ದೊಡ್ಡಬಳ್ಳಾಪುರ: ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ,ಅಗತ್ಯ ವಸ್ತುಗಳ ಕಾಯ್ದೆ ತಿದ್ದುಪಡಿ, ಕೃಷಿ ಸಂಬಂಧಿತ ಕಾಯ್ದೆಗಳು, ವಿದ್ಯುತ್ ಕಾಯ್ದೆ-2020 ಹಾಗೂ ಕಾರ್ಮಿಕ ವಿರೋಧಿ ಕಾನೂನುಗಳ ಜಾರಿ ವಿರೋಧಿಸಿ, ಅಖಿಲ ಭಾರತ ರೈತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಬೆಂಬಲಿಸಿ, ನಗರದಲ್ಲಿ ರೈತ, ಕಾರ್ಮಿಕ, ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು.
ಸಂಘಟನೆಗಳಿಂದ ಈ ಮೊದಲೇ ನಡೆದ ಸಭೆಯಲ್ಲಿ ತೀರ್ಮಾನಿಸಿದಂತೆ ಮಂಗಳವಾರದಂದು ಬಂದ್ ಕೈಬಿಟ್ಟು ಪ್ರತಿಭಟನೆ ಮಾತ್ರ ನಡೆಸಲಾಯಿತು. ಈ ಹಿನ್ನಲೆಯಲ್ಲಿ ದೊಡ್ಡಬಳ್ಳಾಪುರದಲ್ಲಿ ವ್ಯಾಪಾರ ವಹಿವಾಟು, ನೇಕಾರಿಕೆ ಕಚೇರಿಗಳು ಸೇರಿದಂತೆ ಜನಜೀವನ ಸಹಜ ಸ್ಥಿತಿಯಲ್ಲಿತ್ತು.
ನಗರದ ಸಿದ್ದಲಿಂಗಯ್ಯ ವೃತ್ತದಿಂದ ತಾಲೂಕು ಕಚೇರಿ ವೃತ್ತದವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ರೈತ ಕಾರ್ಮಿಕ, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ, ಕಾಯ್ದೆ ಹಿಂಪಡೆಯುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳನ್ನು ಆಗ್ರಹಿಸಲಾಯಿತು.
ತಾಲೂಕು ಕಚೇರಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ವಿವಿಧ ಸಂಘಟನೆಗಳ ಮುಖಂಡರು, ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಎಪಿಎಂಸಿ ಕಾಯ್ದೆ ತಿದ್ದುಪಡಿ ಹಾಗೂ ಕೃಷಿ ಕಾಯ್ದೆ ತಿದ್ದುಪಡಿ ಕಾಯ್ದೆಗಳು, ಹಣವಂತರು ಹಾಗೂ ಕಾರ್ಪೋರೇಟ್ಗಳಿಗೆ ಅನುಕೂಲವಾಗಿ ರೈತರಿಗೆ ಮಾರಕವಾಗಲಿದೆ. ರೈತರು ತಮ್ಮ ಮಾರಾಟ ವ್ಯವಸ್ಥೆಯನ್ನು ಸುಗಮವಾಗಿ ರೂಪಿಸಿಕೊಂಡಿರುವ ಎಪಿಎಂಸಿ ವ್ಯವಸ್ಥೆಯು ಹೊಸ ಎಪಿಎಂಸಿ ಕಾಯ್ದೆಯಿಂದ ರೈತರ ಕೈ ತಪ್ಪಿ ಬಂಡವಾಳ ಶಾಹಿತಗಳ ಹಿಡತಕ್ಕೆ ಹೋಗುತ್ತದೆ ಅಂತೆಯೇ ಭೂಸುಧಾರಣಾ ಕಾಯ್ದೆ 2013 ಸಹ ರೈತರಿಂದ ಕಸಿದುಕೊಂಡು ಉಳ್ಳವರ ಪಾಲಾಗುತ್ತದೆ. ವಿದ್ಯುತ್ ಕ್ಷೇತ್ರ ಸಹ ಖಾಸಗೀರಣ ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರ ಇಡೀ ದೇಶವನ್ನೇ ಖಾಸಗೀಕರಣ ಮಾಡಲು ಹೊರಟು ಜನರನ್ನು ಗುಲಾಮಗಿರಿಗೆ ತಳ್ಳುತ್ತಿದೆ. ಕಾರ್ಮಿಕ ಕಾಯ್ದೆ ಸಹ ಕಾರ್ಮಿಕರ ವಿರೋಧವಾಗಿವೆ. ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿರುವುದ ರೈತರನ್ನು ಬೀದಿ ಪಾಲು ಮಾಡುವ ಯತ್ನವಾಗಿದೆ. ವಿದ್ಯುತ್ ಕ್ಷೇತ್ರ ಸಹ ಖಾಸಗೀರಣ ಮಾಡಲಾಗುತ್ತಿದ್ದು ರೈತರು ಹಾಗೂ ಜನಸಾಮಾನ್ಯರಿಗೆ ಹೊರೆಯಾಗಲಿದೆ. ಈ ಕಾಯ್ದೆಗಳನ್ನು ಯಾವುದೇ ಕಾರಣಕ್ಕೂ ಜಾರಿ ಮಾಡದೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ತಾಲೂಕು ಅಧ್ಯಕ್ಷ ಹನುಮೇಗೌಡ, ತಾಲೂಕು ಪ್ರಧಾನ ಕಾರ್ಯದರ್ಶಿ ಸತೀಶ್,ಕೆಪಿಸಿಸಿ ಸದಸ್ಯ ಲಕ್ಷ್ಮೀಪತಿ, ಕಾಂಗ್ರೆಸ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ರೇವತಿ, ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ್ ನಾಯಕ್, ಪ್ರಧಾನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ನಗರಸಭೆ ಮಾಜಿ ಅಧ್ಯಕ್ಷ ಟಿ.ಎನ್.ಪ್ರಭುದೇವ್, ಜೆಡಿಎಸ್ ತಾಲೂಕು ಕಾರ್ಯಾಧ್ಯಕ್ಷ ಕೆಂಪರಾಜ್, ಕರವೆ ಪ್ರವೀಣ್ ಕುಮಾರ್ ಶೆಟ್ಟಿಬಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ, ಬಿಎಸ್ಪಿ ರಾಜ್ಯ ಮುಖಂಡ ಪುರುಷೋತ್ತಮ್ ಸೇರಿದಂತೆ ಕಾಂಗ್ರೆಸ್, ಜೆಡಿಎಸ್, ಸಿಪಿಐ(ಎಂ) ಕನ್ನಡ ಪಕ್ಷ, ಬಿಎಸ್ಪಿ ಪಕ್ಷಗಳ ಮುಖಂಡರು, ಸಿಐಟಿಯು ಸೇರಿದಂತೆ ವಿವಿಧ ರೈತ ಕಾರ್ಮಿಕ, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ / ಜಾಹಿರಾತಿಗಾಗಿ 7019780535 ಸಂಖ್ಯೆಗೆ ಸಂಪರ್ಕಿಸಿ

