ಬೆಂಗಳೂರು: ರಾಜ್ಯಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ತುಮಕೂರು ಜಿಲ್ಲೆಯ ಹೆಬ್ಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕೆರೆ ಕ್ಷೇತ್ರದಿಂದ ಸ್ಪರ್ಧಿಸಿರುವ ಅಭ್ಯರ್ಥಿ ಗಂಗಮ್ಮ.ಹೆಚ್ ಅವರ ಪ್ರಚಾರದ ಕರಪತ್ರದಲ್ಲಿನ ಪ್ರಣಾಳಿಕೆ ಕಾನೂನು ಸಂಕಷ್ಟ ತಂದೊಡ್ಡಿದೆ.
ಚುನಾವಣೆಗೆ ಸ್ಪರ್ಧಿಸಿರುವ ಗಂಗಮ್ಮ ಅವರಿಗೆ ಪಾದರಕ್ಷೆ ಗುರುತು ದೊರಕಿದ್ದು, ಗೆದ್ದರೆ ಮತ್ತು ಸೋತರೆ ಮಾಡುವ ಕೆಲಸಗಳ ಪಟ್ಟಿಯನ್ನು ಅವರು ಕರಪತ್ರದಲ್ಲಿ ಮುದ್ರಿಸಿದ್ದರು, ಈ ಕರಪತ್ರ ರಾಜ್ಯಾದ್ಯಂತ ವೈರಲ್ ಆಗಿ ಚರ್ಚೆಗೆ ಕಾರಣವಾಗಿದ್ದಲ್ಲದೆ, ಪರ ವಿರೋಧ ಚರ್ಚೆಗೆ ಕಾರಣವಾಗಿದೆ, ಮುಂದುವರೆದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್, ‘ಇದೊಂದು ವಿನೂತನ ಚುನಾವಣಾ ಪ್ರಚಾರ ಪತ್ರ. ಇಂತಹದ್ದನ್ನು ಇಲ್ಲಿಯವರೆಗೂ ನೋಡಿರಲಿಲ್ಲ’ ಎಂದು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದರು.
ಈ ಕುರಿತು ದೊಡ್ಡಬಳ್ಳಾಪುರದ ನ್ಯಾಯವಾದಿ ಟಿ.ಕೆ.ಹನುಮಂತರಾಜ್ ಎನ್ನುವವರು, ಗಂಗಮ್ಮ ಕರಪತ್ರದಲ್ಲಿನ ಪ್ರಣಾಳಿಕೆ ಗ್ರಾಮದ ಮತದಾರರಲ್ಲಿ ಭಯ ಹುಟ್ಟಿಸಿ ಮತ ಪಡೆಯುವ ಉದ್ದೇಶ ಹೊಂದಿರುವುದು ಕಾನೂನು ಬಾಹಿರವಾಗಿರುತ್ತದೆ. ಆದರಿಂದ ಹೆಬ್ಬೂರು ಗ್ರಾಮ ಪಂಚಾಯಿತಿಯ, ಕಲ್ಕೆರೆ ಗ್ರಾಮದ ಅಭ್ಯರ್ಥಿ ಗಂಗಮ್ಮ.ಹೆಚ್. (ಗುರುತು “ಪಾದರಕ್ಷೆಗಳು”) ಕ್ರಮ ಸಂಖ್ಯೆ.2 ಇವರ ಮೇಲೆ ಕಾನೂನು ಕ್ರಮ ಕೈಗೊಳ್ಳ ಬೇಕೆಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ, ತುಮಕೂರು ಜಿಲ್ಲಾಧಿಕಾರಿ, ಜಿಪಂ ಸಿಇಒ, ಇಒ ಗಳಿಗೆ ಇಮೇಲ್ ಮೂಲಕ ದೂರನ್ನು ನೀಡಿದ್ದಾರೆ.
ಕರಪತ್ರ ರಾಜ್ಯಾದ್ಯಂತ ವೈರಲ್ ಆಗಿ ರಾತ್ರೋರಾತ್ರಿ ಪ್ರಸಿದ್ಧಿ ಪಡೆದಿದ್ದ ಗಂಗಮ್ಮ, ಈಗ ಕಾನೂನಿನ ಸಂಕಷ್ಟಕ್ಕೆ ಒಳಗಾಗಲಿದ್ದಾರೆ ಎನ್ನಲಾಗುತ್ತಿದೆ.
ಗಂಗಮ್ಮರ ಕರಪತ್ರದಲ್ಲಿನ ಪ್ರಣಾಳಿಕೆ/ ಗೆದ್ದರೆ: ಕರೇತಿಮ್ಮರಾಯಸ್ವಾಮಿ ದೇವಸ್ಥಾನದ ಇನಾಮ್ ಜಮೀನನ್ನು ಮೂಲ ಖಾತೆಯಂತೆ ದೇವರ ಹೆಸರಿಗೆ ಮಾಡುವೆ, ಅರಳೀಕಟ್ಟೆ ಕಟ್ಟಿಸುವೆ, ಚಿಕ್ಕಸಾಸಲಯ್ಯನ ಮನೆ ಹತ್ತಿರದಿಂದ ದೊಡ್ಡಕರೇಕಲ್ವರೆಗೆ ರಸ್ತೆ ಮಾಡಿಸುವೆ, ಊರ ಮುಂದೆ ಮಳೆ ನೀರು ರಸ್ತೆಗೆ ಹರಿಯದೆ ಸರಾಗವಾಗಿ ಹರಿಯಲು ಸಗ್ಗಯ್ಯನ ತಿಪ್ಪಾಳದಿಂದ ಹೊಂಬಯ್ಯನ ಗದ್ದೆವರೆಗೆ ಸಿಸಿ ಚರಂಡಿ ಮಾಡಿಸುವೆ ಎಂದು ತಿಳಿಸಿದ್ದಾರೆ.
ಸೋತರೆ: ಅನರ್ಹವಾಗಿ ಪಡೆದಿರುವ 25 ಕುಟುಂಬಗಳ ಪಡಿತರ ಚೀಟಿ ರದ್ದು ಮಾಡಿಸುವೆ, ಸರ್ಕಾರಕ್ಕೆ ಸುಳ್ಳು ಮಾಹಿತಿ ನೀಡಿ ಪಡೆದಿರುವ 40 ಕುಟುಂಬಗಳ ಮಾಸಾಶನ ಹಣ ನಿಲ್ಲಿಸುವೆ, ಸರ್ವೆ ನಂ 86ರಲ್ಲಿ ಹಳೇ ದಾಖಲೆಯಂತೆ ಸ್ಮಶಾನ ಮಾಡಿಸುವೆ, ಕಲ್ಕೆರೆ ಗ್ರಾಮ ಠಾಣಾ ಜಾಗವನ್ನು ಯಾವುದೇ ಮೂಲ ದಾಖಲಾತಿ ಇಲ್ಲದೆ 11 ಕುಟುಂಬಗಳು ಒತ್ತುವರಿ ಮಾಡಿರುವ ಜಾಗವನ್ನು 1948ರ ಗ್ರಾಮದ ಹೌಸ್ಲೀಸ್ಟ್ನಂತೆ ತೆರವುಗೊಳಿಸಲು ಹೋರಾಟ ಮಾಡಲಾಗುವುದು ಎಂದಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

