ಬೆಂಗಳೂರು: ಭಾಷೆ, ನೆಲ, ಸಂಸ್ಕೃತಿ ವಿಷಯದಲ್ಲಿ ಭಾರತೀಯರಿಗೆ ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳುವ ಶಕ್ತಿಯಿದ್ದು, ಸಂವಿಧಾನಕ್ಕೆ ಗೌರವ ಕೊಡುವುದರೊಂದಿಗೆ ನಮ್ಮ ಕರ್ತವ್ಯ ನಿಭಾಯಿಸುತ್ತ, ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಯುವಜನತೆಯು ಕೈಗೂಡಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಹಯೋಗದೊಂದಿಗೆ ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಏಪರ್ಡಿಸಲಾಗಿದ್ದ “ಜಿಲ್ಲಾ ಕವಿ ಸಮ್ಮೇಳನ ಕಾರ್ಯಕ್ರಮ”ವನ್ನು ದೀಪ ಬೆಳಗುವ ಮೂಲಕ ಉದ್ಘಾಟಿಸಿ, ಅವರು ಮಾತನಾಡಿದರು.
ಹನಿ, ಹನಿ ಕೂಡಿದರೆ ಹಳ್ಳ ಎಂಬ ಉಕ್ತಿಯಂತೆ ದೇಶಾದ್ಯಂತ ನಡೆಯುತ್ತಿರುವ “ರಾಷ್ಟ್ರೀಯ ಐಕ್ಯತಾ ಸಪ್ತಾಹ”ವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಆಯೋಜನೆ ಮಾಡಿರುವುದು ಉತ್ತಮ ಕೆಲಸವೆಂದರಲ್ಲದೆ, ಆನ್ಲೈನ್ ಮೂಲಕ ಕವಿ ಸಮ್ಮೇಳನ ಕಾರ್ಯಕ್ರಮವನ್ನು ಚಿತ್ರೀಕರಿಸಲು ತಿಳಿಸಿದರು ಹಾಗೂ ಈ ಕಾರ್ಯಕ್ರಮ ಜಿಲ್ಲೆಗೆ, ಜಿಲ್ಲಾಡಳಿತಕ್ಕೆ ಸೀಮಿತವಾಗದೆ, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ, ಯುವಜನತೆಗೆ ತಲುಪುವಂತಾಗಬೇಕು ಎಂದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ದೊಡ್ಡಬಳ್ಳಾಪುರ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಪ್ರಮೀಳ ಮಹಾದೇವ್ ಮಾತನಾಡಿ, ದೇಶ ಎಷ್ಟೇ ಮುಂದುವರೆದರೂ ಜಾತೀಯತೆ ಎಂಬುದು ನಿರ್ಮೂಲನೆಯಾಗದಿರುವ ಕುರಿತು ವಿಷಾದ ವ್ಯಕ್ತಪಡಿಸಿದರಲ್ಲದೆ, ಎಲ್ಲರೂ ಸರ್ವ ಸಮಾನರೆಂಬುದೇ ಐಕ್ಯತಾ ಸಪ್ತಾಹದ ಉದ್ದೇಶವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಲಕ್ಷ್ಮೀ ಗಣೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಮಂಜುನಾಥ.ಬಿ.ಆರಾಧ್ಯ, ನೆಲಮಂಗಲ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶಂಕರಮೂರ್ತಿ, ದೇವನಹಳ್ಳಿ ತಾಲ್ಲೂಕು ಕನ್ನಡ ಪರಿಷತ್ತಿನ ಅಧ್ಯಕ್ಷರಾದ ನಂಜೇಗೌಡರು, ಹೊಸಕೋಟೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬೆಟ್ಟಳ್ಳಿ ಗೋಪಿನಾಥ್ ಸೇರಿದಂತೆ ನಾಲ್ಕು ತಾಲ್ಲೂಕುಗಳ ಕವಿಗಳು ಹಾಗೂ ಸಾಹಿತಿಗಳು ಉಪಸ್ಥಿತರಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

