಮ ನಡೆಯಲಿರುವ ಕ್ರೀಡಾಂಗಣದ ಸುತ್ತ-ಮುತ್ತ ಸ್ವಚ್ಛಗೊಳಿಸಿ, ವೇದಿಕೆಯನ್ನು ಅಲಂಕರಿಸುವಂತೆ ಪುರಸಭೆ ಅಧಿಕಾರಿಗಳಿಗೆ ತಿಳಿಸಿದರು. ಹಾಗೂ ಧ್ವನಿ ವರ್ಧಕ ವ್ಯವಸ್ಥೆ ಮಾಡಲು ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು.
ಕಡ್ಡಾಯವಾಗಿ ಸಾಮಾಜಿಕ ಅಂತರ, ಮಾಸ್ಕ್ ಧರಿಸುವಿಕೆ ಹಾಗೂ ಜನಸಂದಣಿ ಉಂಟಾಗದಂತೆ ಕ್ರಮವಹಿಸಬೇಕು ಎಂದರಲ್ಲದೆ, ಕಾರ್ಯಕ್ರಮಕ್ಕೆ ಆಗಮಿಸುವ ಅತಿಥಿಗಳು, ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರನ್ನು ಪ್ರವೇಶ ದ್ವಾರದಲ್ಲಿಯೇ ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಬೇಕು, ಸ್ಯಾನಿಟೈಸರ್ ವ್ಯವಸ್ಥೆ ಮಾಡುವುದು ಕಡ್ಡಾಯವೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗೆ ತಿಳಿಸಿದರು.
ಕನ್ನಡ ರಾಜ್ಯೋತ್ಸವ ಆಚರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳುವುದರ ಜೊತೆಗೆ ಜಿಲ್ಲಾ ಮಟ್ಟದ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಹಾಜರಿರುವಂತೆ ವಿವಿಧ ಇಲಾಖೆಗಳ ಜಿಲ್ಲಾ
ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್, ಉಪವಿಭಾಗಾಧಿಕಾರಿ ಅರುಳ್ ಕುಮಾರ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪನಿರ್ದೇಶಕ ಎನ್.ಎಸ್.ಮಹೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ್ ಆರಾಧ್ಯ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

