
ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿರುವ ಎಲ್ಲಾ ಶಾಲೆಗಳಿಗೆ ಶೌಚಾಲಯ, ಕುಡಿಯುವ ನೀರು ಸೇರಿದಂತೆ ಇತರೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಅನ್ಬುಕುಮಾರ್ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆದ “ಎಸ್.ಎಸ್.ಎಲ್.ಸಿ. ಫಲಿತಾಂಶ-2020 ಹಾಗೂ ಮೂಲ ಸೌಲಭ್ಯಗಳ ಪ್ರಗತಿ ಪರಿಶೀಲನಾ ಸಭೆ”ಯಲ್ಲಿ ಮಾತನಾಡಿದರು.
ಯಾವ ಶಾಲೆಯೂ ಮೂಲಭೂತ ಸೌಕರ್ಯದಿಂದ ವಂಚಿತವಾಗಬಾರದು ಹಾಗೂ ಶಾಲೆಗಳು ಮೂಲಭೂತ ಸೌಕರ್ಯ ಹೊಂದಿದ್ದಲ್ಲಿ ಮಕ್ಕಳ ದಾಖಲಾತಿಗಳು ಹೆಚ್ಚಳವಾಗುತ್ತದೆ ಎಂದರು.
ಜಿಲ್ಲೆಯಲ್ಲಿ 2020-21ನೇ ಸಾಲಿನಲ್ಲಿ 14,701 ಮಕ್ಕಳು ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯಲಿದ್ದು, ಯಾವ ವಿದ್ಯಾರ್ಥಿಯು ಅನುತ್ತೀರ್ಣರಾಗದಂತೆ ಅಧಿಕಾರಿಗಳು ಮತ್ತು ಶಿಕ್ಷಕರು ಕಾರ್ಯ ನಿರ್ವಹಿಸಿ, ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ತಿಳಿಸಿದರು.
ನರೇಗಾ ಮತ್ತು ಜಲಜೀವನ್ ಮಿಷನ್ ಯೋಜನೆಯಡಿ ಶಾಲೆಗಳಲ್ಲಿ ಶೌಚಾಲಯ ನಿರ್ಮಾಣ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಶಾಲಾ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಕಿರು ಅರಣ್ಯ ನಿರ್ಮಿಸವುದರೊಂದಿಗೆ ಶಾಲಾ ಸುತ್ತಮುತ್ತಲಿನ ವಾತಾವರಣ ಉತ್ತಮವಾಗಿರಿಸಲು ಅಧಿಕಾರಿಗಳು ಮುಂದಾಗಬೇಕು ಎಂದರು.
ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಗಳಿಗೆ ಹೊಸ ಆ್ಯಪ್ನ್ನು ರೂಪಿಸಲಾಗಿದ್ದು, ಪ್ರತಿ ತಿಂಗಳು ವಿಷಯವಾರು ಬಹು ಆಯ್ಕೆ ಪ್ರಶ್ನೆಗಳ ಆನ್ಲೈನ್ ಪರೀಕ್ಷೆಯನ್ನು ನಡೆಸಲಾಗುತ್ತದೆ. ಅದೇ ರೀತಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳಿಗೆ ವಿಶೇಷ ಪಾಸಿಂಗ್ ಪ್ಯಾಕೇಜ್ ಅನ್ನು ನೀಡಲಾಗುತ್ತದೆ ಎಂದರು. ಅಲ್ಲದೆ, ಜಿಲ್ಲಾ ಹಂತದಿಂದ ಒಂದು ಕಿರು ಪರೀಕ್ಷೆ ಹಾಗೂ ಒಂದು ಪೂರ್ವ ಸಿದ್ದತಾ ಪರೀಕ್ಷೆಯನ್ನು ಉಚಿತವಾಗಿ ನಡೆಸಲಾಗುತ್ತದೆ ಎಂದರು.
ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮುಖ್ಯ ಶಿಕ್ಷಕರು ಸಹ ಮಕ್ಕಳಿಗೆ ಪಾಠ ಮಾಡುವಂತೆ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ತೆರಳಿ ಖಾತ್ರಿಪಡಿಸಿಕೊಳ್ಳಬೇಕು ಎಂದರು.
ಕಳೆದ ಶೈಕ್ಷಣಿಕ ವರ್ಷದಲ್ಲಿ ಜಿಲ್ಲೆಯು ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ ಉತ್ತಮ ಸ್ಥಾನ ಪಡೆದಿದ್ದು, ಇದರ ಜೊತೆಗೆ ಕಡಿಮೆ ಫಲಿತಾಂಶ ಪಡೆದಿರುವ ಶಾಲೆಗಳಿಗೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಮತ್ತು ವಿದ್ಯಾರ್ಥಿಗಳೊಂದಿಗೆ ಚರ್ಚಿಸಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಮಾತನಾಡಿ, ಜಿಲ್ಲಾ ಪಂಚಾಯಿತಿ ವತಿಯಿಂದ ಶಿಕ್ಷಣ ಇಲಾಖೆಗೆ ಬೇಕಾಗುವ ಮೂಲ ಸೌಕರ್ಯಗಳ ಒದಗಿಸಲು ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದರು. ಅಲ್ಲದೆ, ಸಿ.ಎಸ್.ಆರ್ ನಿಧಿ, ನರೇಗಾ ಮತ್ತು ಜಲಜೀವನ್ ಯೋಜನೆಯಡಿ ವಿವಿಧ ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರಾದ ಪ್ರಸನ್ನ, ಬೆಂಗಳೂರು ಗ್ರಾಮಾಂತರ ಉಪ ನಿರ್ದೇಶಕರಾದ ಗಂಗಮಾರೇಗೌಡ, ಜಿಲ್ಲಾ ಡಯಟ್ ಪ್ರಾಂಶುಪಾಲರಾದ ಅನಿತಾ ನಜಾರೇ ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

