ದೊಡ್ಡಬಳ್ಳಾಪುರ: ರಾಜ್ಯದಲ್ಲಿ ನೇಕಾರರು ಸಂಕಷ್ಟದಲ್ಲಿದ್ದು, ರಾಜ್ಯ ಸರ್ಕಾರ ನೇಕಾರರನ್ನು ನಿರ್ಲಕ್ಷಿಸುತ್ತಿದೆ. ನೇಕಾರರಿಗೆ ನೆರವಾಗುವ ನಿಟ್ಟಿನಲ್ಲಿ ನೇಕಾರರ ಅಭಿವೃದ್ದಿ ನಿಗಮವನ್ನು ಸ್ಥಾಪಿಸುವ ಅಗತ್ಯವಿದ್ದು, ಈ ಕುರಿತು ವಿಧಾನ ಸಭಾ ಅಧಿವೇಶನದಲ್ಲಿ ಒತ್ತಾಯಿಸಿ, ನೇಕಾರರ ಸಮಸ್ಯೆಗಳನ್ನು ಪ್ರಸ್ತಾಪಿಸಲಾಗುವುದು ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ನೇಕಾರರ ಸಂಘಟನೆಗಳ ಒಕ್ಕೂಟ, ನೇಕಾರರ ಹೋರಾಟ ಸಮಿತಿ, ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ, ಕಲ್ಪತರು ವಿದ್ಯುತ್ ಚಾಲಿತ ಮಗ್ಗಗಳ ನೇಕಾರರ ಸಹಕಾರ ಸಂಘ, ವಿದ್ಯುತ್ ಚಾಲಿತ ಮಗ್ಗಗಳ ನೇಕಾರರ ಕೂಲಿ ಕಾರ್ಮಿಕರ ಸಂಘದ ಸಹಯೋಗದಲ್ಲಿ ನಗರದ ಖಾಸಗಿ ಕಲ್ಯಾಣ ಮಂದಿರದಲ್ಲಿ ನಡೆದ ಸಂಕಷ್ಟದಲ್ಲಿರುವ ನೇಕಾರರ ಸಮಸ್ಯೆಗಳ ಕುರಿತು ಚಿಂತನಾ ಸಭೆಯಲ್ಲಿ ಅವರು ಮಾತನಾಡಿದರು.
ಸರ್ಕಾರ ನೇಕಾರರನ್ನು ನಿರ್ಲಕ್ಷ್ಯ ವಹಿಸುತ್ತಿದ್ದು, ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುತ್ತಿದೆ. ನೇಕಾರರ ಸಮಸ್ಯೆಗಳನ್ನು ಬಗೆಹರಿಸಲು ನಡೆಸುವ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದರು.
ನೇಕಾರರ ಸಂಕಷ್ಟ ಕೇಳದ ಸರ್ಕಾರ: ಕೇಂದ್ರದ ನೀತಿಗಳಿಂದಾಗಿ ನೇಕಾರಿಕೆ ಸೇರಿದಂತೆ ಸಣ್ಣ ಕೈಗಾರಿಕೆಗಳು ನಶಿಸುತ್ತಿವೆ. ರಾಜ್ಯದಲ್ಲಿ ಸುಮಾರು 14 ಲಕ್ಷ ಮಂದಿ ನೇಕಾರಿಕೆ ಉದ್ಯಮದ ಮೇಲೆ ಅವಲಂಬಿತರಾಗಿದ್ದಾರೆ. ನೇಕಾರರಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಸಂಕಷ್ಟಕ್ಕೀಡಾಗಿದ್ದಾರೆ. ನೇಕಾರರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕಿದೆ. ಲಾಕ್ಡೌನ್ ಸಮಯದಲ್ಲಿ ನೇಕಾರರಿಗೆ 10 ಸಾವಿರ ನೀಡಬಹುದಿತ್ತು. ಆತ್ಮಹತ್ಯೆ ಮಾಡಿಕೊಂಡ ನೇಕಾರರಿಗೆ 5 ಲಕ್ಷ ಪರಿಹಾರ ನೀಡಬೇಕು ಎಂದರು.
ಲಾಕ್ಡೌನ್ ನಂತರ ರಾಜ್ಯದಲ್ಲಿ ಇದುವರೆಗೂ 14 ಜನ ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದರೆ. ಇದುವರೆಗೂ ಯಾರೊಬ್ಬರಿಗೂ ಪರಿಹಾರವನ್ನೇ ನೀಡಿಲ್ಲ. ಸ್ವಾತಂತ್ರ್ಯ ಭಾರತದಲ್ಲಿ ಸುಳ್ಳು ಹೇಳುವ ಪ್ರಥಮ ಪ್ರಧಾನಮಂತ್ರಿ ನರೇಂದ್ರಮೋದಿ ಅವರಾದರೆ ಯಡಿಯೂರಪ್ಪ ಚಿಕ್ಕ ಮೋದಿ ಎಂದು ವ್ಯಂಗ್ಯವಾಡಿದರು.
ಕರ್ನಾಟಕ ರಾಜ್ಯ ನೇಕಾರರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಂ.ಡಿ.ಲಕ್ಷ್ಮೀನಾರಾಯಣ್ ಮಾತನಾಡಿ, ನೇಕಾರರು ತಮಗೆ ಸೇರಬೇಕಾದ ಹಕ್ಕುಗಳಿಗಾಗಿ ಹೋರಾಡುತ್ತಿದ್ದು, ಸರ್ಕಾರದ ಮುಂದೆ ಬಿಕ್ಷೆ ಬೇಡುತ್ತಿಲ್ಲ. ನೇಕಾರರ ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಸರ್ವ ಪಕ್ಷ ಸಭೆಯಲ್ಲಿ ಚರ್ಚೆಯಾಗಿದ್ದರೂ ಇನ್ನೂ ಯಾವ ಭರವಸೆಗಳು ಈಡೇರಿಲ್ಲ. ಜಾತಿ ಆಧಾರಿತ ನಿಗಮ ಮಂಡಲಿಗಳನ್ನು ರಚಿಸುತ್ತಿರುವ ಸರ್ಕಾರದ ಕ್ರಮ ಅಸಹ್ಯ ಹುಟ್ಟಿಸುವಂತಿದೆ. ರಾಜ್ಯದಲ್ಲಿ ಕೈಮಗ್ಗ ಅಭಿವೃದ್ದಿ ನಿಗಮ, ವಿದ್ಯುತ್ ಮಗ್ಗಗಳ ನಿಗಮ, ಕಾವೇರಿ ಅಭಿವೃದ್ದಿ ನಿಗಮಗಳು ಅಭಿವೃದ್ದಿ ಕಾಣದೇ ಸೊನ್ನೆಯಾಗಿವೆ. ನೇಕಾರರ ವಿಮೆ ಬಾಕಿ, ವಿದ್ಯುತ್ನ ನಿಗಮಕ್ಕೆ ಬಾಕಿ ಉಳಿಸಿಕೊಂಡಿರುವ ಸರ್ಕಾರ ಜಾತಿ ನಿಗಮಗಳಿಗೆ ಕೋಟ್ಯಾಂತರ ರೂ ನೀಡುತ್ತಿದೆ. ರಾಜ್ಯದಲ್ಲಿ ಶೇ.8.4ರಷ್ಟು ಇರುವ ನೇಕಾರರಿಗೆ ಕನಿಷ್ಟ 250 ಕೋಟಿ ರೂ ನೀಡಬೇಕೆಂದು ಒತ್ತಾಯಿಸಿದರು.
ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ನೇಕಾರರ ಸಮಸ್ಯೆಗಳ ಕುರಿತಾಗಿ ಹಲವು ಬಾರಿ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದಾಗ ಹಲವಾರು ಯೋಜನೆಗಳನ್ನು ರೂಪಿಸಿದ್ದರು. ನೇಕಾರರ ಹೋರಾಟಕ್ಕೆ ತಮ್ಮ ಬೆಂಬಲವಿರುವುದಾಗಿ ತಿಳಿಸಿದರು.
ನೇಕಾರರ ಬೇಡಿಕೆಗಳು: ವಿದ್ಯುತ್ ಖಾಸಗೀಕರಣದ ಪ್ರಮುಖ ಉದ್ದೇಶದ ವಿದ್ಯುತ್ ಸುಧಾರಣಾ ಕಾಯ್ದೆ 2020 ರಾಜ್ಯ ಸರ್ಕಾರ ಜಾರಿಗೆ ತರುತ್ತಿದ್ದು, ಇದನ್ನು ಕೈಬಿಡಬೇಕು. ವಿದ್ಯುತ್ ಘಟಕಗಳನ್ನು ಸ್ಥಾಪನೆ ಮಾಡಿರುವ ನೇಕಾರರಿಗೆ ವಿದ್ಯುತ್ ರಿಯಾಯಿತಿ ನಿಲ್ಲಿಸಲಾಗಿದ್ದು, ಕೂಡಲೇ ಆರಂಭಿಸಬೇಕು. ಸರ್ಕಾರ ನೇಕಾರರು ನೇಯ್ದ ಸೀರೆಗಳನ್ನು ಖರೀದಿಸಬೇಕು. ಗುಂಪು ವಿಮಾ ಯೋಜನೆ ಫಲಾನುಭವಿಗಳಿಗೆ ಪರಿಹಾರ ಧನ ನೀಡಬೇಕು. ಆತ್ಮಹತ್ಯೆ ಮಾಡಿಕೊಂಡ ನೇಕಾರರ ಕುಟುಂಬಕ್ಕೆ 10 ಲಕ್ಷ ರೂ ಪರಿಹಾರ,ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಸಾಲ,ನೇಕಾರರಿಗೆ ಆರ್ಥಿಕ ನೆರವು ಹಾಗೂ ನೇಕಾರರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರಿಸಬೇಕು, ಗುರುತಿನ ಚೀಟಿಗಳನ್ನು ನೀಡಬೇಕು .ನೇಕಾರರಿಗೆ ಹಿಂದೆ ಇದ್ದ ಎಲ್ಲಾ ಯೋಜನೆಗಳು ಜಾರಿಯಾಗಬೇಕು ಎನ್ನುವ ಬೇಡಿಕೆಗಳನ್ನು ಮಂಡಿಸಲಾಯಿತು.
ನೇಕಾರರ ಹೋರಾಟ ಸಮಿತಿ ಅಧ್ಯಕ್ಷ ಬಿ.ಜಿ.ಹೇಮಂತರಾಜು, ಕರ್ನಾಟಕ ರಾಜ್ಯ ನೇಕಾರರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಪಿ.ಎ.ವೆಂಕಟೇಶ್, ವಿದ್ಯುತ್ ಚಾಲಿತ ಮಗ್ಗಗಳ ನೇಕಾರರ ಕೂಲಿ ಕಾರ್ಮಿಕರ ಸಂಘದ ಅಧ್ಯಕ್ಷ ಅರುಣ್ ಕುಮಾರ್, ಜಿಲ್ಲಾ ಪಂಚಾಯತಿ ಅಧ್ಯಕ್ಷ ವಿ.ಪ್ರಸಾದ್, ತಾಲೂಕು ಪಂಚಾಯಿತಿ ಅಧ್ಯಕ್ಷೆ ರತ್ನಮ್ಮ ಜಯರಾಂ, ಕೆಪಿಸಿಸಿ ಸದಸ್ಯ ಎಂ.ಜಿ.ಶ್ರೀನಿವಾಸ್, ನಗರಸಭೆ ಮಾಜಿ ಅಧ್ಯಕ್ಷ ಟಿ.ಎನ್.ಪ್ರಭುದೇವ್, ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ, ಕನ್ನಡ ಪಕ್ಷದ ತಾಲೂಕು ಅಧ್ಯಕ್ಷ ಸಂಜೀವ್ ನಾಯಕ್, ಬೆಂಗಳೂರು ಗ್ರಾಮಾಂತರ ಕಾಂಗ್ರೆಸ್ ಸಮಿತಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆದಿತ್ಯನಾಗೇಶ್, ಕರ್ನಾಟಕ ರಾಜ್ಯ ನೇಕಾರರ ಮಹಾ ಮಂಡಳದ ಪಿ.ಸಿ.ವೆಂಕಟೇಶ್ ಸೇರಿದಂತೆ ವಿವಿಧ ನೇಕಾರರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

