ಬೆಂ.ಗ್ರಾ.ಜಿಲ್ಲೆ: ವಯಸ್ಕ ಶಿಕ್ಷಣದ ಮೂಲಕ ಅನಕ್ಷರಸ್ಥರಿಗೆ ಶಿಕ್ಷಣ ನೀಡಿ, ಸಾಕ್ಷರರನ್ನಾಗಿಸಬೇಕು ಹಾಗೂ ಜಿಲ್ಲೆಯಲ್ಲಿ ಶೇ.100 ರಷ್ಟು ಸಾಕ್ಷರತೆಯನ್ನು ಸಾಧಿಸಬೇಕು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಲೋಕ ಶಿಕ್ಷಣ ಸಮಿತಿ ಹಾಗೂ ಎನ್.ಎಸ್.ಎಸ್ ಸಹಯೋಗದಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಆವರಣದಲ್ಲಿ
ನಡೆದ 55ನೇ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಎಲ್ಲರಿಗೂ ಶಿಕ್ಷಣ ದೊರೆಯಬೇಕು ಈ ನಿಟ್ಟಿನಲ್ಲಿ ಜಿಲ್ಲಾ ಲೋಕ ಶಿಕ್ಷಣ ಸಮಿತಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
2011ರ ಜನಗಣತಿಯ ಪ್ರಕಾರ ಜಿಲ್ಲೆಯಲ್ಲಿ 1,96,006 ಮಂದಿ ಅನಕ್ಷರಸ್ಥರಿದ್ದು, ಇವರಲ್ಲಿ ಪ್ರಸ್ತುತ 1,15,910 ಮಂದಿ ನವ ಸಾಕ್ಷರರಾಗಿದ್ದಾರೆ, ಬಾಕಿ ಉಳಿದಿರುವ 80,093 ಅನಕ್ಷರಸ್ಥರಿಗೂ ಸಂಜೆ ವೇಳೆಯಲ್ಲಿ ದಿನಕ್ಕೆ ಎರಡು ಗಂಟೆಗಳ ಅವಧಿಯಲ್ಲಿ ಶಿಕ್ಷಣ ನೀಡುವ ಮೂಲಕ ಶೀಘ್ರವೇ ಅವರನ್ನು ನವ ಸಾಕ್ಷರರನ್ನಾಗಿಸುವುದು ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.
ಶಾಲೆ, ಅಂಗನವಾಡಿ, ಅನಕ್ಷರಸ್ಥರ ಮನೆ, ಬೋಧಕರ ಮನೆ ಹಾಗೂ ಸಮುದಾಯ ಭವನಗಳಂತಹ ಅನುಕೂಲಕರ ಸ್ಥಳದಲ್ಲಿ ಬೋಧನೆ ಮಾಡಲಾಗುವುದು ಹಾಗೂ ಬಾಳಿಗೆ ಬೆಳಕು ಪುಸ್ತಕದ ಮೂಲಕ ಓದು, ಬರಹ ಹಾಗೂ ಸರಳ ಲೆಕ್ಕಾಚಾರ ಎಂಬ ಮೂರು ವಿಭಾಗಗಳಲ್ಲಿ ಸುಮಾರು 24 ಪಾಠಗಳನ್ನು ಕಲಿಸಿ, ಪರೀಕ್ಷೆ ನಡೆಸಲಾಗುತ್ತದೆ ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಶ್ರೇಣಿ ಸಹಿತ ಪ್ರಮಾಣ ಪತ್ರ ವಿತರಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಾಕ್ಷರತಾ ಪ್ರಮಾಣ ವಚನ ಸ್ವೀಕರಿಸಲಾಯಿತು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಾ.ಈ.ರವಿಕುಮಾರ್, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಗಂಗಮಾರೇಗೌಡ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಹನುಮಂತಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಅನಿತಾಲಕ್ಷ್ಮೀ, ದೊಡ್ಡಬಳ್ಳಾಪುರ ತಹಶೀಲ್ದಾರ್ ಶಿವರಾಜ್, ವಿಶ್ವನಾಥಪುರ ಪಬ್ಲಿಕ್ ಶಾಲೆಯ ದೈಹಿಕ ಶಿಕ್ಷಕ ರಮೇಶ್ ಸೇರಿದಂತೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..