
ಬೆಂ.ಗ್ರಾ.ಜಿಲ್ಲೆ: ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಲಿದ್ದು, ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸೂಕ್ತ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿವೆಯೇ ಎಂದು ಅಧಿಕಾರಿಗಳು ಗಮನ ಹರಿಸುವ ಮೂಲಕ ಕುಡಿಯುವ ನೀರಿನ ಘಟಕಗಳನ್ನು ಸುಸ್ಥಿತಿಯಲ್ಲಿಡಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ವಿ.ಪ್ರಸಾದ್ ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿಂದು ನಡೆದ ಕೊನೆಯ “ಸರ್ವ ಸದಸ್ಯರ ಸಾಮಾನ್ಯ ಸಭೆ”ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಜವಾಬ್ದಾರಿಯುತವಾಗಿ ಕೆಲಸ ನಿರ್ವಹಿಸಬೇಕು ಹಾಗೂ ಬಾಕಿ ಇರುವ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದರು.
ಜಿಲ್ಲೆಯಲ್ಲಿ ಹಲವು ಶಾಲಾ ಕಟ್ಟಡಗಳ ಕಾಮಗಾರಿ ಪ್ರಗತಿಯಲ್ಲಿದ್ದು, ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರಲ್ಲದೆ, ಪ್ರಧಾನಿ ನರೇಂದ್ರ ಮೋದಿಯವರ ಪರೀಕ್ಷಾ ಪೇ ಚರ್ಚೆಯಲ್ಲಿ ಹೊಸಕೋಟೆ ತಾಲ್ಲೂಕಿನ ತಾವರೆಕೆರೆ ಸರ್ಕಾರಿ ಪ್ರೌಢಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾದ ಮನೋಜ್ ಆಯ್ಕೆಯಾಗಿರುವುದು ಶ್ಲಾಘನೀಯ ಎಂದರು ಹಾಗೂ ಬುದ್ದಿಮಾಂದ್ಯ ಮಕ್ಕಳಿಗೆ ಕೇವಲ ತಾಲ್ಲೂಕು ಮಟ್ಟದಲ್ಲಿ ಶಾಲೆಗಳಿದ್ದು, ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿ ಕಾರ್ಯ ನಿರ್ವಹಿಸುವಂತಾಗಬೇಕು. ಇಂತಹ ಅಭಿವೃದ್ಧಿ ಕಾರ್ಯಗಳಿಗಾಗಿ ಗ್ರಾಮ ಪಂಚಾಯಿತಿ ಅನುದಾನದಲ್ಲಿ ಶೇ. 3 ರಷ್ಟು ಹಣ ಮೀಸಲಿರಿಸಲಾಗಿದೆ ಎಂದರು.
ಹೊಸಕೋಟೆ ತಾಲ್ಲೂಕಿನ ಪೂಜೇನ ಅಗ್ರಹಾರದ ಅಂಗನವಾಡಿಯಲ್ಲಿ ವಾಸವಾಗಿದ್ದ ವಯೋವೃದ್ಧರಿಗೆ ಬೇರೆಡೆ ಪುನರ್ವಸತಿ ಕಲ್ಪಿಸಲಾಗಿದ್ದು, ಗ್ರಾಮ ಪಂಚಾಯಿತಿ ವತಿಯಿಂದ ಅಗತ್ಯ ಕ್ರಮ ಕೈಗೊಳ್ಳಬೇಕು. ಜೊತೆಗೆ ನೆಲಮಂಗಲ ತಾಲ್ಲೂಕಿನ ಕೆಲವು ಅಂಗನವಾಡಿಗಳ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಹಸ್ತಾಂತರಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡಾಪಟುಗಳಿಗೆ ನೀಡಲಾಗುವ ಮಾಸಾಶನ ಸಮರ್ಪಕವಾಗಿ ತಲುಪುತ್ತಿಲ್ಲ ಎಂಬ ಜಿಲ್ಲಾ ಪಂಚಾಯಿತಿ ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅಧ್ಯಕ್ಷರು ಆನ್ಲೈನ್ನಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವಂತೆ ತಿಳಿಸಿದರು ಹಾಗೂ ಅರ್ಹ ಫಲಾನುಭವಿಗಳಿಗೆ ಮಾಸಾಶನ ತಲುಪಿಸಲು ಕ್ರಮ ಕೈಗೊಳ್ಳಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.
ತೋಟಗಾರಿಕೆ ಇಲಾಖೆಯಿಂದ ದೇವನಹಳ್ಳಿಯಲ್ಲಿ ನಿರ್ಮಿಸುತ್ತಿರುವ ಕೋಲ್ಡ್ ಸ್ಟೋರೇಜ್ ಘಟಕ ನವೆಂಬರ್ ಅಂತ್ಯದೊಳಗೆ ರೈತರ ಬಳಕೆಗೆ ನೀಡಲಾಗುವುದು ಹಾಗೂ ವಿಜಯಪುರದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಭೂಮಿ ಒತ್ತುವರಿಯಾಗಿದ್ದು, ಶೀಘ್ರವೇ ಕೋರ್ಟ್ ನಿರ್ದೇಶನದಂತೆ ವಶಕ್ಕೆ ಪಡೆಯುವಂತೆ ತಿಳಿಸಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬೋಗಸ್ ದಾಖಲೆ ನೀಡಿ ಟೆಂಡರ್ ಪಡೆದಿರುವ ಸನ್ಲೈಟ್ ಸಂಸ್ಥೆಯನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಆದೇಶಿಸಿದರಲ್ಲದೆ, ಜಿಲ್ಲೆಯಲ್ಲಿ ಖಾಲಿ ಇರುವ ಗ್ರೂಪ್ ‘ಡಿ’ ದರ್ಜೆ ನೌಕರರು ಹಾಗೂ ಡ್ರೈವರ್ಗಳನ್ನು ನೇಮಕ ಮಾಡಿಕೊಳ್ಳಲು ಸೂಚನೆ ನೀಡಿದರು.
ಅರಣ್ಯ ವ್ಯಾಪ್ತಿಯಲ್ಲಿ ಚೆಕ್ಡ್ಯಾಂಗಳ ನಿರ್ಮಾಣ ಕುರಿತಂತೆ ಜಿ.ಪಂ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್ ಅವರು ಮಾತನಾಡಿ ಅಂತರ್ಜಲವೃದ್ಧಿಗೆ ನರೇಗಾ ಯೋಜನೆಯಡಿ ಹಣ ಬಿಡುಗಡೆ ಮಾಡಲಾಗುವುದು, ಅರಣ್ಯ ಇಲಾಖೆಯ ಅಧಿಕಾರಿಗಳು ಈ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಹಾಗೂ ಚೆಕ್ಡ್ಯಾಂ ನಿರ್ಮಾಣದಿಂದಾಗಿ ಪ್ರಾಣಿ, ಪಕ್ಷಿಗಳಿಗೂ ಅನುಕೂಲವಾಗಲಿದೆ ಎಂದರು.
ಜಿಲ್ಲೆಯಲ್ಲಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಯಾವ ಸಂಸ್ಥೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ, ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಿರುವ ಘಟಕಗಳೆಷ್ಟು ಎಂಬ ಮಾಹಿತಿ ನೀಡಬೇಕು ಹಾಗೂ ಕಾಮಗಾರಿ ಪೂರ್ಣಗೊಂಡಿದ್ದರೆ ಕಾಮಗಾರಿ ಪೂರ್ಣಗೊಳಿಸಿದ ಸಂಸ್ಥೆಗೆ ಹಣ ಬಿಡುಗಡೆ ಮಾಡಬೇಕು ಎಂದರು.
ಸಾರ್ವಜನಿಕ ಆಸ್ತಿಪಾಸ್ತಿ ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆ, ಅಂಗನವಾಡಿ, ಆಸ್ಪತ್ರೆ ಮುಂತಾದವುಗಳ ಭೂಮಿಯ ಖಾತೆ ಅಥವಾ ಇ-ಸ್ವತ್ತು ಮಾಡಿಸಲು ಕ್ರಮ ಕೈಗೊಳ್ಳಬೇಕು ತಪ್ಪಿದಲ್ಲಿ ಅಧಿಕಾರಿಗಳ ವಿರುದ್ಧ ಐಪಿಸಿ ಸೆಕ್ಷನ್ 192(ಎ) ಅನ್ವಯ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದರು.
ವಿವಿಧ ಇಲಾಖೆಗಳ ಕಟ್ಟಡ ಕಾಮಗಾರಿಗಳು ಪೂರ್ಣಗೊಂಡಿದ್ದರೆ ಆಯಾ ಇಲಾಖೆಗಳಿಗೆ ಕಟ್ಟಡ ಹಸ್ತಾಂತರಿಸುವ ಕಾರ್ಯ ಮಾಡಬೇಕು ಜೊತೆಗೆ ಅಂಗನವಾಡಿ ಕಾರ್ಯಕರ್ತೆಯರು ವರ್ಗಾವಣೆ ಕೋರಿ ಮನವಿ ಸಲ್ಲಿಸಿದರೆ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.
ರಾಜ್ಯದಲ್ಲಿ 262 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೆ ಏರಿಸಲು ಆರೋಗ್ಯ ಇಲಾಖೆಯ ಸಚಿವರು ತೀರ್ಮಾನಿಸಿದ್ದು, ಜಿಲ್ಲೆಯಲ್ಲಿ ಅತಿ ಹೆಚ್ಚು ಜನಸಂಖ್ಯೆ ಇರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಗುರುತಿಸಿ, ಶೀಘ್ರವಾಗಿ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಂತೋಣಿ ಮರಿಯಪ್ಪ ಅವರು ಮಾತನಾಡಿ, ಅರಣ್ಯ ವ್ಯಾಪ್ತಿಯಲ್ಲಿ ಶಾಶ್ವತವಾಗಿ ಯಾವುದೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಅವಕಾಶ ಇಲ್ಲವಾದ್ದರಿಂದ ಚೆಕ್ಡ್ಯಾಂ ನಿರ್ಮಾಣದಿಂದ ಅಂತರ್ಜಲ ಮಟ್ಟ ಹೆಚ್ಚುತ್ತದೆ ಹಾಗೂ ಅರಣ್ಯದಲ್ಲಿನ ಪ್ರಾಣಿ ಪಕ್ಷಿಗಳಿಗೂ ಅನುಕೂಲವಾಗುತ್ತದೆ ಎಂದರು ಹಾಗೂ ಚೆಕ್ಡ್ಯಾಂ ನಿರ್ಮಾಣಕ್ಕೆ ಅರಣ್ಯ ಇಲಾಖೆ ಸಹಕಾರ ನೀಡಲಿದೆ ಎಂದರು.
ಎರಡು ವರ್ಷಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅನೆ ದಾಳಿ ಸಂಭವಿಸಿಲ್ಲ, ಆನೆಗಳು ಬರದಂತೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು. ಅಲ್ಲದೆ, ಇತ್ತೀಚೆಗೆ ಚಿರತೆ ದಾಳಿ ಹಾಗೂ ಬೆಳೆ ಹಾನಿ ಕುರಿತು ಇಲಾಖೆಯಿಂದ ಪರಿಹಾರ ನೀಡಲಾಗಿದ್ದು, ಮಾನವನ ಅರಣ್ಯ ಅತಿಕ್ರಮಣದಿಂದಾಗಿ ಪ್ರಾಣಿಗಳು ನಾಡಿಗೆ ಪ್ರವೇಶಿಸುತ್ತಿವೆ ಎಂದು ತಿಳಿಸಿದರು.
ಎರಡು ವರ್ಷದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ 470 ಹೆಕ್ಟೇರ್ ನೀಲಗಿರಿ ತೆರವುಗೊಳಿಸಲಾಗಿದ್ದು, ತೆರವುಗೊಳಿಸಲಾದ ಸ್ಥಳದಲ್ಲಿ ಹಣ್ಣು ಬಿಡುವ ಮರಗಳನ್ನು ಹಂತ ಹಂತವಾಗಿ ನೆಡಲಾಗಿದೆ ಎಂದರಲ್ಲದೆ, ಸತತ 6-7 ವರ್ಷಗಳಿಂದ ಮಳೆಗಾಲದಲ್ಲಿ ನೆಡುತೋಪು ನೆಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ರೂಪ ಮರಿಯಪ್ಪ, ವಿವಿಧ ಸ್ಥಾಯಿ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು, ಉಪ ಕಾರ್ಯದರ್ಶಿ ಕೆ.ಕರಿಯಪ್ಪ, ಮುಖ್ಯ ಯೋಜನಾಧಿಕಾರಿ ಬಿ.ವಿನುತಾರಾಣಿ, ಮುಖ್ಯ ಲೆಕ್ಕಾಧಿಕಾರಿ ಟಿ.ರಮೇಶರೆಡ್ಡಿ, ಯೋಜನಾ ನಿರ್ದೇಶಕ ಮುನಿಯಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಉಪಸ್ಥಿತರಿದ್ದರು.
ಸಭೆಯ ನಂತರ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ರೂಪ ಮರಿಯಪ್ಪ ಅವರು ಕೇಕ್ ಕತ್ತರಿಸಿ ಪರಸ್ಪರ ಶುಭ ಕೋರಿದರು ಹಾಗೂ ಮಹಿಳಾ ಸದಸ್ಯರು ಮತ್ತು ಅಧಿಕಾರಿಗಳಿಗೆ ಗುಲಾಬಿ ಹೂವಿನ ಸಸಿಗಳನ್ನು ವಿತರಿಸಲಾಯಿತು.
ಜಿಲ್ಲಾ ಪಂಚಾಯಿತಿ ಸದಸ್ಯರು ಮತ್ತು ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮಹಿಳಾ ಅಧಿಕಾರಿ ಹಾಗೂ ಮಹಿಳಾ ಸಿಬ್ಬಂದಿಗಳು ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

