ದೊಡ್ಡಬಳ್ಳಾಪುರ: ಕೇಂದ್ರ,ರಾಜ್ಯ ಸರ್ಕಾರಗಳ ಈ ಜನವಿರೋಧಿ, ಕಾರ್ಮಿಕ ವಿರೋಧಿ, ರೈತ ವಿರೋಧಿ ಮತ್ತು ರಾಷ್ಟ್ರ ವಿರೋಧಿ ನೀತಿಗಳ ವಿರುದ್ದ ವಿವಿಧ ಕೇಂದ್ರ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ನ.26 ರಂದು 20ನೇ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯುತ್ತಿರುವ ಹಿನ್ನೆಲೆಯಲ್ಲಿ ಶನಿವಾರ ನಗರದ ಸಿಪಿಐಎಂ ಕಚೇರಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರ ಸಭೆ ನಡೆಯಿತು.
ಸಭೆಯಲ್ಲಿ ಮಾತನಾಡಿದ ಜಿಲ್ಲಾ ಸಿಪಿಐಎಂ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ,ಕೇಂದ್ರ,ರಾಜ್ಯ ಸರ್ಕಾರಗಳ ವಿಫಲ ಕ್ರಮಗಳಿಂದ ‘ಕೋವಿಡ್ ಸಾಂಕ್ರಾಮಿಕ ರೋಗ’ ಜನ ಸಮೂಹದ ನಡುವೆ ವ್ಯಾಪಕವಾಗಿ ವಿಸ್ತರಿಸುತ್ತಿದೆ. ಕೋವಿಡ್ ಪರಿಹಾರ ಕಾರ್ಯಗಳನ್ನು ಸಮರ್ಪಕವಾಗಿ ಕೈಗೊಳ್ಳದ ಪರಿಣಾಮ ದುಡಿಯುವ ಜನರು ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುವಂತಾಗಿದೆ. ಬಂಡವಾಳಗಾರರಿಗೆ ಕೋವಿಡ್ ರಿಯಾಯಿತಿಗಳನ್ನು ಪ್ರಕಟಿಸಿದ ಕೇಂದ್ರ,ರಾಜ್ಯ ಸರ್ಕಾರಗಳು ಲಾಕ್ಡೌನ್ನಿಂದಾಗಿ ಸಂತ್ರಸ್ತರಾದ ವಲಸೆ ಕಾರ್ಮಿಕರು, ಅಸಂಘಟಿತ ಕಾರ್ಮಿಕರು, ಕೆಲಸ ಕಳೆದುಕೊಂಡ ಕೈಗಾರಿಕಾ ಕಾರ್ಮಿಕರು, ಕೋವಿಡ್ ವಾರಿಯರ್ಸ್ಗಳಾಗಿ ಕೆಲಸ ಮಾಡುತ್ತಿರುವ ಸ್ಕೀಂ ನೌಕರರು, ಪಂಚಾಯಿತಿ, ಮುನ್ಸಿಪಲ್ ಕಾರ್ಮಿಕರು, ಆರೋಗ್ಯ ಕಾರ್ಯಕರ್ತರ ಬದುಕಿನ ರಕ್ಷಣೆಗೆ ನಿಲ್ಲಲಿಲ್ಲ. ಇದರಿಂದ ದೇಶದಲ್ಲಿ ಲಾಕ್ಡೌನ್ ನಂತರ ಸಂಘಟಿತ ಅಸಂಘಟಿತ ವಲಯದ 14 ಕೋಟಿ ಕಾರ್ಮಿಕರಿಗೆ ಉದ್ಯೋಗ ಇಲ್ಲದಂತಾಗಿದೆ. ಜನರ ಆದಾಯಗಳು ಕುಸಿಯುತ್ತಿದೆ. ಜೀವನ ಭದ್ರತೆಗಳು ದುರ್ಬಲಗೊಳ್ಳುತ್ತಿವೆ. ಆರೋಗ್ಯ ಶಿಕ್ಷಣ ದುಬಾರಿಯಾಗುತ್ತಿದೆ, ದೇಶದ ಆರ್ಥಿಕತೆ ಕುಸಿಯುತ್ತಿದೆ ಎಂದರು.
ಸಂಕಷ್ಟದ ಪರಿಸ್ಥಿತಿಯಲ್ಲಿ ದೇಶದ ಜನರ ರಕ್ಷಣೆಗೆ ನಿಲ್ಲಬೇಕಾದ ಕೇಂದ್ರ ಸರ್ಕಾರ ಕೋವಿಡ್ ಸಂದರ್ಭವನ್ನು ಬಳಸಿ ವೇಗವಾಗಿ ತನ್ನ ‘ನವ ಉದಾರವಾದಿ ಆರ್ಥಿಕ ನೀತಿಗಳ’ ಮೂಲಕ ಕೃಷಿ, ಶಿಕ್ಷಣ, ಸಾರ್ವಜನಿಕ ಕ್ಷೇತ್ರದ ಉದ್ದಿಮೆ ಮತ್ತು ಸೇವೆಗಳನ್ನು ಕಾರ್ಪೊರೇಟ್ ಬಂಡವಾಳಗಾರರ ಲಾಭಕ್ಕೆ ಖಾಸಗೀಕರಣ ಮಾಡುತ್ತಿದೆ. ಕಾರ್ಮಿಕ ವರ್ಗ ದೇಶದಲ್ಲಿ ಸ್ವತಂತ್ರ ಪೂರ್ವದಿಂದಲೂ ತ್ಯಾಗ ಬಲಿದಾನಗಳಿಂದ ಸಮರಧೀರ ಹೋರಾಟಗಳಿಂದ ಪಡೆದ ಕಾರ್ಮಿಕ ಕಾನೂನುಗಳಿಗೆ ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿಯಾಗಿ ತಿದ್ದುಪಡಿ ಮಾಡಿ ಸಂಸತ್ತಿನಲ್ಲಿ ನಾಲ್ಕು ಸಂಹಿತೆಗಳಾಗಿ ರೂಪಿಸುವ ಮೂಲಕ ಕಾರ್ಮಿಕರ ಹಕ್ಕುಗಳನ್ನು ಮೊಟಕುಗೊಳಿಸಲಾಗುತ್ತಿದೆ ಎಂದು ದೂರಿದರು.
ಕಾರ್ಮಿಕ, ರೈತ ವಿರೋಧಿ ನೀತಿಗಳನ್ನು ವಿರುದ್ಧ ನಡೆಯುತ್ತಿರುವ ಮುಷ್ಕರಕ್ಕೆ ಬೆಂಬಲ ಸೂಚಿಸಲು ನಡೆದ ಸಭೆಯಲ್ಲಿ ರಾಜ್ಯ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಹನುಮೇಗೌಡ, ಪ್ರಾಂತರೈತ ಸಂಘದ ತಾಲ್ಲೂಕು ಕಾರ್ಯದರ್ಶಿ ಸಿ.ರಾಮಕೃಷ್ಣ, ಸಿಪಿಐಎಂ ಕಾರ್ಯದರ್ಶಿ ಪಿ.ಎ.ವೆಂಕಟೇಶ್, ಶಿವಾರೆಡ್ಡಿ, ತಾಲ್ಲೂಕು ಕನ್ನಡ ಪಕ್ಷದ ಅಧ್ಯಕ್ಷ ಸಂಜೀವನಾಯ್ಕ್, ಕರ್ನಾಟಕ ರಾಜ್ಯ ನೇಕಾರರ ಹಿತ ರಕ್ಷಣಾ ಸಮಿತಿ ಮಲ್ಲೇಶ್, ಎಐಟಿಯುಸಿಯ ಚಂದ್ರಕಾಂತ್, ಸಿಐಟಿಯು ತಾಲ್ಲೂಕು ಸಂಚಾಲಕರಾದ ರೇಣುಕಾರಾದ್ಯ, ಕಾಂಗ್ರೆಸ್ ಕಾರ್ಮಿಕ ಘಟಕದ ತಾಲ್ಲೂಕು ಅಧ್ಯಕ್ಷ ಶಂಕರ್, ದಲಿತ ಸಂಘಟನೆಯ ಜಿಲ್ಲಾ ಸಂಚಾಲಕ ರಾಜುಸಣ್ಣಕ್ಕಿ ಮುಂತಾದವರು ಭಾಗವಹಿಸಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

