ದೊಡ್ಡಬಳ್ಳಾಪುರ: ತಾಲೂಕು ಪಶುಪಾಲನಾ ಮತ್ತು ಪಶು ವ್ಯೆದ್ಯಾಸೇವಾ ಇಲಾಖೆ, ಜಿಲ್ಲಾ ಪಂಚಾಯತಿ ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘದ ಸಹಯೋಗದಲ್ಲಿ ವಿಶ್ವ ರೇಬಿಸ್ ದಿನಾಚರಣೆ ಅಂಗವಾಗಿ ನಗರದ ಬಸ್ ನಿಲ್ದಾಣದ ಬಳಿಯಿರುವ ಪಶು ಆಸ್ಪತ್ರೆ ಆವರಣದಲ್ಲಿ ಸಾಕು ಪ್ರಾಣಿ ಮಾಲೀಕರಿಗೆ ರೇಬಿಸ್ ರೋಗದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮ ಹಾಗೂ ಶ್ವಾನಗಳಿಗೆ ಹಾಗೂ ಬೆಕ್ಕುಗಳಿಗೆ ಉಚಿತ ರೆಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಪಶುಪಾಲನಾ ಮತ್ತು ಪಶು ವ್ಯೆದ್ಯಾಸೇವಾ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಡಾ.ಜಿ.ಎಂ.ನಾಗರಾಜ್ ಮಾತನಾಡಿ, ಪ್ರತಿವರ್ಷ ಸೆ. 28 ರಂದು ರೇಬಿಸ್ ಸೋಂಕಿನ ಬಗ್ಗೆ ವಿಶ್ವದಾದ್ಯಂತ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವ ರೇಬಿಸ್ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಸಾಮಾನ್ಯವಾಗಿ ಸಾಕು ಪ್ರಾಣಿಗಳ ಕಡಿತದಿಂದಾಗಿ ಅದರಲ್ಲೂ ಹುಚ್ಚುನಾಯಿ ಕಡಿತದಿಂದಾಗಿಯೇ ಬರುವಂತಹ ರೇಬಿಸ್ ಕಾಯಿಲೆಯಿಂದ ಜಗತ್ತಿನಾದ್ಯಂತ ಬಹಳಷ್ಟು ಮಂದಿ ಸಾವನಪ್ಪಿತ್ತಿದ್ದಾರೆ. ಈ ದಿಸೆಯಲ್ಲಿ ಇಂದು ರಾಜ್ಯಾದ್ಯಂತ ಪಶುಪಾಲನಾ ಇಲಾಖೆಯಿಂದ ಉಚಿತವಾಗಿ ರೇಬಿಸ್ ಲಸಿಕೆ ಹಾಕಲಾಗುತ್ತಿದ್ದು, ಶ್ವಾನಗಳು ಸೇರಿದಂತೆ ಸಾಕು ಪ್ರಾಣಿಗಳಿಗೆ ರೇಬಿಸ್ ಲಸಿಕೆ ಹಾಕಿಸುವ ಮೂಲಕ ಮುಂಜಾಗ್ರತೆ ವಹಿಸಬೇಕಿದೆ ಎಂದರು.
ಪಶುಪಾಲನಾ ಮತ್ತು ಪಶುವ್ಯೆದ್ಯಾಸೇವಾ ಇಲಾಖೆ ತಾಲೂಕು ಸಹಾಯಕ ನಿರ್ದೇಶಕ ಡಾ.ಎಂ.ಅಂಜನಪ್ಪ ಮಾತನಾಡಿ, ರೇಬಿಸ್ಗೆ ಮೊದಲು ಲಸಿಕೆ ಕಂಡುಹಿಡಿದ ಲೂಯಿ ಪಾಶ್ಚರ್ ಮರಣ ಹೊಂದಿದ ದಿನವನ್ನು 2007ರಿಂದ ವಿಶ್ವ ರೇಬಿಸ್ ದಿನವೆಂದು ಆಚರಿಸಲಾಗುತ್ತಿದ್ದು, ವಿಶ್ವದಾದ್ಯಂತ ರೇಬಿಸ್ ಕುರಿತು ಜಾಗೃತಿ ಮೂಡಿಸುವುದು ಈ ದಿನಾಚರಣೆಯ ಮೂಲ ಆಶಯವಾಗಿದೆ. ರೇಬೀಸ್ ವಾಸ್ತವಾಂಶಗಳು ತಿಳಿದಿರಲಿ, ಭಯ ಬೇಡ ಎನ್ನುವುದು ಈ ವರ್ಷದ ಧ್ಯೇಯ ವಾಕ್ಯವಾಗಿದ್ದು, ರೇಬಿಸ್ ಕುರಿತಂತೆ ಅರಿವು ಮೂಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಪಶು ವೈದ್ಯರಾದ ಡಾ.ವಿಶ್ವನಾಥ್, ಡಾ.ಮಂಜುನಾಥ್ ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……