ದೊಡ್ಡಬಳ್ಳಾಪುರ: ವಿಧಾನಪರಿಷತ್ ಚುನಾವಣೆ ಬಳಿಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ಹೋರಾಟವನ್ನು ರೂಪಿಸಲಾಗುವುದು. ಖಾಸಗಿ ಶಿಕ್ಷಕರಿಗೆ ಕೋವಿಡ್ ವಿಶೇಷ ಪ್ಯಾಕೇಜ್ ಮತ್ತು ಆರೋಗ್ಯ ವಿಮೆ, ಸರಕಾರಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಲು ಮೊದಲ ಆದ್ಯತೆಯ ಹೋರಾಟವಾಗಿರುತ್ತದೆ ಎಂದು ವಿಧಾನ ಪರಿಷತ್ ಮಾಜಿ ಉಪಸಭಾಪತಿ ಪುಟ್ಟಣ ತಿಳಿಸಿದರು.
ಅವರು ದೊಡ್ಡಬಳ್ಳಾಪುರ ತಾಲೂಕಿನ ಸರಕಾರಿ, ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಮತ್ತು ಪದವಿ ಪದವಿ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರು, ಖಾಸಗಿ ಶಾಲಾ ಕಾಲೇಜು ಆಡಳಿತ ಪದಾಧಿಕಾರಿಗಳೊಂದಿಗೆ ನಡೆಸಿದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ನಾನು ಯಾವುದೇ ಪಕ್ಷದಲ್ಲಿದ್ದರೂ ಸಹ ಅದೇ ಪಕ್ಷದ ಶಿಕ್ಷಣ ಸಚಿವರ ಮತ್ತು ಮುಖ್ಯಮಂತ್ರಿಗಳ ವಿರುದ್ದ ಹೋರಾಟ ಮಾಡಿ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಿದ್ದೇನೆ. ಹೆಚ್ಚುವರಿ ಶಿಕ್ಷಕರ ಸಮಸ್ಯೆ, ಖಾಸಗಿ ಶಾಲೆಗಳ ನವೀಕರಣ, ಖಾಸಗಿ ಶಾಲಾ ಕಾಲೇಜು ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಪಿಎಫ್ ಸೌಲಭ್ಯ ಮತ್ತು ಬ್ಯಾಂಕುಗಳ ಮೂಲಕ ವೇತನ, ಶಿಕ್ಷಕರ ವರ್ಗಾವಣೆ ಮುಂತಾದ ಹಲವಾರು ವಿಚಾರಗಳಲ್ಲಿ ನಾನು ಶಿಕ್ಷಕರ ಮತ್ತು ಉಪನ್ಯಾಸಕರ ಪರವಾಗಿ ಹೋರಾಟ ಮಾಡಿದ್ದೇನೆ. ಶಿಕ್ಷಕರು ಮತ್ತು ಉಪನ್ಯಾಸಕರು ಇನ್ನು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳನ್ನು ನಿವಾರಿಸಲು ನಿರಂತರವಾಗಿ ಹೋರಾಟ ಮಾಡುತ್ತಿರುವ ಶಿಕ್ಷಕರ ಮತ್ತು ಉಪನ್ಯಾಸಕರ ಸಂಘಟನೆಗಳ ಪರವಾಗಿ ನಿಂತು ಹೋರಾಟವನ್ನು ಮುಂದುವರಿಸುತ್ತೇನೆ ಎಂದರು.
ದೊಡ್ಡಬಳ್ಳಾಪುರ ತಾಲೂಕು ಖಾಸಗಿ ಶಾಲಾ ಆಡಳಿತ ಮಂಡಲಿ ಅಧ್ಯಕ್ಷ ಎ.ಸುಬ್ರಮಣಿ ಮಾತನಾಡಿ, ಅನುದಾನ ರಹಿತ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಕೋವಿಡ್ ಪರಿಹಾರ ವಿಶೇಷ ಪ್ಯಾಕೇಜ್ ಅಗತ್ಯವಾಗಿ ಬೇಕಾಗಿದೆ. ಸರಕಾರಿ ಶಾಲಾ ಕಾಲೇಜು ಶಿಕ್ಷಕರು ಮತ್ತು ಉಪನ್ಯಾಸಕರಿಗೆ ನೀಡುವಂತೆ ವೈದ್ಯಕೀಯ ಸೌಲಭ್ಯ ಖಾಸಗಿ ಶಿಕ್ಷಕರಿಗೂ ದೊರೆಯಬೇಕಾಗಿದೆ. ಇದಕ್ಕಾಗಿ ಖಾಸಗಿ ಶಿಕ್ಷಕರಿಗೆ ಆರೋಗ್ಯ ವಿಮೆ ಜಾರಿಗೆ ಬರಬೇಕಾಗಿದೆ. ಶಾಲಾ ಕಾಲೇಜುಗಳ ಪ್ರಾರಂಭ ಮತ್ತು ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಸರಕಾರ ಸೂಕ್ತ ಮಾರ್ಗ ಸೂಚಿಗಳನ್ನು ನೀಡಬೇಕಾಗಿದೆ. ಖಾಸಗಿ ಅಡಳಿತ ಮಂಡಲಿ ಮತ್ತು ಖಾಸಗಿ ಶಿಕ್ಷಕರ ಸಮಸ್ಯೆಗಳಿಗೆ ಸರಕಾರ ಸ್ಪಂದಿಸಬೇಕಾಗಿದೆ ಎಂದರು.
ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯ ಪರಿಷತ್ ಸದಸ್ಯ ಟಿ.ಕೆ.ಪ್ರಕಾಶ್ ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ರಾಮನಗರ ಜಿಲ್ಲೆಯ ಶಿಕ್ಷಕರು ಮತ್ತು ಉಪನ್ಯಾಸಕರನ್ನು ಬೆಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಕರ್ತವ್ಯ ನಿಯೋಜನೆ ಮಾಡಲಾಗಿತ್ತು. ಈ ನಿಯೋಜನೆ ವಿರುದ್ದ ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ ಹೋರಾಟ ಮಾಡಿ ನಿಯೋಜನೆ ರದ್ದುಗೊಳಿಸಿದರು.
ಪ್ರಸ್ತುತ ಸರಕಾರಿ ನೌಕರರಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ಬರಬೇಕಾಗಿದೆ. ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗೆ ಮತ್ತು ಪ್ರೌಢಶಾಲೆಯಿಂದ ಪದವಿ ಪೂರ್ವ ಕಾಲೇಜುಗಳಿಗೆ ಬಡ್ತಿ ಪಡೆದಿರುವ ಸಹ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಆಗಿರುವ ಬಡ್ತಿ ತಾರತಮ್ಯ ನಿವಾರಣೆ ಆಗಬೇಕಾಗಿದೆ. ಈಗ ಹೊಸ ಶಿಕ್ಷಣ ನೀತಿ ಜಾರಿಗೆ ಬರುತ್ತಿದೆ. ಅದರೆ ಶಿಕ್ಷಕರ ಮತ್ತು ಉಪನ್ಯಾಸಕರ ಸಮಸ್ಯೆಗಳು ಮಾತ್ರ ನಿರಂತರವಾಗಿ ಮುಂದುವರಿಯುತ್ತಿವೆ ಎಂದರು.
ವಕೀಲರಾದ ರವಿ ಮಾವಿನಕುಂಟೆ ಮಾತನಾಡಿ, ಶಾಲಾ ಕಾಲೇಜುಗಳ ಶಿಕ್ಷಕರ ಮತ್ತು ಉಪನ್ಯಾಸಕರ ಸಮಸ್ಯೆಗಳನ್ನು ಸ್ಪಷ್ಟವಾಗಿ ಅರಿತವರು ಪುಟ್ಟಣ್ಣ ಆಗಿದ್ದಾರೆ. ವಿದ್ಯಾರ್ಥಿ ನಾಯಕರಾಗಿ, ಬೆಂಗಳೂರು ವಿಶ್ವವಿದ್ಯಾಲಯ ಸೆನೆಟ್ ಸದಸ್ಯರಾಗಿ, ಸತತ ಮೂರು ಬಾರಿ ವಿಧಾನಪರಿಷತ್ ಸದಸ್ಯರಾಗಿ ಮತ್ತು ಉಪಸಭಾಪತಿಯಾಗಿ ಉತ್ತಮ ಅನುಭವ ಪಡೆದಿದ್ದಾರೆ. ಪುಟ್ಟಣ್ಣ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಪರವಾಗಿ ಕೆಲಸ ಮಾಡಲು ಅವರು ನಿರಂತರವಾಗಿ ವಿಧಾನಪರಿಷತ್ತಿಗೆ ಆಯ್ಕೆಯಾಗಬೇಕಾಗಿದೆ. ಪ್ರಸ್ತುತ ಚುನಾವಣೆಯಲ್ಲೂ ಶಿಕ್ಷಕರು ಮತ್ತು ಉಪನ್ಯಾಸಕರು ಅವರ ಪರವಾಗಿ ಇದ್ದಾರೆ ಎಂದರು.
ಸಭೆಯಲ್ಲಿ ದೊಡ್ಡಬಳ್ಳಾಪುರ ಖಾಸಗಿ ಶಾಲೆಗಳ ಒಕ್ಕೂಟದ ಕಾರ್ಯದರ್ಶಿ ರಮೇಶ್, ಖಜಾಂಚಿ ಶ್ರೀನಿವಾಸಮೂರ್ತಿ, ಪ್ರೌಢಶಾಲಾ ಸಹಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಪ್ರಸನ್ನಕುಮಾರ್, ಉಪಪ್ರಾಂಶುಪಾಲ ಶ್ರೀನಿವಾಸರೆಡ್ಡಿ, ದೊಡ್ಡಬಳ್ಳಾಪುರ ತಾಲೂಕಿನ ಸರಕಾರಿ, ಖಾಸಗಿ ಅನುದಾನಿತ, ಖಾಸಗಿ ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಕಾಲೇಜುಗಳ ಶಿಕ್ಷಕರ ಮತ್ತು ಉಪನ್ಯಾಸಕರ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಖಾಸಗಿ ಶಿಕ್ಷಣ ಸಂಸ್ಥೆಗಳ ಪದಾಕಾರಿಗಳು, ಶಿಕ್ಷಕರು ಮತ್ತು ಉಪನ್ಯಾಸಕರು, ಮುಖ್ಯಶಿಕ್ಷಕರು ಮತ್ತು ಪ್ರಾಂಶುಪಾಲರು ಭಾಗವಹಿಸಿದ್ದರು.

