ದೊಡ್ಡಬಳ್ಳಾಪುರ: ಕಪ್ಪು ಬಣ್ಣದ ಪಲ್ಸರ್ ನಲ್ಲಿ ಬಂದು ಗ್ರಾಮೀಣ ಪ್ರದೇಶದ ಒಂಟಿ ಮಹಿಳೆಯರ ಟಾರ್ಗೆಟ್ ಮಾಡಿ, ಅವರ ಮೇಲೆ ಹಲ್ಲೆ ನಡೆಸಿ ಆವರ ಕೊರಳಲ್ಲಿದ್ದ ಚಿನ್ನದ ಸರ ಕಿತ್ಕೊಂಡ್ ಪರಾರಿಯಾಗುತ್ತಿದ್ದ ಖತರ್ನಾಕ್ ಸಹೋದರರನ್ನು ದೊಡ್ಡಬಳ್ಳಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಕುರಿತು ನಗದಲ್ಲಿ ನಡೆದ ಪತ್ರಿಕಾಗೋಷ್ಠಿ ಮಾಹಿತಿ ನೀಡಿದ ಕೇಂದ್ರೀಯ ವಲಯದ ಐಜಿಪಿ ಸೀಮಂತ್ ಕುಮಾರ್ ಸಿಂಗ್ ತಾಲೂಕಿನ ಬಂಡಯ್ಯನಪಾಳ್ಯ ಗ್ರಾಮದ ನಿವಾಸಿ ಮುತ್ತಮ್ಮ ತಮ್ಮ ಜಮೀನಿಗೆ ಹಸುಗಳನ್ನು ಹೊಡೆದುಕೊಂಡು ಹೋಗ್ತಿದ್ದ ಸಂದರ್ಭ ಪಲ್ಸರ್ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಆಕೆಗೆ ಮಾರಕಾಸ್ತ್ರದಿಂದ ಹೊಡೆದು ಕೊರಳಲ್ಲಿದ್ದ ಸರ ಕಿತ್ತು ಪರಾರಿಯಾಗಿದ್ದರು. ಈ ಕುರಿತು ದೊಡ್ಡಬೆಳವಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಕುರಿತು ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್, ಅಪರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀಗಣೇಶ್ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಟಿ.ರಂಗಪ್ಪ ನೇತೃತ್ವದಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ನವೀನ್ ಕುಮಾರ್, ಸಬ್ ಇನ್ಸ್ಪೆಕ್ಟರ್ ಗಜೇಂದ್ರ, ಬೇಬಿ ವಾಲೇಕರ್, ಶಂಕರಪ್ಪ, ಸೋಮಶೇಖರ್, ಮಂಜುನಾಥ್ ಹಾಗೂ ಸಿಬ್ಬಂದಿಗಳ ಕಾರ್ಯಾಚರಣೆ ನಡೆಸಿ ಆರೋಪಿಗಳ ಬಂಧಿಸಿದ್ದಾರೆ.
ಒಂಟಿ ಮಹಿಳೆಯರನ್ನೇ ಟಾರ್ಗೆಟ್ ಮಾಡಿಕೊಂಡು ಹಲ್ಲೆ ನಡೆಸಿ ಕಳ್ಳತನ ಮಾಡುತ್ತಿದ್ದುದರಿಂದ ಗ್ರಾಮೀಣ ಪ್ರದೇಶಗಳಾದ ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರಿನ ಗ್ರಾಮಗಳಲ್ಲಿ ಮಹಿಳೆಯರು ಒಬ್ಬಂಟಿಯಾಗಿ ತಿರುಗಾಡಲು ಭಯ ಪಡುತ್ತಿದ್ದರು.
ನೆಲಮಂಗಲ ಮಾರುತಿ ನಗರದ ನಿವಾಸಿಗಳಾದ ಅಶೋಕ್ ಸಿ. ಮತ್ತು ವಿನೋದ್ ಅಣ್ಣ- ತಮ್ಮಂದಿರಾಗಿದ್ದು, ಹೇರ್ ಕಟಿಂಗ್ ಕೆಲಸ ಬಿಟ್ಟು ಸರಗಳ್ಳತನದ ಕಾರ್ಯಕ್ಕೆ ಇಳಿದಿದ್ದರು.
ಬಂಧಿತರು 26 ಸರ ಕಳ್ಳತನ ಪ್ರಕರಣದ ಬಗ್ಗೆ ಬಾಯ್ಬಿಟ್ಟಿದ್ದಾರೆ. ಅಲ್ಲದೆ ಎರಡು ಪಲ್ಸರ್ ಬೈಕ್ಗಳನ್ನು ಕದ್ದಿರುವುದಾಗಿ ಒಪ್ಪಿಕೊಂಡಿದ್ದಾರೆ. 26 ಪ್ರಕರಣಗಳಿಗೆ ಸಂಬಂಧಿಸಿದಂತೆ 25 ಲಕ್ಷ ಮೌಲ್ಯದ 510 ಗ್ರಾಂ ತೂಕದ 23 ಚಿನ್ನದ ಸರಗಳು, ಕೃತ್ಯಕ್ಕೆ ಬಳಸಿದ್ದ ಪಲ್ಸರ್ ಬೈಕ್, ಚಾಕು ಸ್ಪಾನರ್ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

