ದೊಡ್ಡಬಳ್ಳಾಪುರ: 70ರ ದಶಕದಲ್ಲಿನ ‘ತಬರನ ಕತೆ’ಯಲ್ಲಿನ ತಬರನಂತೆ ಸರ್ಕಾರಿ ಕಚೇರಿಗಳಿಗೆ ಜನರ ಅಲೆದಾಟವನ್ನು ತಪ್ಪಿಸುವುದೇ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಪ್ರಥಮ ಅದ್ಯತೆಯಾಗಿದೆ. ಈ ಕೆಲಸಕ್ಕೆ ಸಾರ್ವಜನಿಕರ ಸಹಕಾರವು ಮುಖ್ಯವಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಭ್ರಷ್ಟಾಚಾರ ನಿಗ್ರಹ ದಳದ ಡಿವೈಎಸ್ಪಿ ಎಚ್.ಎಸ್.ಜಗದೀಶ್ ಹೇಳಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ಎಸಿಬಿ ವತಿಯಿಂದ ನಡೆದ ಸಾರ್ವಜನಿಕರ ಅಹವಾಲು ಸ್ವೀಕಾರ ಸಭೆಯಲ್ಲಿ ಮಾತನಾಡಿದರು.
ಕೋವಿಡ್-19 ಲಾಕ್ಡೌನ್ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಕುಂದುಕೊರತೆ ಸಭೆಯನ್ನು ಪ್ರತಿ ತಿಂಗಳು ತಾಲ್ಲೂಕು ಕೇಂದ್ರಗಳಲ್ಲಿ ನಡೆಸಲಾಗುವುದು. ಸಾರ್ವಜನಿಕರೊಂದಿಗೆ ನಿರಂತರ ಸಂಪರ್ಕವನ್ನು ಹೊಂದಿರುವ ಕಂದಾಯ, ಪೊಲೀಸ್, ಕೃಷಿ, ತೋಟಗಾರಿಕೆ ಸೆಋಇದಂತೆ ವಿವಿಧ ಇಲಾಖೆಗಳಲ್ಲಿ ಕಾನೂನು ಬದ್ದವಾದ ಜನರ ಕೆಲಸಗಳನ್ನು ಮಾಡಿಕೊಡಲು ವಿನಾಕಾರಣ ವಿಳಂಭ ಮಾಡುವುದು ಸಹ ಪರೋಕ್ಷವಾಗಿ ಭ್ರಷ್ಟಾಚಾರಕ್ಕೆ ದಾರಿಮಾಡಿಕೊಟ್ಟಂತೆಯೆ. ಹೀಗಾಗಿ ಸರ್ಕಾರಿ ಇಲಾಖೆಗಳಲ್ಲಿ ಕಾಲಮಿತಿಯ ಒಳಗೆ ತಮ್ಮ ಕೆಲಸಗಳು ಆಗದೇ ಇದ್ದಾಗ ಸಾರ್ವಜನಿಕರು ಸೂಕ್ತ ದಾಖಲೆಗಳೊಂದಿಗೆ ಎಸಿಬಿಗೆ ದೂರು ಸಲ್ಲಿಬೇಕು ಎಂದರು.
ಎಸಿಬಿ ಹೊಸ ಕಾನೂನುಗಳ ಪ್ರಕಾರ ಸರ್ಕಾರಿ ಅಧಿಕಾರಿಗಳಷ್ಟೇ ಅಲ್ಲದೆ ಖಾಸಗಿ ವ್ಯಕ್ತಿಗಳ ಮೂಲಕವು ಲಂಚಕ್ಕೆ ಬೇಡಿಕೆ ಇಟ್ಟರೆ ಅವರ ವಿರುದ್ಧವು ಸಹ ಕ್ರಮ ಕೈಗೊಳ್ಳಲು ಅವಕಾಶವಿದೆ. ಕಾನೂನಿನಲ್ಲಿ ಅವಕಾಶ ಇಲ್ಲದ ಕೆಲಸವನ್ನು ತಮ್ಮ ಪರವಾಗಿ ಮಾಡಿಕೊಡುವಂತೆ ಸರ್ಕಾರಿ ಅಧಿಕಾರಿಗಳ ಮೇಲೆ ಒತ್ತಡ ಹಾಕುವುದು ಸಹ ಅಪರಾಧವಾಗಿದೆ. ಸರ್ಕಾರಿ ಅಧಿಕಾರಿಗಳು ಸಹ ಸೂಕ್ತತ ದಾಖಲೆಗಳ ಮೂಲಕ ದೂರು ನೀಡಲು ಅವಕಾಶವಿದೆ. ರಾಜ್ಯ ಸರ್ಕಾರ ಜಾರಿಗೆ ತಂದಿರುವ ‘ಸಕಾಲ’ ಆಡಳಿತದ ಬಗ್ಗೆ ಸಾರ್ವಜನಿಕರು ತಿಳೀದಿಕೊಳ್ಳಬೇಕು ಎಂದರು.
ಕುಂದುಕೊರತೆ ಸಭೆಯಲ್ಲಿ ಖಾತೆ ಬದಲಾವಣೆ, ಕೆರೆ ಅಂಗಳದಲ್ಲಿ ಅಕ್ರಮವಾಗಿ ಮಣ್ಣು ತೆಗೆಯುತ್ತಿರುವುದು, ಹುಲುಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಭೂಮಿ ಕಬಳಿಸಿರುವವರ ವಿರುದ್ಧ ಅಧಿಕಾರಿಗಳು ಕ್ರಮ ಕೈಗೊಳ್ಳದೆ ಇರುವುದು, ಒಂದೇ ಕುಟುಂಬಕ್ಕೆ 16 ಎಕರೆ ಭೂಮಿ ಮಂಜೂರು ಮಾಡಿರುವುದು, ಗ್ರಾಮಗಳಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರು ಎಸಿಬಿ ಅಧಿಕಾರಿಗಳಿಗೆ ಲಿಖಿತವಾಗಿ ದೂರುಗಳನ್ನು ಸಲ್ಲಿಸಿದರು.
ಸಭೆಯಲ್ಲಿ ತಹಶೀಲ್ದಾರ್ ಟಿ.ಎಸ್.ಶಿವರಾಜ್, ಗ್ರೇಢ್-2 ತಹಶೀಲ್ದಾರ್ ಎಂ.ಎಸ್.ರಮೇಶ್, ಎಸಿಬಿ ಇನ್ಸ್ಪೆಕ್ಟರ್ ಕುಮಾರಸ್ವಾಮಿ, ರಾಘವೇಂದ್ರ, ದೊಡ್ಡಬಳ್ಳಾಪುರ ಸರ್ಕಲ್ ಇನ್ಸ್ ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..