ದೊಡ್ಡಬಳ್ಳಾಪುರ: ಕೋವಿಡ್ ಸೋಂಕು ಹೆಚ್ಚಾಗದಂತೆ ತಡೆಗಟ್ಟಲು ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗುತ್ತಿದ್ದು, ಕರೊನಾ ಸಂಕಷ್ಟದ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರಿಂದ ಉತ್ತಮ ಸೇವೆ ಸಲ್ಲಿಕೆಯಾಗುತ್ತಿದೆ ಎಂದು ಕಂದಾಯ ಸಚಿವ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಆರ್.ಅಶೋಕ್ ತಿಳಿಸಿದರು.
ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ವತಿಯಿಂದ ನಗರದ ಡಾ. ರಾಜ್ಕುಮಾರ್ ಕಲಾ ಮಂದಿರದಲ್ಲಿಂದು ಏರ್ಪಡಿಸಲಾಗಿದ್ದ ‘ನೀವು ಅನಾಥರಲ್ಲ’ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ವತಿಯಿಂದ ಸಾಂಕೇತಿಕವಾಗಿ ಐದು ಮಕ್ಕಳನ್ನು ದತ್ತು ಸ್ವೀಕಾರ ಪ್ರಮಾಣ ಪತ್ರವನ್ನು ವಿತರಿಸಿ, ಅವರು ಮಾತನಾಡಿದರು.
ಕೋವಿಡ್ ಎಲ್ಲರನ್ನೂ ಸಂಕಷ್ಟಕ್ಕೆ ಸಿಲುಕಿಸಿದ್ದು, ಅನಾಹುತಗಳು ಸಂಭವಿಸಿವೆ. ಪ್ರತಿಯೊಬ್ಬರು ಅಗತ್ಯ ಎಚ್ಚರಿಕೆ ವಹಿಸಿದರೆ ಕೊರೋನವನ್ನು ಮಣಿಸಬಹುದು ಎಂದರಲ್ಲದೆ, ಕೋವಿಡ್ ನಿಂದ ಮೃತಪಟ್ಟ ಬಡವರಿಗೆ ರಾಜ್ಯ ಸರ್ಕಾರದಿಂದ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ ಎಂದರು.
ಕೋವಿಡ್ ಮಾನವೀಯತೆ ಹಾಗೂ ಆತ್ಮಸಾಕ್ಷಿಯಿಂದ ಬದುಕುವಂತೆ ತಿಳಿಸಿದ್ದು, ಎಲ್ಲರಿಗೂ ಪಾಠ ಕಲಿಸಿದೆ ಎಂದ ಅವರು ಬಡವರು, ನಿರ್ಗತಿಕರು ಹಾಗೂ ಅನಾಥ ಮಕ್ಕಳಿಗೆ ಸಹಾಯ ಮಾಡುತ್ತಿರುವ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ಗೆ ಧನ್ಯವಾದಗಳನ್ನು ತಿಳಿಸಿದರು.
ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಸಿ ಹಾಗೂ ಸಾಮಾಜಿಕ ಅಂತರ ಪಾಲಿಸುವ ಮೂಲಕ ಎಲ್ಲರೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರಲ್ಲದೆ, ಡಿಸೆಂಬರ್ ಅಥವಾ ಜನವರಿ ತಿಂಗಳ ಒಳಗಾಗಿ ಎಲ್ಲರಿಗೂ ಕೋವಿಡ್ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ನಟ ಸಂಚಾರಿ ವಿಜಯ್ ನಿಧನಕ್ಕೆ ಸಂತಾಪ ಸೂಚಿಸಿದ ಅವರು, ವಿಜಯ್ ಪ್ರತಿಭಾನ್ವಿತ ನಟರಾಗಿದ್ದು, ಅನೇಕ ವರ್ಷಗಳ ನಂತರ ರಾಜ್ಯಕ್ಕೆ ರಾಷ್ಟ್ರ ಪ್ರಶಸ್ತಿ ತಂದುಕೊಟ್ಟಿದ್ದರು ಹಾಗೂ ಪರಿಸರದ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು 5 ಜನ ರೋಗಿಗಳಿಗೆ ಅಂಗಾಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ ಎಂದರು.
ಅವಧೂತ ವಿನಯ್ ಗುರೂಜಿ ಮಾತನಾಡಿ, ಪ್ರಸ್ತುತ ಸಂದರ್ಭದಲ್ಲಿ ಹಿತವಚನಕ್ಕಿಂತ ಸಮಾಜದ ಹಿತ ಬಯಸುವುದು ಮುಖ್ಯವಾಗಿದೆ. ಕಂದಾಯ ಸಚಿವ ಆರ್.ಅಶೋಕ್ ಅವರ ಕರೊನಾ ಟಾಸ್ಕ್ ಪೋರ್ಸ್ ಸಮಿತಿಯು ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮಾಡುವಲ್ಲಿ ಯಶಸ್ವಿಯಾಗಿದ್ದು, ಕೋವಿಡ್ ಸೋಂಕಿನ ಪ್ರಮಾಣ ಗಣನೀಯವಾಗಿ ಕಡಿಮೆಯಾಗುತ್ತಿದೆ ಎಂದು ತಿಳಿಸಿದರು.ಕೇವಲ ಮತ ಹಾಕುವುದಷ್ಟೇ ಪ್ರಜೆಗಳ ಕೆಲಸವಲ್ಲ, ಸಾಂಕ್ರಾಮಿಕ ರೋಗಗಳಂತಹ ಸಮಸ್ಯೆಗಳು ಬಂದಾಗ ಪಕ್ಷಾತೀತವಾಗಿ ಎಲ್ಲರೂ ಕೆಲಸ ನಿರ್ವಹಿಸಬೇಕು ಹಾಗೂ ಕೋವಿಡ್ ಸಂದರ್ಭದಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದರಲ್ಲದೆ, ಸರ್ಕಾರದ ಜೊತೆ ಕೈ ಜೋಡಿಸಿ ತಮ್ಮಿಂದಾಗುವ ಸಹಾಯ ಮಾಡಬೇಕು ಎಂದು ಅವರು ಹೇಳಿದರು.
ಇಂದಿನ ಕಾರ್ಯಕ್ರಮ ಸೇರಿದಂತೆ ಮಹಾತ್ಮ ಗಾಂಧಿ ಸೇವಾ ಟ್ರಸ್ಟ್ ವತಿಯಿಂದ ರಾಜ್ಯದಲ್ಲಿ ನಿರಂತರವಾಗಿ 47ನೇ ದಿನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಕೋವಿಡ್ ನಿಂದ ತಂದೆ ಅಥವಾ ತಾಯಿಯನ್ನು ಕಳೆದುಕೊಂಡ ಮಕ್ಕಳನ್ನು ದತ್ತು ಪಡೆದು, ಅವರ ಶಿಕ್ಷಣ, ಆಹಾರ, ಕೆಲಸ ಹಾಗೂ ಹೆಣ್ಣುಮಕ್ಕಳ ಮದುವೆಯನ್ನು ಸಹ ಟ್ರಸ್ಟ್ ವತಿಯಿಂದ ಮಾಡಲಾಗುತ್ತದೆ ಎಂದರಲ್ಲದೆ, ಕೋವಿಡ್ ನಿಂದ ಅನಾಥರಾದ ಮಕ್ಕಳಿಗೆ ಮುಖ್ಯವಾಗಿ ಅವರಿಗೆ ಶಿಕ್ಷಣ ಕೊಡಬೇಕು ಎಂಬುದು ನಮ್ಮ ಮುಖ್ಯ ಉದ್ದೇಶವಾಗಿದ್ದು, ಈಗಾಗಲೇ ರಾಜ್ಯಾದ್ಯಂತ ಜಿಲ್ಲಾ ಕೇಂದ್ರದಲ್ಲಿ ಟ್ರಸ್ಟ್ ವತಿಯಿಂದ ಅನ್ನ ಅಭಿಯಾನವನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರಿಗೆ ಮೆಡಿಕಲ್ ಹಾಗೂ ಆಹಾರ ಕಿಟ್ ವಿತರಣೆ ಮಾಡಲಾಯಿತು, ಸಾಂಕೇತಿಕವಾಗಿ ಐದು ಮಕ್ಕಳನ್ನು ದತ್ತು ಪಡೆಯಲಾಯಿತು ಹಾಗೂ ಜಿಲ್ಲಾಡಳಿತಕ್ಕೆ ಹತ್ತು ಆಕ್ಸಿಜನ್ ಕಾನ್ಸನ್ಟ್ರೇಟರ್ ಗಳನ್ನು ಹಸ್ತಾಂತರಿಸಲಾಯಿತು.
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ. ವೆಂಕಟರಮಣಯ್ಯ, ಉತ್ತರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಕೃಷ್ಣಪ್ಪ, ರಾಜ್ಯ ಕರಕುಶಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಮಹಾತ್ಮ ಗಾಂಧೀ ಸೇವಾ ಟ್ರಸ್ಟ್ ಅಧ್ಯಕ್ಷ ಡಾ. ಬೇಳೂರು ಗೋಪಾಲಕೃಷ್ಣ, ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ. ಆರ್. ರವಿಕುಮಾರ್, ಉಪವಿಭಾಗಾಧಿಕಾರಿ ಅರುಳ್ಕುಮಾರ್, ತಹಶೀಲ್ದಾರ್ ಟಿ.ಎಸ್.ಶಿವರಾಜ್ ಸೇರಿದಂತೆ ಆಶಾ ಕಾರ್ಯಕರ್ತೆಯರು ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….