ದೊಡ್ಡಬಳ್ಳಾಪುರ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕೋವಿಡ್ ಸಮಯದಲ್ಲಿ ಹಲವಾರು ಸೇವಾ ಕಾರ್ಯಗಳನ್ನು ನಡೆಸಲಾಗಿದೆ. ಪ್ರಸ್ತುತ ಸಾರ್ವಜನಿಕ ಶಿಕ್ಷಣ ಇಲಾಖೆಯ ಸೂಚನೆಯ ಮೇರೆಗೆ ಶಿಕ್ಷಕರ ತರಬೇತಿ ಹಾಗೂ ಶಾಲಾ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ, ಶಾಲೆಗೆ ಕರೆತರಲು ಸ್ಕೌಟ್ಸ್ ಮತ್ತು ಗೈಡ್ಸ್ನಿಂದ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ನ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂದ್ಯ ತಿಳಿಸಿದ್ದಾರೆ.
ನಗರದ ಅನಿಬೆಸೆಂಟ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರದಲ್ಲಿ ನಡೆದ ಬೆಂಗಳೂರು ವಿಭಾಗ ಮಟ್ಟದ ರೋವರ್ಸ್ ಮತ್ತು ರೇಂಜರ್ಸ್ ನಾಯಕತ್ವ ತರಬೇತಿ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಮಕ್ಕಳು ಪಠ್ಯ ಚುಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು, ಶಾಲೆ ಬಿಟ್ಟ ಮಕ್ಕಳು ಶಾಲೆಗೆ ಬರುವಂತೆ ನೆರವಾಗುವುದು ಸ್ಕೌಟ್ಸ್ ಮತ್ತು ಗೈಡ್ಸ್ ಕಾರ್ಯಕ್ರಮಗಳಲ್ಲಿ ಪ್ರಮುಖವಾಗಿದೆ ಎಂದರು.
ಕೋವಿಡ್ ಸಂದರ್ಭದಲ್ಲಿ ಸೇವೆ: ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಕೋವಿಡ್ ಸಮಯದಲ್ಲಿ ಹಲವಾರು ಸೇವಾ ಕಾರ್ಯಗಳನ್ನು ನಡೆಸಲಾಗಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್ನಿಂದ 1 ಕೋಟಿ ಮಾಸ್ಕ್ ವಿತರಣೆ, ಶಾಲಾ ಮಕ್ಕಳಿಂದ 1 ಕೋಟಿ ರೂ ದೇಣಿಗೆ ಸಂಗ್ರಹಣೆ, 1ಲಕ್ಷಕ್ಕೂ ಹೆಚ್ಚು ವಲಸೆ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ ಮಾಡಲಾಗಿದೆ. ಆರ್ಥಿಕ ಸಂಕಷ್ಟದಲ್ಲಿನ ಶಿಕ್ಷಕರಿಗೆ ನೆರವು ನೀಡಲಾಗಿದೆ. ವರ್ಚುಯಲ್ ಮೂಲಕ ಹಲವಾರು ಕಾರ್ಯಕ್ರಮಗಳು ನಡೆದಿವೆ. ವೆಬೆನಾರ್ನಲ್ಲಿ ಹಲವಾರು ಗಣ್ಯರು ಭಾಗವಹಿಸಿ ಮಾರ್ಗದರ್ಶನ ನೀಡಿದ್ದಾರೆ ಎಂದರು.
ಬಾಲಕಿಯರ ವಿದ್ಯಾರ್ಥಿನಿಲಯ: ದೊಡ್ಡಬಳ್ಳಾಪುರದ ತರಬೇತಿ ಶಿಬಿರದಲ್ಲಿ ಬಾಲಕಿಯರಿಗಾಗಿ ವಿದ್ಯಾರ್ಥಿನಿಲಯ ಸ್ಥಾಪಿಸಲು ಹಣಕಾಸು ಇಲಾಖೆಯ ಅನುಮೋದನೆಗಾಗಿ ಕಳುಹಿಸಲಾಗಿದೆ. ಅನಿಬೆಸೆಂಟ್ ಪಾರ್ಕ್ನ ನಿಜಲಿಂಗಪ್ಪ ಭವನವನ್ನು ನವೀಕರಣ ಮಾಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ ಭಟ್, ಬೆಂಗಳೂರು ಗ್ರಾ.ಜಿಲ್ಲಾ ಮುಖ್ಯ ಆಯುಕ್ತ ನಾಗರಾಜ್, ರಾಜ್ಯ ಜಂಟಿ ಕಾರ್ಯದರ್ಶಿ ರಾಮಲತ, ಶಿಬಿರದ ತರಬೇತಿದಾರರಾದ ನರೇಂದ್ರ ಕುಮಾರ್ ಲೋಕೇಶ್, ರೇಂಜರ್ ನಾಯಕಿ ಶುಭಾ, ಶಿಬಿರದ ಸಲಹೆಗಾರ ಪ್ರೋ.ಎಂ.ಜಿ.ಚಂದ್ರಶೇಖರಯ್ಯ ಹಾಜರಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….