ಬೆಂಗಳೂರು: ಹೆಚ್.ಐ.ವಿ. ಸೋಂಕಿತರನ್ನು ಸಮಾಜದಲ್ಲಿ ತಾರತಮ್ಯದಿಂದ ಕಾಣವುದರಿಂದ ಅವರ ಸಮಾನತೆ ಹಕ್ಕಿಗೆ ಧಕ್ಕೆಯಾಗಲಿದ್ದು, ಕಾನೂನು ಬಾಹಿರವೂ ಆಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಮೂರ್ತಿ ಆರ್.ನಟೇಶ್ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಕಾಶ್ ಮೆಡಿಕಲ್ ಕಾಲೇಜು ದೇವನಹಳ್ಳಿ, ತಾಲ್ಲೂಕು ಆರೋಗ್ಯಾಧಿಕಾರಿಗಳು, ಜಿಲ್ಲೆಯ ಇತರೆ ಸರ್ಕಾರಿ ಮತ್ತು ಖಾಸಗಿ ಸಂಘ-ಸಂಸ್ಥೆಗಳ ಸಹಯೋಗದಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ “ವಿಶ್ವ ಏಡ್ಸ್ ದಿನಾಚರಣೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೆಲವು ಸಂದರ್ಭಗಳನ್ನು ಹೊರತುಪಡಿಸಿ ಹೆಚ್.ಐ.ವಿ. ಸೋಂಕಿತರನ್ನು ಸಮಾನವಾಗಿ ಕಾಣಬೇಕು. ಸಮಾಜದಲ್ಲಿ ಶಿಕ್ಷಿತರು ವಿಶಿಷ್ಟ ವರ್ಗವನ್ನು ಸೃಷ್ಟಿಸಬಾರದು, ಆಶಾ ಕಾರ್ಯಕರ್ತೆಯರು ಜನರಿಗೆ ಉತ್ತಮ ಆರೋಗ್ಯ ಮಾರ್ಗದರ್ಶನ ನೀಡುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಲು ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದರು.
ಕಳೆದ 35 ವರ್ಷಗಳಿಂದಲೂ ಹೆಚ್.ಐ.ವಿ. ಕುರಿತು ಮಾತನಾಡುತ್ತಿದ್ದು, ಹೆಚ್.ಐ.ವಿ. ಬಗೆಗಿರುವ ತಪ್ಪು ಕಲ್ಪನೆಗಳನ್ನು ಕೈ ಬಿಡಬೇಕು, ಮುಂಜಾಗ್ರತಾ ಕ್ರಮಗಳನ್ನು ಸಕಾಲದಲ್ಲಿ ಕೈಗೊಂಡು, ಜಾಗೃತರಾಗಬೇಕು ಎಂದು ಹೇಳಿದರಲ್ಲದೆ, ಮಾಧ್ಯಮಗಳ ಮೂಲಕ ಸಮಾಜಕ್ಕೆ ಜಾಗೃತಿ ಸಂದೇಶ ತಲುಪಿಸಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್ ಮಾತನಾಡಿ, ಪ್ರತಿಯೊಬ್ಬರಿಂದಲೂ ಹೆಚ್.ಐ.ವಿ. ಸೋಂಕಿತರನ್ನು ನಕಾರಾತ್ಮಕವಾಗಿ ನೋಡುವ ದೃಷ್ಟಿಕೋನ ಬದಲಾಗಬೇಕಿದ್ದು, ಈ ಜಾಗೃತಿ ಮೂಡಿಸುವ ಕಾರ್ಯ ಪ್ರಾರಂಭವಾಗಬೇಕು ಎಂದರಲ್ಲದೆ, ಅರಿವಿಲ್ಲದೆ ಬರುವ ರೋಗ ಇದಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್.ಎಮ್.ನಾಗರಾಜ ಅವರು ಮಾತನಾಡಿ, ಸಮಾಜದಲ್ಲಿ ಹೆಚ್.ಐ.ವಿ. ಸೋಂಕಿತರನ್ನು ಶೋಷಿತರಂತೆ ಕಾಣಬಾರದು ಅವರು ಸಮಾಜಕ್ಕೆ ಕಳಂಕ ಅಲ್ಲವೆಂದರಲ್ಲದೆ, ಈ ಕುರಿತು ಸಮಾಜದಲ್ಲಿ ಅರಿವು ಮೂಡಿಸುವ ಉದ್ದೇಶಕ್ಕಾಗಿ ವಿಶ್ವಸಂಸ್ಥೆಯು ವಿಶ್ವ ಏಡ್ಸ್ ದಿನಾಚರಣೆಗೆ ಕರೆ ನೀಡಿದೆ. ವೈದ್ಯರ ಸಲಹೆಯಂತೆ ಸಕಾಲದಲ್ಲಿ ಹೆಚ್.ಐ.ವಿ. ಪರೀಕ್ಷೆ ಮಾಡಿಸಿಕೊಳ್ಳುವ ಮೂಲಕ ಸರ್ಕಾರ ಹಾಗೂ ವೈದ್ಯಕೀಯ ನೆರವು ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುಳಾದೇವಿ ಮಾತನಾಡಿ, ಎಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಎ.ಆರ್.ಟಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರೌಢಶಾಲಾ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಹೆಚ್.ಐ.ವಿ. ರೋಗದ ಬಗ್ಗೆ ಮಾಹಿತಿ ನೀಡಲಾಗುತ್ತಿದೆ ಅಂದರಲ್ಲದೆ, ಕರಪತ್ರ, ಗೋಡೆ ಬರಹ, ಜಾನಪದ ತಂಡಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಹಾಗೂ ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 18,845 ಹೆಚ್.ಐ.ವಿ. ಪರೀಕ್ಷೆ ಮಾಡಲಾಗಿದ್ದು, 80 ಹೆಚ್.ಐ.ವಿ. ಸೋಂಕಿತರು ಪತ್ತೆಯಾಗಿದ್ದು, ಶೇ 0.42 ಪ್ರಮಾಣ ದಾಖಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕ್ಷಯಾ ರೋಗ ನಿಯಂತ್ರಣ ಘಟಕದ ಸಂಚಾಲಕಿ ಡಾ.ಶಕೀಲಾ, ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಧಮೇರ್ಂದ್ರ, ಡಾ.ಶ್ರೀನಿವಾಸ್, ಆಕಾಶ್ ಮೆಡಿಕಲ್ ಕಾಲೇಜಿನ ಉಪನ್ಯಾಸಕ ಡಾ.ಸುನೀಲ್ ಸೇರಿದಂತೆ ಆಶಾ ಕಾರ್ಯಕರ್ತೆ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು. ಆಕಾಶ್ ಮೆಡಿಕಲ್ ಕಾಲೇಜಿನ ಉಪನ್ಯಾಸಕಿ ಡಾ.ಅಪೂರ್ವ ಹೆಚ್.ಐ.ವಿ. ಸೋಂಕಿನ ಬಾಧಕಗಳು, ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು ಹಾಗೂ ಇನ್ನಿತರ ವಿಷಯಗಳ ಕುರಿತು ಉಪನ್ಯಾಸ ನೀಡಿದರು. ಕಾರ್ಯಕ್ರಮದ ನಂತರ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು ಹಾಗೂ ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಹರಿತಲೇಖನಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಟ್ವಿಟರ್ ನಲ್ಲಿ ಫಾಲೋ ಮಾಡುವ ಮೂಲಕ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಿರಿ.

