ದೊಡ್ಡಬಳ್ಳಾಪುರ: ಶಿಕ್ಷಕರು ಮತ್ತು ಉಪನ್ಯಾಸಕರ ಸಮಸ್ಯೆಗಳನ್ನು ಬಗೆಹರಿಸಲು ಜಿಲ್ಲಾ ಮಟ್ಟದಲ್ಲಿ ಶಿಕ್ಷಣ ಅದಾಲತ್ ಶೀಘ್ರದಲ್ಲೆ ನಾಲ್ಕು ಜಿಲ್ಲೆಗಳಲ್ಲಿ ಪ್ರಾರಂಭಿಸಲಾಗುವುದೆಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ತಿಳಿಸಿದರು.
ದೊಡ್ಡಬಳ್ಳಾಪುರ ಪರಿವೀಕ್ಷಣ ಮಂದಿರದಲ್ಲಿ ಶಿಕ್ಷಕರು ಮತ್ತು ಉಪನ್ಯಾಸಕರು, ಖಾಸಗಿ ಶಾಲಾ ಕಾಲೇಜು ಆಡಳಿತ ಪದಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಶಿಕ್ಷಕರು ಮತ್ತು ಉಪನ್ಯಾಸಕರ ವಿವಿಧ ಸಮಸ್ಯೆಗಳು ಮತ್ತು ಬೇಡಿಕೆಗಳ ಬಗ್ಗೆ ಪ್ರತಿಕ್ರಿಯಿಸಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ರಾಮನಗರ ಈ ನಾಲ್ಕು ಜಿಲ್ಲೆಗಳಲ್ಲಿ ಶಿಕ್ಷಣ ಅದಾಲತ್ ನಡೆಯಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಶಿಕ್ಷಣ ಅದಾಲತ್ನಲ್ಲಿ ಭಾಗವಹಿಸುವರು. ನಾಲ್ಕು ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಇಲಾಖೆಯಿಂದ ಬರಬೇಕಾಗಿರುವ ವಿವಿಧ ಸೌಲಭ್ಯಗಳನ್ನು ಸಕಾಲದಲ್ಲಿ ದೊರೆಯುವಂತೆ ಮಾಡಲಾಗುವುದು ಎಂದರು.
ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 2008ರ ನಂತರ ನೇಮಕಾತಿ ಹೊಂದಿರುವ ಉಪನ್ಯಾಸಕರಿಗೆ ಬಿ.ಇಡಿ ಕಡ್ಡಾಯಗೊಳಿಸಿ ಆದೇಶ ಮಾಡಿದೆ. ಸರಕಾರಿ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ ವೇತನಸಹಿತ ಬಿ.ಇಡಿ ವ್ಯಾಸಂಗ ಮಾಡಲು ಅವಕಾಶ ನೀಡಲಾಗಿದೆ. ಸರಕಾರಿ ಉಪನ್ಯಾಸಕರಿಗೆ ಬಿ.ಇಡಿ ಮಾಡಲು ನೀಡಿದಂತೆ ಖಾಸಗಿ ಅನುದಾನಿತ ಉಪನ್ಯಾಸಕರಿಗೂ ನೀಡಬೇಕೆಂದು ಉಪನ್ಯಾಸಕರು ಒತ್ತಾಯ ಮಾಡುತ್ತಿದ್ದಾರೆ. ಈ ಬಗ್ಗೆ ಶಿಕ್ಷಣ ಸಚಿವರು ಮತ್ತು ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಲಾಗುತ್ತಿದೆ. ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಬೊಧಕ ಮತ್ತು ಬೋಧಕೇತರ ಸಿಬ್ಬಂದಿಯವರ ವಿವಿಧ ಬಾಕಿ ಬಿಲ್ಲುಗಳ ಮಂಜೂರಾತಿಗೆ ಎಚ್.ಆರ್.ಎಂ.ಎಸ್ನಲ್ಲಿ ಆಗುತ್ತಿರುವ ತೊಂದರೆಯನ್ನು ನಿವಾರಿಸಲಾಗುವುದು. ಶಿಕ್ಷಕರ ಮತ್ತು ಉಪನ್ಯಾಸಕರ ವೇತನ ಸೇರಿದಂತೆ ಎಲ್ಲಾ ವಿಧವಾದ ಆರ್ಥಿಕ ಸೌಲಭ್ಯಗಳು ಸಕಾಲದಲ್ಲಿ ದೊರೆಯುವಂತೆ ಮಾಡಲಾಗುತ್ತಿದೆ ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕಾರ್ಯಾಲಯ ಬೆಂಗಳೂರಿನ ಬಸವನಗುಡಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಇದೆ. ಇದನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕಾರ್ಯಾಲಯ ಕಟ್ಟಡಕ್ಕೆ ಸ್ಥಳಾಂತರ ಮಾಡಬೇಕೆಂದು ಉಪನ್ಯಾಸಕರು ಮತ್ತು ಪ್ರಾಂಶುಪಾಲರು ಒತ್ತಾಯ ಮಾಡುತ್ತಿದ್ದಾರೆ. ಶೀಘ್ರದಲ್ಲೆ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಕಾರ್ಯಾಲಯ ಜಿಲ್ಲಾಧಿಕಾರಿಗಳ ಕಾರ್ಯಾಲಯಕ್ಕೆ ವರ್ಗಾವಣೆಗೊಳ್ಳಲಿದೆ. ಉಪನ್ಯಾಸಕರಿಗೆ ದೊರೆಯಬೇಕಾಗಿರುವ ಪರೀಕ್ಷಾ ಕರ್ತವ್ಯದ ಸಂಭಾವನೆ, ಕಾಲಮಿತಿ ಮುಂತಾದ ಬಡ್ತಿ ಸೌಲಭ್ಯಗಳ ವಿಳಂಬದ ಸಮಸ್ಯೆಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಶಿಕ್ಷಣ ಅದಾಲತ್ನಲ್ಲಿ ಬಗೆಹರಿಸಲಾಗುವುದು.
ದೊಡ್ಡಬಳ್ಳಾಪುರ ತಾಲೂಕು ಶಿಕ್ಷಕರ ಗುರುಭವನ ಮತ್ತು ಸರಕಾರಿ ನೌಕರರ ಭವನಗಳಿಗೆ ಅಭಿವೃದ್ದಿಗೆ ಆರ್ಥಿಕ ನೆರವಿನದೊಂದಿಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ತಾಲೂಕು ಮಟ್ಟದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರಿಗಾಗಿ ಶಿಕ್ಷಣ ಅದಾಲತ್ ನಡೆಸಲಾಗುವುದು. ಪ್ರಾಥಮಿಕ ಶಾಲೆಯಿಂದ ಪ್ರೌಢಶಾಲೆಗಳಿಗೆ ಬಡ್ತಿ ಪಡೆದಿರುವ ಶಿಕ್ಷಕರಿಗೆ ಉಂಟಾಗಿರುವ ತೊಂದರೆಯನ್ನು ಬಗೆಹರಿಸಲಾಗುವುದು. ವಿಧಾನಪರಿಷತ್ ಚುನಾವಣೆಯಲ್ಲಿ ಶಿಕ್ಷಕರಿಗೆ ಮತ್ತು ಉಪನ್ಯಾಸಕರಿಗೆ ನೀಡಲಾಗಿರುವ ಭರವಸೆಯನ್ನು ಈಡೇರಿಸಲಾಗುವುದು ಎಂದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಎಚ್.ಗಂಗಮಾರೇಗೌಡ, ಕ್ಷೇತ್ರಶಿಕ್ಷಣಾಧಿಕಾರಿ ಬೈಯ್ಯಪ್ಪರೆಡ್ಡಿ, ಶಿಕ್ಷಣ ಸಂಯೋಜಕ ಬಿ.ವಿ.ಶಿವಕುಮಾರ್, ದೊಡ್ಡಬಳ್ಳಾಪುರ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಎ.ಸುಬ್ರಮಣ್ಯ, ಕಾರ್ಯದರ್ಶಿ ರಮೇಶ್, ಖಜಾಂಚಿ ಶ್ರೀನಿವಾಸಮೂರ್ತಿ, ರಾಜ್ಯ ಸರಕಾರಿ ನೌಕರ ಸಂಘದ ರಾಜ್ಯ ಪರಿಷತ್ ಸದಸ್ಯ ಟಿ.ಕೆ.ಪ್ರಕಾಶ್, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ಎಸ್.ರಾಜಶೇಖರ್, ಜಂಟಿ ಕಾರ್ಯದರ್ಶಿ ಶ್ರೀರಾಮೇಗೌಡ, ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಸನ್ನಕುಮಾರ್, ಪ್ರೌಢಶಾಲಾ ಬಡ್ತಿ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಶಿವಕುಮಾರ್, ಪ್ರಾಥಮಿಕ ಶಿಕ್ಷಕರ ಸಂಘದ ಉಪಾಧ್ಯಕ್ಷ ಎ.ವಿ.ಚಂದ್ರಪ್ಪ, ಕಾರ್ಯದರ್ಶಿ ವಂಸಂತಗೌಡ, ವಿವಿಧ ಶಾಲಾ ಕಾಲೇಜುಗಳ ಶಿಕ್ಷಕರು ಮತ್ತು ಉಪನ್ಯಾಸಕರು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

