ಬೆಳಗಾವಿ: ಗೌರಿಬಿದನೂರು ತಾಲೂಕಿನ ಕುಡುಮಲಕುಂಟೆ ಕೈಗಾರಿಕಾ ಪ್ರದೇಶದಲ್ಲಿ ವಿದ್ಯುತ್ ವಾಹನಗಳ ಉತ್ಪಾದನಾ ಘಟಕ ಆರಂಭಿಸಲು ಕ್ರಮ ವಹಿಸುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರಗೇಶ್ ನಿರಾಣಿ ಅವರು ಭರವಸೆ ನೀಡಿದರು.
ವಿಧಾನ ಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ಶಿವಶಂಕರ ರೆಡ್ಡಿ ಅವರ ಪ್ರಶ್ನೆಗೆ ಉತ್ತರಿಸಿದ ಅವರು ಒಂದು ತಿಂಗಳ ಒಳಗಾಗಿ ಕುಡುಮಲಕುಂಟೆ ಕೈಗಾರಿಕಾ ಪ್ರದೇಶಕ್ಕೆ ಹೊಂದಿಕೊಡಿರುವ ಗೌಡಸಂಘ, ಮತ್ತು ದೊಡ್ಡಕುರುಗೊಡು ಗ್ರಾಮಗಳ ಜಮೀನನ್ನು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸಲಾಗುವುದು ಎಂದರು.
ಕುಡಮಲಕುಂಟೆಯಲ್ಲಿ ಸ್ಥಳೀಯರಿಗೆ ಉದ್ಯೋಗ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೆ.ಐ.ಎ.ಡಿ.ಬಿ. ಕೈಗಾರಿಕಾ ಪ್ರದೇಶಗಳಲ್ಲಿ ಬೃಹತ್ ಉದ್ದಿಮೆಗಳನ್ನು ಸ್ಥಾಪಿಸಲು ಬಂಡವಾಳಗಾರರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು. ರಾಜ್ಯ ಎಲ್ಲಾ ಕೈಗಾರಿಕಾ ಪ್ರದೇಶಗಳಲ್ಲಿ ಕಾಯ್ದಿಟ್ಟ ಭೂಮಿಗಳಲ್ಲಿ ಸಮಗ್ರ ಕೈಗಾರಿಕಾ ಟೌನ್ಶಿಪ್ ಸ್ಥಾಪನೆಗೆ ಉದ್ದಿಮೆಗಳನ್ನು ಆಹ್ವಾನಿಸಲಾಗುವುದು. ಇದರಿಂದ ಕೈಗಾರಿಕೆಯ ಜೊತೆಗೆ ಅಲ್ಲಿ ದುಡಿಯುವ ಕಾರ್ಮಿಕರಿಗೆ ವಸತಿ ಸೇರಿದಂತೆ ನಾಗರಿಕ ಸೌಲಭ್ಯಗಳ ಒಳಗೊಂಡ ಕೈಗಾರಿಕಾ ಟೌನ್ಶಿಪ್ ಸ್ಥಾಪಿಸುವುದರಿಂದ ಸಾಗಾಣಿಕೆ ವೆಚ್ಚ, ಸಂಚಾರಿ ವ್ಯವಸ್ಥೆ ಒತ್ತಡ ಕಡಿಮೆಯಾಗಲಿದೆ ಎಂದು ಹೇಳಿದರು.
ರೈತರ ಖಾತೆಗೆ ನೇರ ಹಣ ವರ್ಗಾವಣೆ: ಕೈಗಾರಿಕೆಗಳಿಗೆ ಭೂಸ್ವಾಧೀನ ಸಂದರ್ಭದಲ್ಲಿ ನೇರವಾಗಿ ರೈತರೊಂದಿಗೆ ವ್ಯವಹಾರ ಮಾಡಲಾಗುತ್ತದೆ. ಅವರ ಖಾತೆಗೆ ಹಣ ಜಮೆ ಮಾಡುವ ವ್ಯವಸ್ಥೆ ಜಾರಿಯಲ್ಲಿದೆ. ಮಧ್ಯವರ್ತಿಗಳಿಗೆ ಅವಕಾಶ ಇರುವುದಿಲ್ಲ. ಇದರಿಂದ ಪರಿಹಾರ ಹಣ ಪಡೆಯುವಲ್ಲಿ ರೈತರು ಲಂಚಕೊಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸಚಿವ ಮುರಗೇಶ್ ನಿರಾಣಿ ಸ್ಪಷ್ಟಪಡಿಸಿದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….