ಬೆಂ.ಗ್ರಾ.ಜಿಲ್ಲೆ: ತುಳಿತಕ್ಕೆ ಒಳಗಾದವರಿಗೆ ಎಲ್ಲಿಯವರೆಗೂ ನ್ಯಾಯ ಸಿಗುವುದಿಲ್ಲವೋ ಅಲ್ಲಿಯವರೆಗೆ ದೇಶ ಉದ್ಧಾರವಾಗುವುದಿಲ್ಲ ಎಂಬ ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ್ ಅವರ ಆಶಯದಂತೆ, ರಾಜ್ಯ ಸರ್ಕಾರದ ಕಂದಾಯ ವಿಭಾಗದಿಂದ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಎಂಬ ವಿನೂತನ ಕಾರ್ಯಕ್ರಮದ ಮೂಲಕ ನೊಂದವರ, ಸಮಾಜದಲ್ಲಿ ಧ್ವನಿ ಇಲ್ಲದವರ ಸಮಸ್ಯೆಗಳಿಗೆ ಸರ್ಕಾರವೇ ಮನೆ ಬಾಗಿಲಿಗೆ ಬಂದು ಪರಿಹಾರ ಒದಗಿಸಲಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕಂದಾಯ ಸಚಿವರಾದ ಆರ್.ಅಶೋಕ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲ್ಲೂಕಿನ ಸಾಸಲು ಹೋಬಳಿ ಹೊಸಹಳ್ಳಿಯಲ್ಲಿ ಇಂದು ನಡೆದ “ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ” ಎಂಬ ವಿನೂತನ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸುವ ಮೂಲಕ ಅವರು ಉದ್ಘಾಟಿಸಿ ಮಾತನಾಡಿದ ಅವರು,
ಹಿರಿಯ ನಾಗರಿಕರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಕಾಯುವ ಪರಿಸ್ಥಿತಿ, ಅರ್ಜಿಗಳನ್ನು ಸ್ವೀಕರಿಸಿ, ಸಮರ್ಪಕವಾಗಿ ವಿಲೇವಾರಿಯಾಗದ ಇನ್ನಿತರೆ ಸಮಸ್ಯೆಗಳಿಗೆ ಇನ್ನೂ ಮುಂದೆ ಜಿಲ್ಲಾಧಿಕಾರಿ, ತಹಶೀಲ್ದಾರ್ ಸೇರಿದಂತೆ ಅಧಿಕಾರಿಗಳು ಪ್ರತಿ ತಿಂಗಳ 3ನೇ ಶನಿವಾರ ಗ್ರಾಮಕ್ಕೆ ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಪರಿಹಾರ ನೀಡಲಿದ್ದಾರೆ ಎಂದರು.
ರಾಜ್ಯದಲ್ಲಿ ನಡೆಯುತ್ತಿರುವ ಈ ವಿನೂತನ ಕಾರ್ಯಕ್ರಮದಲ್ಲಿ ಇಂದು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು, ತಹಸೀಲ್ದಾರ್ ಗಳು, ಅಧಿಕಾರಿಗಳು ಸೇರಿದಂತೆ ರಾಜ್ಯದ ಒಟ್ಟು 227 ತಾಲ್ಲೂಕುಗಳಲ್ಲಿ ಗ್ರಾಮ ವಾಸ್ತವ್ಯ ಹೂಡಿ, ಸಾವಿರಾರು ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸುವ ಕಾರ್ಯ ಮಾಡಿದ್ದಾರೆ ಎಂದು ತಿಳಿಸಿದರು.
ಕಂದಾಯ ಇಲಾಖೆ ಮಾತೃ ಇಲಾಖೆಯಾಗಿದ್ದು, ಪೋಡಿ, ಪಹಣಿ, ಪಿಂಚಣಿ, ಆಧಾರ್ ಕಾರ್ಡ್, ಪಡಿತರ ಚೀಟಿ, ಸರ್ಕಾರಿ ಜಮೀನು ಒತ್ತುವರಿ, ಆಶ್ರಯ ಮನೆಗಳಿಗೆ ಜಮೀನು ಮಂಜೂರು, ಸ್ಮಶಾನ ಒತ್ತುವರಿ ತೆರವು ಸೇರಿದಂತೆ ವಿವಿಧ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸುವುದು ನಮ್ಮ ಆದ್ಯತೆಯಾಗಿದೆ ಎಂದರು.
ಹೊಸಹಳ್ಳಿಯಲ್ಲಿ ಒಂದೇ ಮನೆಯಲ್ಲಿ ಹಲವು ಮಂದಿ ವಾಸವಾಗಿದ್ದು, ಮನೆ ನಿರ್ಮಾಣಕ್ಕೆ ಜಮೀನು ಸಮಸ್ಯೆ ಬಗೆಹರಿಸಲು ಸರ್ವೇ ಸಂಖ್ಯೆ 55 ರಲ್ಲಿ ಆಶ್ರಯ ಮನೆ ಹಂಚಿಕೆಗೆ 5 ಎಕರೆ ಜಮೀನು ತಕ್ಷಣವೇ ಮಂಜೂರು ಮಾಡಲಾಗಿದ್ದು, 20×30 ಅಡಿಯಲ್ಲಿ 400 ಫಲಾನುಭವಿಗಳಿಗೆ ನಿವೇಶನ ವಿತರಿಸುವ ಕಾರ್ಯ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ಅಕ್ರಮವಾಗಿ ಒತ್ತುವರಿ ಮಾಡಲಾಗಿದ್ದ ಗ್ರಾಮದ ಸ್ಮಶಾನ ಭೂಮಿಯನ್ನು ಕೆಲವೇ ಗಂಟೆಗಳಲ್ಲಿ ಸರ್ವೇ ಮಾಡಿ ತೆರವುಗೊಳಿಸಲಾಗಿದೆ ಎಂದರಲ್ಲದೆ, ವಿವಿಧ ಯೋಜನೆಗಳಡಿ ಒಟ್ಟು 699 ಜನರು ಸೌಲಭ್ಯ ಪಡೆದುಕೊಂಡಿದ್ದಾರೆ ಎಂದರು.
ಸೌಲಭ್ಯಗಳನ್ನು ನೀಡುವುದಾಗಿ ಕೇವಲ ಮಾತಿನಲ್ಲಿ ಹೇಳಿದರೆ ಸಾಲದು, ಅರ್ಹರ ಮನೆ ಬಾಗಿಲಿಗೆ ತಲುಪಿದಾಗಲೇ ಬಡವರು ನೆಮ್ಮದಿಯುತವಾಗಿ ಜೀವನ ನಡೆಸಲು ಸಾಧ್ಯ. ಸೌಲಭ್ಯಗಳನ್ನು ತಲುಪಿಸುವನ್ನು ಕಾರ್ಯಬಜಿಲ್ಲಾಡಳಿತ ಯಶಸ್ವಿಯಾಗಿ ನಿರ್ವಹಿಸುತ್ತಿದೆ ಎಂದು ಹೇಳಿದರು.
ತಾಲ್ಲೂಕು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗೆ ನಾಗರಿಕರು ಅಲೆಯುವುದು ತಪ್ಪಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿದ್ದು, ದಲ್ಲಾಳಿಗಳು ಇಂದು ನಿರುದ್ಯೋಗಿಗಳಾಗಿದ್ದಾರೆ ಎಂದರಲ್ಲದೆ, ಯಾವುದೇ ದಾಖಲೆಗಳನ್ನು ಕೇಳದೆ, ಮುಂದಿನ ದಿನಗಳಲ್ಲಿ ಸೌಲಭ್ಯಗಳನ್ನು ಅರ್ಹರ ಮನೆ ಬಾಗಿಲಿಗೆ ತಲುಪಿಸಲಾಗುವುದು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ, ದೊಡ್ಡಬಳ್ಳಾಪುರ ತಾಲೂಕಿಗೆ ಒಂದು ವೈದ್ಯಕೀಯ ಕಾಲೇಜನ್ನು ಮಂಜೂರು ಮಾಡಲು ಕೋರಿದರಲ್ಲದೆ, ಈಗಾಗಲೇ ತಾಲ್ಲೂಕಿನಲ್ಲಿ 110 ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಶೀಘ್ರವೇ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.ತಾಲ್ಲೂಕಿನಲ್ಲಿ 250 ಹಾಸಿಗೆ ಸಾಮರ್ಥ್ಯದ ಸಾರ್ವಜನಿಕ ಆಸ್ಪತ್ರೆಗೆ 90 ಕೋಟಿ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದರಲ್ಲದೆ, ದೊಡ್ಡಬಳ್ಳಾಪುರ ನಗರಸಭೆಗೆ ಬೇಕಿರುವ ಅನುದಾನ ತಡೆಹಿಡಿಯಲಾಗಿದ್ದು, ಶೀಘ್ರವಾಗಿ ಬಿಡುಗಡೆ ಮಾಡಬೇಕು ಎಂದರು ಹಾಗೂ ದೊಡ್ಡಬಳ್ಳಾಪುರ ತಾಲ್ಲೂಕಿನ ಹೊಸಹಳ್ಳಿಯಲ್ಲಿ ಜಿಲ್ಲಾಧಿಕಾರಿಗಳ ನಡೆ, ಹಳ್ಳಿಗಳ ಕಡೆ ಎಂಬ ರಾಜ್ಯ ಮಟ್ಟದ ವಿನೂತನ ಕಾರ್ಯಕ್ರಮ ಆಯೋಜಿಸಿದ್ದಕ್ಕೆ ಧನ್ಯವಾದ ತಿಳಿಸಿದರು.
ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ರೇಷ್ಮೆ, ತೋಟಗಾರಿಕೆ, ನೇಕಾರಿಗೆ ಹೆಸರುವಾಸಿಯಾಗಿದ್ದು, ಇತಿಹಾಸ ಪ್ರಸಿದ್ಧ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಿಂದ ಜಿಲ್ಲೆ ಪ್ರಖ್ಯಾತಿ ಪಡೆದಿದೆ ಎಂದರು.
ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ 18 ವಿವಿಧ ಯೋಜನೆಗಳಡಿ 3649 ಮಂದಿಗೆ ಸೌಲಭ್ಯಗಳನ್ನು ವಿತರಿಸಲಾಗಿದ್ದು, ಆಶ್ರಯ ಯೋಜನೆ, ಪಿಂಚಣಿ, ಗಿಡ ನೆಡುವ ಕಾರ್ಯಕ್ರಮ, ಶಾಲಾ ಬಿಟ್ಟ ಮಕ್ಕಳನ್ನು ಗುರುತಿಸುವುದು ಸೇರಿದಂತೆ ಇನ್ನಿತರೆ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆಜಯಮ್ಮ, ದೊಡ್ಡಬಳ್ಳಾಪುರ ತಾಲ್ಲೂಕು ಯೋಜನಾ ಪ್ರಾಧಿಕಾರದ ಅಧ್ಯಕ್ಷ ದಿಬ್ಬೂರು ಜಯಣ್ಣ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ನವೀನ್ರಾಜ್ಸಿಂಗ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರವಿ.ಡಿ.ಚನ್ನಣ್ಣನವರ್, ಅಪರ ಜಿಲ್ಲಾಧಿಕಾರಿ ಜಗದೀಶ್.ಕೆ.ನಾಯಕ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಲಕ್ಷ್ಮೀ ಗಣೇಶ್, ಉಪ ವಿಭಾಗಾಧಿಕಾರಿ ಅರುಳ್ ಕುಮಾರ್, ದೊಡ್ಡಬಳ್ಳಾಪುರ ತಹಶೀಲ್ದಾರ್ ಶಿವರಾಜ್, ತಾಪಂ ಅಧ್ಯಕ್ಷ ನಾರಾಯಣಗೌಡ, ಮಾಜಿ ಅಧ್ಯಕ್ಷ ಹೆಚ್.ಎಸ್.ಅಶ್ವಥ್ ನಾರಾಯಣಕುಮಾರ್ ಸೇರಿದಂತೆ ಅನೇಕರು ಇದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಆರ್.ಅಶೋಕ್, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರನ್ನು ಹೂವಿನ ಮಾಲೆಗಳು, ತಳಿರು ತೋರಣಗಳಿಂದ ಸಿಂಗಾರಗೊಂಡ ಎತ್ತಿನಗಾಡಿಯಲ್ಲಿ ನಾದ ಸ್ವರ, ವಾದ್ಯಮೇಳಗಳೊಂದಿಗೆ ಹೊಸಹಳ್ಳಿ ಗ್ರಾಮದ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಕರೆತರಲಾಯಿತು.
ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೋಮ, ಹವನ, ಪೂಜೆ ನಂತರ ಗ್ರಾಮ ದೇವತೆ ಮಾರಮ್ಮನ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಲಾಯಿತು. ನಂತರ ಮಾರಮ್ಮ ದೇವಿಯ ದೇವಸ್ಥಾನದ ಆವರಣದಲ್ಲಿ ದಲಿತ ಕಾಲೋನಿ ಜನರೊಂದಿಗೆ ಸಭೆ ನಡೆಸಿ, ಸಚಿವರು, ಅಧಿಕಾರಿಗಳು ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದರು. ಈ ವೇಳೆ ಸಚಿವರು ಮಾತನಾಡಿ ಹಿಂದಿನ ಕಾಲದಲ್ಲಿದ್ದ ಅನಿಷ್ಟ ಪದ್ಧತಿಯನ್ನು ಮುಂದುವರೆಸಿಕೊಂಡು ಹೋಗುವುದು ಸೂಕ್ತವಲ್ಲ, ಭಾರತೀಯರಾದ ನಾವೆಲ್ಲರೂ ಒಂದೇ ಎಂಬ ಭಾವನೆ ಜನರಲ್ಲಿ ಮೂಡಬೇಕು, ಆಗ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು. ಸಭೆಯಲ್ಲಿ ಗ್ರಾಮಸ್ಥರು ದಲಿತರಿಗೆ ಗ್ರಾಮದಲ್ಲಿ ಸ್ಮಶಾನವಿಲ್ಲ, ಸರ್ಕಾರದ ಸ್ಮಶಾನದ ಜಮೀನನ್ನು ಒತ್ತುವರಿ ಮಾಡಲಾಗಿದೆ, ಒಂದು ಮನೆಯಲ್ಲಿ ಹತ್ತಕ್ಕೂ ಹೆಚ್ಚು ಜನ ವಾಸ್ತವ್ಯ ಮಾಡುತ್ತಿದ್ದು ಆಶ್ರಯ ಮನೆ ಯೋಜನೆಯಡಿ ಜಮೀನು ಮಂಜೂರು ಮಾಡಬೇಕು ಎಂದು ಸಚಿವರ ಗಮನಕ್ಕೆ ತಂದರು, ಕಾಲೇಜಿಗೆ ಹೋಗಲು ವಿದ್ಯಾರ್ಥಿಗಳಿಗೆ ಸಾರಿಗೆ ಸಮಸ್ಯೆಯಾಗುತ್ತಿದ್ದು, ಪ್ರತಿ ದಿನ ವಿದ್ಯಾರ್ಥಿಗಳು ತಡವಾಗಿ ತರಗತಿಗಳಿಗೆ ತೆರಳುತ್ತಿರುವುದಾಗಿ ಸಚಿವರ ಗಮನಕ್ಕೆ ತಂದರು.
ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದ ಸಚಿವರು ಸಾರಿಗೆ ಬಸ್ ಸಂಚಾರ ಹೆಚ್ಚಳ ಮಾಡುವಂತೆ ಸೂಚಿಸಿದರು, ಸ್ಮಶಾನದ ಒತ್ತುವರಿ ಜಾಗವನ್ನು ಸವೆ೯ ಮಾಡಿಸಿ ತೆರವುಗೊಳಿಸಲಾಗುವುದು, ಆಶ್ರಯ ಮನೆ ಯೋಜನೆಗೆ 400 ಜನ ಫಲಾನುಭವಿಗಳಿಗೆ 5 ಎಕರೆ ಜಮೀನು ಮಂಜೂರು ಮಾಡಲಾಗುವುದು ಎಂದು ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.
ನಂತರ ಗ್ರಾಮದ ವಿವಿಧ ಬೀದಿಗಳಲ್ಲಿ ಕಾಲ್ನಡಿಗೆ ಮೂಲಕ ಗ್ರಾಮ ವೀಕ್ಷಣೆ ಮಾಡಲಾಯಿತು ಹಾಗೂ ವಿಕಲಚೇತನರ ಮನೆ ಮನೆಗೆ ಭೇಟಿ ನೀಡಿ, ದಿವ್ಯಾಂಗರಿಗೆ ಶ್ರವಣ ಯಂತ್ರ, ಕೃತಕ ಕಾಲು ಜೋಡಣೆ, ಗಾಲಿ ಕುರ್ಚಿಗಳು, ವಯೋವೃದ್ಧರಿಗೆ ಊರುಗೋಲು ಸೇರಿದಂತೆ ವಿವಿಧ ಸಾಧನ ಸಲಕರಣೆಗಳನ್ನು ವಿತರಿಸಿದರು.
ಹೊಸಹಳ್ಳಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಸತಿ ನಿಲಯದಲ್ಲಿ ಮಧ್ಯಾಹ್ನದ ಊಟ ಸೇವಿಸಿದರು, ನಂತರ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗ ಗಿಡ ನೆಟ್ಟು ನೀರುಣಿಸಿ, ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ಈ ವೇಳೆ ವೈದ್ಯರು ಸಚಿವರಿಗೆ ಹಾಗೂ ಶಾಸಕರಿಗೆ ರಕ್ತದೊತ್ತಡ, ದೇಹದ ಉಷ್ಣತೆ ಸೇರಿದಂತೆ ಪ್ರಾಥಮಿಕ ತಪಾಸಣೆ ನಡೆಸಿದರು.
ತದನಂತರ ಗ್ರಾಮದ ಸ್ಮಶಾನ ಭೂಮಿ ಒತ್ತುವರಿಗೆ ಸಂಬಂಧಿಸಿದಂತೆ ಪರಿಶೀಲನೆಗೆಂದು ಹೊಸಹಳ್ಳಿಯ ಸ್ಮಶಾನಕ್ಕೆ ಭೇಟಿ ನೀಡಲಾಯಿತು, ನಂತರ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು, ನೀರುಣಿಸಲಾಯಿತು. ತದನಂತರ ವಿವಿಧ ಇಲಾಖೆಗಳು ಸರ್ಕಾರದ ವಿವಿಧ ಯೋಜನೆಗಳ ಮಾಹಿತಿ ನೀಡಲೆಂದು ತೆರೆಯಲಾಗಿದ್ದ ಮಳಿಗೆಗಳಿಗೆ ಭೇಟಿ ನೀಡಿ, ಯೋಜನೆಗಳ ಮಾಹಿತಿಯುಳ್ಳ ಫಲಕಗಳು, ಮಾದರಿಗಳು, ಕರಪತ್ರಗಳು, ಬ್ಯಾನರ್ ಗಳನ್ನು ವೀಕ್ಷಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ ಹಾಗೂ ಟ್ವಿಟರ್ ಫಾಲೋ ಮಾಡಿ.ಟೆಲಿಗ್ರಾಂ ಗುಂಪಿಗೆ ಸೇರಿರಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…