ಬೆಂ.ಗ್ರಾ.ಜಿಲ್ಲೆ: ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಹೆಚ್ಚು ಮರಗಳನ್ನು ಬೆಳೆಸುವುದರಿಂದ ಉತ್ತಮ ಮಳೆಯಾಗಿ ಅಂತರ್ಜಲ ಮಟ್ಟ ಹೆಚ್ಚಾಗುವುದರಿಂದ, “ಕಾವೇರಿ ಕೂಗು” ಅಭಿಯಾನದಡಿ ರೈತರಿಗೆ ಸಸಿಗಳನ್ನು ವಿತರಿಸುವ ಮೂಲಕ ಅರಣ್ಯೀಕರಣ ಹೆಚ್ಚಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್. ರವಿಕುಮಾರ್ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಕಚೇರಿಯಲ್ಲಿಂದು ನಡೆದ “ಕಾವೇರಿ ಕೂಗು” ಕಾರ್ಯಕ್ರಮದಡಿಯಲ್ಲಿ ಅರಣ್ಯೀಕರಣ ಹೆಚ್ಚಿಸುವ ಕುರಿತ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಈಶಾ ಫೌಂಡೇಶನ್ ಮುಖಾಂತರ ನಡೆಯುತ್ತಿರುವ ಈ ಅಭಿಯಾನದಿಂದಾಗಿ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಒಂದಾಗಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿಯೂ ಅರಣ್ಯೀಕರಣ ಹೆಚ್ಚಾಗಿ, ಅಂತರ್ಜಲ ಮಟ್ಟ ಹೆಚ್ಚಾಗಲಿದೆ ಎಂದರು.
ಇತ್ತೀಚಿನ ದಿನಗಳಲ್ಲಿ ಅರಣ್ಯ ನಾಶದಿಂದಾಗಿ ಹೆಚ್ಚು ಅನಾಹುತಗಳು ಸಂಭವಿಸಿದ್ದು, ಕೆಲವು ಪ್ರದೇಶಗಳಲ್ಲಿ ಸಾವಿರಾರು ಅಡಿ ಆಳ ಕೊಳವೆ ಬಾವಿಗಳನ್ನು ಕೊರೆದರೂ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸಾಧ್ಯವಾಗದ ಹಿನ್ನೆಲೆ, ಈ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಮರಗಳನ್ನು ಬೆಳೆಸುವುದು ಉತ್ತಮ ಕಾರ್ಯವಾಗಿದೆ ಎಂದರಲ್ಲದೆ, ಈಶಾ ಫೌಂಡೇಶನ್ ಜೊತೆ ಎಲ್ಲರೂ ಕೈಜೋಡಿಸಿ ಅರಣ್ಯೀಕರಣ ಹೆಚ್ಚಿಸಬೇಕು ಎಂದು ತಿಳಿಸಿದರು. ಈ ಕಾರ್ಯಕ್ರಮದ ಕುರಿತು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ರೈತರಿಗೆ ಅಗತ್ಯ ಮಾಹಿತಿ ನೀಡಿ, ರೈತರು ಬಯಸುವ ಸಸ್ಯಗಳನ್ನು ನೀಡಿ, ಪಡೆದ ಸಸ್ಯಗಳನ್ನು ರೈತರು ತಮ್ಮ ಜಮೀನಿನಲ್ಲಿ, ಬದುಗಳಲ್ಲಿ ನೆಡುವ ಮೂಲಕ ಅರಣ್ಯ ಕೃಷಿ ಮಾಡಬಹುದು ಹಾಗೂ ಅವರ ಆದಾಯವನ್ನು ಹೆಚ್ಚಿಸಿಕೊಳ್ಳಬಹುದಾಗಿದೆ ಎಂದರು.ಸರ್ಕಾರಿ ಶಾಲೆಗಳು, ಅಂಗನವಾಡಿಗಳು, ವಸತಿ ನಿಲಯಗಳು, ಸರ್ಕಾರಿ ಕಚೇರಿಗಳ ಆವರಣದಲ್ಲಿ ಗಿಡಗಳನ್ನು ನೆಟ್ಟು, ಪೋಷಿಸಬೇಕು ಎಂದರು. ಅಲ್ಲದೆ, ಮುಂದಿನ ಪೀಳಿಗೆಗೆ ಮರಗಳೇ ಆದಾಯದ ಮೂಲಗಳಾಗಿರುವುದರಿಂದ ಮರಗಳನ್ನು ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ಆಗಸ್ಟ್ 04 ರಂದು ದೊಡ್ಡಬಳ್ಳಾಪುರ ಹಾಗೂ ದೇವನಹಳ್ಳಿಯಲ್ಲಿ ಸ್ಥಳೀಯ ಶಾಸಕರು ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ಗಿಡಗಳನ್ನು ನೆಡುವ ಮೂಲಕ ಯೋಜನೆಗೆ ಚಾಲನೆ ನೀಡಲಾಗುವುದು ಹಾಗೂ ಆಗಸ್ಟ್ 06 ರಿಂದ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಮರಮಿತ್ರ ಎಂಬ ತಂಡದೊಂದಿಗೆ ರೈತರಿಗೆ ಬೇಕಾದ ಸಸಿಗಳನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈಶಾ ಫೌಂಡೇಶನ್ನ ಸ್ವಯಂ ಸೇವಕ ನವೀನ್ ಅವರು ಮಾತನಾಡಿ, ಸದ್ಗುರುಗಳು ಮಾಡಿದಂತಹ ಜಲಾಂದೋಲನದ ಭಾಗವಾಗಿ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಮುಂದಿನ 12 ವರ್ಷಗಳಲ್ಲಿ 242 ಕೋಟಿ ಸಸಿಗಳನ್ನು ನೆಡುವ ಉದ್ದೇಶ ಹೊಂದಲಾಗಿದೆ ಎಂದು ತಿಳಿಸಿದರು. ಕಳೆದ ಕೆಲವು ದಶಕಗಳಲ್ಲಿ ನದಿ ಪಾತ್ರದ ಪ್ರದೇಶದಲ್ಲಿ ಶೇ. 87 ರಷ್ಟು ಮರಗಳನ್ನು ಕಡಿಯಲಾಗಿದ್ದು, ಇದರ ಪರಿಣಾಮವಾಗಿ ಕಾವೇರಿ ನದಿ ತನ್ನ ಹರಿವಿಕೆಯನ್ನು ಕಡಿತಗೊಳಿಸಿದೆ ಎಂದರಲ್ಲದೆ, ಸರ್ಕಾರದ ಸಹಯೋಗದಲ್ಲಿ ಮುಂದಿನ 4 ವಾರಗಳಲ್ಲಿ 1785 ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡುವ ಉದ್ದೇಶ ಹೊಂದಲಾಗಿದೆ ಹಾಗೂ ಎಲ್ಲಾ ಅಧಿಕಾರಿಗಳು ಸಹಕಾರ ನೀಡುವ ಮೂಲಕ “ಕಾವೇರಿ ಕೂಗು” ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದರು.
ಸಭೆಯ ನಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ ಸಾಂಕೇತಿಕವಾಗಿ ಗಿಡ ನೆಡುವ ಮೂಲಕ ಕಾವೇರಿ ಕೂಗು ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಹಾಗೂ ಈಶಾ ಫೌಂಡೇಶನ್ ಸ್ವಯಂ ಸೇವಕರು ಚಾಲನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮುನಿಕೃಷ್ಣಪ್ಪ, ಜಿಲ್ಲಾ ಸಾಮಾಜಿಕ ಅರಣ್ಯಾಧಿಕಾರಿ ಭಾಸ್ಕರ್, ಕೃಷಿ ಇಲಾಖೆ ಉಪ ನಿರ್ದೇಶಕಿ ವಿನುತಾ, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಹಾಂತೇಶ ಮುರುಗೋಡ ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸೇರಿದಂತೆ ಈಶಾ ಫೌಂಡೇಶನ್ನ ಸ್ವಯಂ ಸೇವಕರು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……