
ಬೆಂ.ಗ್ರಾ.ಜಿಲ್ಲೆ: ಮೊದಲ ಹಂತದ ಕರೊನಾ ಲಸಿಕಾ ಕಾರ್ಯಕ್ರಮದಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೋವಿಡ್-19 ಚುಚ್ಚುಮದ್ದು ಪಡೆದವರಲ್ಲಿ ಯಾವುದೇ ಅಡ್ಡ ಪರಿಣಾಮಗಳು ಕಂಡುಬಂದಿಲ್ಲ, ಈಗಾಗಲೇ ನೋಂದಣಿ ಮಾಡಿಸಿ, ಲಸಿಕೆ ಪಡೆಯದ ಆರೋಗ್ಯ ಕಾರ್ಯಕರ್ತರು ಪೂರ್ವಾಗ್ರಹಗಳಿಗೆ ಕಿವಿಗೊಡದೆ, ತಕ್ಷಣವೇ ಲಸಿಕೆಯನ್ನು ಪಡೆದುಕೊಳ್ಳಬೇಕು, ತಪ್ಪಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ “ಜಿಲ್ಲಾ ಮಟ್ಟದ ಲಸಿಕಾ ಕಾರ್ಯಪಡೆ ಹಾಗೂ ತಾಯಿ ಮತ್ತು ಮಗುವಿನ ಮರಣ ಪರಿಶೀಲನೆ ಸಮಿತಿ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಮೊದಲ ಹಂತದ ಕೊರೋನಾ ಲಸಿಕೆ ವಿತರಣೆಯಲ್ಲಿ ಶೇ. 61 ರಷ್ಟು ಆರೋಗ್ಯ ಕಾರ್ಯಕರ್ತರು ಮಾತ್ರ ಲಸಿಕೆ ಪಡೆದಿದ್ದು, ಬಾಕಿ ಉಳಿದಿರುವ ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆಯುವಂತೆ ತಾಲ್ಲೂಕು ವೈದ್ಯಾಧಿಕಾರಿಗಳು ಅರಿವು ಮೂಡಿಸಬೇಕು ಎಂದರಲ್ಲದೆ, ಲಸಿಕೆ ಪಡೆಯದವರು ಸೂಕ್ತ ಕಾರಣ ನೀಡಿದರೆ ಮಾತ್ರ ವಿನಾಯಿತಿ ನೀಡಬಹುದು ಎಂದು ತಿಳಿಸಿದರು.
ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಕೊರೋನ ವಾರಿಯರ್ಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಇತರೆ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಹ ಲಸಿಕೆಯನ್ನು ಪಡೆದುಕೊಳ್ಳಬೇಕು ಎಂದರು.
ಗರ್ಭಿಣಿಯರು, ತಾಯಿ ಮತ್ತು ಮಗುವಿನ ಆರೋಗ್ಯ ದೃಷ್ಟಿಯಿಂದ ವಿವಿಧ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಲಸಿಕೆಯನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ತಾಲ್ಲೂಕು ವ್ಯಾಪ್ತಿಯಲ್ಲಿ ನೀಡಲಾಗುತ್ತಿದ್ದು, 2020ರ ಏಪ್ರಿಲ್ ನಿಂದ ಡಿಸೆಂಬರ್ ಮಾಹೆಯವರೆಗೂ ಉತ್ತಮ ಪ್ರಗತಿ ಸಾಧಿಸಲಾಗಿದೆ ಎಂದರಲ್ಲದೆ, ದೊಡ್ಡಬಳ್ಳಾಪುರ ಹಾಗೂ ಹೊಸಕೋಟೆ ತಾಲ್ಲೂಕಿನಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಯೋಜನೆ ಜಾರಿಗೆ ತರಬೇಕು ಎಂದು ತಾಲ್ಲೂಕು ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನೆಲಮಂಗಲ, ದಾಬಸ್ಪೇಟೆ, ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ವ್ಯಾಪ್ತಿಯಲ್ಲಿನ ಗರ್ಭಿಣಿ ಮಹಿಳೆಯರು ಲಸಿಕೆ ಪಡೆಯುವ ವೇಳೆ, ಹೆಚ್ಚಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದು, ಅವರ ಮಾಹಿತಿಯನ್ನು ಸಂಗ್ರಹಿಸಿ, ಲಸಿಕೆಯನ್ನು ಪಡೆದಿದ್ದಾರೆಯೇ ಎಂಬುದನ್ನು ಪರಿಶೀಲಿಸಬೇಕು ಎಂದರು.
ಶಾಲೆಗಳಿಗೆ ಭೇಟಿ ನೀಡಿ, ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ಲಸಿಕೆ ನೀಡಿ ಎಂದರು. ಅಲ್ಲದೆ, ಬಾಕಿ ಉಳಿದಿರುವ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಡ್ವಾರು ಅಥವಾ ಹಳ್ಳಿಗಳಿಗೆ ಭೇಟಿ ನೀಡಿ ಲಸಿಕೆ ಬಗ್ಗೆ ಅರಿವು ಮೂಡಿಸಿ ಲಸಿಕೆಯನ್ನು ನೀಡುವ ಕಾರ್ಯವಾಗಬೇಕು ಹಾಗೂ ಈ ನಿಟ್ಟಿನಲ್ಲಿ ದೇವನಹಳ್ಳಿ ತಾಲ್ಲೂಕಿನಲ್ಲಿ ಉತ್ತಮ ಪ್ರಗತಿ ಸಾಧ್ಯವಾಗಿದ್ದು, ಉಳಿದ ಮೂರು ತಾಲ್ಲೂಕು ಆರೋಗ್ಯಾಧಿಕಾರಿಗಳು ಕಾರ್ಯ ಪ್ರವೃತ್ತರಾಗಬೇಕು ಎಂದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಬಿಸಿಜಿ ಲಸಿಕೆಯಲ್ಲಿ ಶೇ.108% ಹಾಗೂ ಪೋಲಿಯೊ ಲಸಿಕೆ ಹಾಕುವ ಗುರಿಯಲ್ಲಿ ಶೇ.107 % ಪ್ರಗತಿ ಸಾಧಿಸಿರುವುದು ಅಭಿನಂದನಾರ್ಹವಾದದ್ದು ಎಂದರು. ಲಸಿಕಾ ಯೋಜನೆಯಿಂದ ಯಾವೊಂದು ಮಗುವು ಹೊರಗುಳಿಯಬಾರದು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ವಿವಿಧ ಕಾರಣಗಳಿಂದಾಗಿ ಆಗಸ್ಟ್ ನಿಂದ ಡಿಸೆಂಬರ್ ಮಾಸಾಂತ್ಯದವರೆಗೆ 11 ಮಕ್ಕಳು ಹಾಗೂ 4 ತಾಯಂದಿರು ಮರಣ ಹೊಂದಿದ್ದು, ಮುಂದಿನ ದಿನಗಳಲ್ಲಿ ಈ ಸಂಖ್ಯೆ ಇನ್ನಷ್ಟು ಕಡಿಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದರು. ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ಹಾಗೂ ಸಲಹೆಗಳನ್ನು ನೀಡುವುದು ಪ್ರತಿಯೊಬ್ಬ ಆರೋಗ್ಯ ಕಾರ್ಯಕರ್ತರ ಕರ್ತವ್ಯವಾಗಿದ್ದು, ಇಲಾಖೆಯಲ್ಲಿರುವ ವಿವಿಧ ಆರೋಗ್ಯ ಯೋಜನೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಮಕ್ಕಳಿಗೆ ವಿಟಮಿನ್ ‘ಕೆ’ ಲಸಿಕೆ ನೀಡುವಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕು ಹಿಂದುಳಿದಿದ್ದು, ತಾಲ್ಲೂಕು ವೈದ್ಯಾಧಿಕಾರಿಗಳು ಸೂಕ್ತ ಕ್ರಮ ವಹಿಸಿ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯ ಮಾಡಬೇಕು ಹಾಗೂ ಈಗಾಗಲೇ ದೇವನಹಳ್ಳಿ ತಾಲ್ಲೂಕು ಆಸ್ಪತ್ರೆಯಲ್ಲಿ ಐ.ಸಿ.ಯು. ಇದ್ದು, ಕಾರ್ಯನಿರ್ವಹಿಸುತ್ತಿಲ್ಲ ಎಂಬ ಮಾಹಿತಿ ಬಂದಿದ್ದು, ಐ.ಸಿ.ಯು ನಿರ್ವಹಣೆ ಕುರಿತು ಸಿಬ್ಬಂದಿಗೆ ಸೂಕ್ತ ತರಬೇತಿ ನೀಡಿ, ಶೀಘ್ರವಾಗಿ ಕಾರ್ಯಾರಂಭ ಮಾಡುವಂತೆ ತಿಳಿಸಿದರು.
ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ, ಜಿಲ್ಲಾ ಸಂತಾನೋತ್ಪತಿ ಮತ್ತು ಮಕ್ಕಳ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ಶರ್ಮಿಳಾ, ರಾಜ್ಯ ಮಾನಿಟರಿ ಅಧಿಕಾರಿ ಡಾ.ನಾಗರಾಜು, ಜಿಲ್ಲಾ ಕ್ಷಯಾ ರೋಗ ನಿಯಂತ್ರಣ ಘಟಕದ ಸಂಚಾಲಕಿ ಡಾ.ಶಕೀಲಾ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪುಷ್ಪಲತಾ.ಜಿ.ರಾಯರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ತಾಲ್ಲೂಕು ಆರೋಗ್ಯಾಧಿಕಾರಿಗಳು, ಆರೋಗ್ಯ ಸಿಬ್ಬಂದಿಗಳು ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

