ದೊಡ್ಡಬಳ್ಳಾಪುರ: ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿ ಮತಗಳ ಎಣಿಕೆ ಮುಕ್ತಾಯವಾದ ಎರಡು ದಿನಗಳ ನಂತರ ಕೆಲ ಹಳ್ಳಿಗಳಲ್ಲಿ ಘರ್ಷಣೆಗಳು ನಡೆದಿದ್ದು, ಹಲ್ಲೆಗೆ ಒಳಗಾದವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಚುನಾವಣೆ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕರಿಗೆ ಅಂಚೆ ಮತಪತ್ರ (ಇಡಿಸಿ)ಗಳನ್ನು ಸರ್ಕಾರ ನೀಡುತ್ತದೆ. ಈ ಮತಗಳನ್ನು ಎಣಿಕೆ ಸಂದರ್ಭದಲ್ಲಿ ಎಲ್ಲರ ಸಮ್ಮುಖದಲ್ಲೇ ಪ್ರತ್ಯೇಕವಾಗಿ ಎಣಿಕೆ ಮಾಡಿ ಇಂತಹವರಿಗೆ ಮತ ಹಾಕಲಾಗಿದೆ ಎಂದು ತಿಳಿಸಲಾಗುತ್ತದೆ.
ಅಂಚೆ ಮತಪತ್ರ ಒಂದರಿಂದಲೇ ಗಂಟಿಗಾನಹಳ್ಳಿ ಗ್ರಾಮದಲ್ಲಿ ಅಭ್ಯರ್ಥಿಯೊಬ್ಬರು ಸೋಲು ಕಾಣುವಂತಾಗಿತ್ತು. ಇದೇ ರೀತಿ ಅಲಪನಹಳ್ಳಿ ಗ್ರಾಮದಲ್ಲಿ ಶಿಕ್ಷಕರಾಗಿರುವ ಹನುಮಂತರಾಯಪ್ಪ ಅವರು ‘ಅಂಚೆ ಮತಪತ್ರವನ್ನು ನಮ್ಮವರಿಗೆ ನೀಡಿಲ್ಲ’ ಎನ್ನುವ ಕಾರಣಕ್ಕೆ ಶಿಕ್ಷಕರ ಮೇಲೆ ಶಾಲೆ ಸಮೀಪವೇ ಹಲ್ಲೆ ನಡೆಸಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಹನುಮಂತರಾಯಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
ಅಂಚೆ ಮತಪತ್ರಕ್ಕಾಗಿ ಶಿಕ್ಷಕರ ಮೇಲೆ ಹಲ್ಲೆ ನಡೆಸಿರುವುದನ್ನು ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಜೈಕುಮಾರ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಪ್ರಭಾರ ಅಧ್ಯಕ್ಷ ಎಂ.ಎಸ್.ರಾಜಶೇಖರ್ ಖಂಡಿಸಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿ, ಶಿಕ್ಷಕರ ಮೇಲೆ ಹಲ್ಲೆ ನಡೆಸಿರುವವರ ವಿರುದ್ದ ದೊಡ್ಡಬೆಳವಂಗಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಹಲ್ಲೆ ನಡೆಸಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಅಂಚೆ ಮತಪತ್ರಗಳನ್ನು ಇತರೆ ಮತ ಪತ್ರಗಳೊಂದಿಗೆ ಮಿಶ್ರಣ ಮಾಡಿ ಎಣಿಕೆ ಮಾಡಬೇಕು. ಇದರಿಂದ ಯಾವ ಅಭ್ಯರ್ಥಿಗೆ ಅಂಚೆ ಮತ ಹಾಕಲಾಗಿದೆ ಎನ್ನುವುದು ತಿಳಿಯುವುದಿಲ್ಲ ಎಂದಿದ್ದಾರೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ

