ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರ ಜಾರಿಗೆ ತಂದ ಮತಾಂತರ ನಿಷೇಧ ಕಾಯ್ದೆಯನ್ನು ವಿರೋಧಿಸಿ, ನಗರದ ಬಸ್ ನಿಲ್ದಾಣದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿವಿಧ ಸಂಘಟನೆಗಳ ಕಾರ್ಯಕರ್ತರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆಗಳನ್ನು ಕೂಗಿ, ಮಸೂದೆ ಹಿಂಪಡೆಯುವಂತೆ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಮುಖಂಡರು, ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸದನದಲ್ಲಿ ಅಂಗೀಕರಿಸಿದ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿದೇಯಕ- 2021 ಮಸೂದೆಯು ಸಂವಿಧಾನಬದ್ಧ ಧಾರ್ಮಿಕ ಸ್ವಾತಂತ್ರ್ಯದ ಮೂಲಭೂತ ಹಕ್ಕನ್ನು ಕಸಿಯುವ ಸಂವಿಧಾನ ವಿರೋಧಿ ಕ್ರಮವಾಗಿದೆ.
ಸಮಾನತೆ-ಸಾಮಾಜಿಕ ನ್ಯಾಯಗಳೆಂಬ ಉದಾತ್ತ ಮಾನವೀಯ ತತ್ವಗಳ ಆಧಾರದಲ್ಲಿ ಒಂದು ಪ್ರಜಾಸತ್ತಾತ್ಮಕ, ಧರ್ಮನಿರಪೇಕ್ಷ ರಾಷ್ಟ್ರವಾಗಿ ಘೋಷಿಸಿಕೊಂಡಿರುವ ಭಾರತವು ಸಂವಿಧಾನದ 25 ನೇ ಅನುಚ್ಛೇದದಲ್ಲಿ ದೇಶದ ಪ್ರತಿಯೊಬ್ಬ ಪ್ರಜೆಯು ತನಗೆ ಇಷ್ಟ ಬಂದ ಮತ ಧರ್ಮವನ್ನು ಅನುಸರಿಸುವ, ಯಾವುದೇ ಧರ್ಮದ ವಿಚಾರಗಳನ್ನು ಪ್ರಚಾರ ಮಾಡುವ, ಯಾವುದೇ ಮತ ಧರ್ಮವನ್ನು ಅನುಸರಿಸದೆ ಇರುವ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ಖಾತ್ರಿಪಡಿಸಿದೆ. ಕರ್ನಾಟಕ ಸರ್ಕಾರ ವಿಧಾನಸಭೆ ಅವೇಶನದಲ್ಲಿ ಮಂಡಿಸಿದ ಈ ವಿದೇಯಕವು ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷಗಳ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನಗಳ ಮೂಲಕ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಮತಾಂತರ ಆಗುವುದನ್ನು ತಡೆಯುವ ಉದ್ದೇಶವನ್ನು ಹೊಂದಿದೆ ಎಂದು ಸರ್ಕಾರ ಹೇಳಿಕೊಂಡಿದೆ ಆದರೆ ವಾಸ್ತವವಾಗಿ ಮಸೂದೆಯು ಜನರ ಸಂವಿಧಾನಬದ್ಧ ಹಕ್ಕನ್ನು ಕಿತ್ತುಕೊಳ್ಳುವ ಒಂದು ಸರ್ವಾಧಿಕಾರಿ ಕ್ರಮವಾಗಿದೆ ಎಂದು ಆರೋಪಿಸಿದರು.
ಬಲಾತ್ಕಾರ ಮತ್ತು ಆಮಿಷದ ಮತಾಂತರವನ್ನು ತಡೆಯುವ ಉದ್ದೇಶವೆಂದು ಹೇಳಲಾದ ಈ ಮಸೂದೆಯು ಹಲವು ಕರಾಳ ಸ್ವರೂಪದ ಅಘಾತಕಾರಿ ಕಟ್ಟಳೆಗಳು ಮತ್ತು ನಿಯಮಗಳನ್ನು ಒಳಗೊಂಡಿದ್ದು ಸಮಾಜದ ಧಾರ್ಮಿಕ ಅಲ್ಪಸಂಖ್ಯಾತರನ್ನು ಗುರಿ ಮಾಡಿಕೊಂಡಿದೆ ಎಂಬುದು ಸ್ಪಷ್ಟವಾಗಿ ಕಾಣುತ್ತದೆ. ಯಾವುದೇ ಧಾರ್ಮಿಕ ಸಂಸ್ಥೆಯು ನಡೆಸುವ ಶಾಲೆ ಅಥವಾ ಕಾಲೇಜಿನಲ್ಲಿ ಉಚಿತ ಶಿಕ್ಷಣ, ಉದ್ಯೋಗ ನೀಡುವುದನ್ನು ಸಹ ಮತಾಂತರದ ಉದ್ದೇಶದ ಆಮಿಷಗಳ ಪಟ್ಟಿಯಲ್ಲಿ ಸೇರಿಸುವ ಮೂಲಕ ಶತಮಾನಗಳ ಕಾಲ ಮಹಿಳೆಯರು ಸೇರಿದಂತೆ ಅಸ್ಪುರ್ಷ್ಯರು ಮತ್ತು ಶೂದ್ರರಿಗೆ ಅಕ್ಷರ ಜ್ಞಾನವನ್ನು ವಂಚಿಸಿದ ದೇಶದಲ್ಲಿ ಶೋಷಿತ ಸಮುದಾಯಗಳಿಗೆ ಭಾರತದ ಬಹಳಷ್ಟು ಭಾಗಗಳಲ್ಲಿ ಅಕ್ಷರದ ಬೆಳಕು ಸಿಕ್ಕಿದ್ದೇ ಧಾರ್ಮಿಕ ಸಂಸ್ಥೆಗಳ ಶಾಲಾ ಕಾಲೇಜುಗಳ ಮೂಲಕ ಎಂಬ ಅಂಶವನ್ನು ಮರೆ ಮಾಚಲಾಗಿದೆ ಎಂದು ಆರೋಪಿಸಿದರು.
ಹಿಂದುಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎನ್ನುವ ಆರೋಪವಿದೆ. ಆದರೆ ಹಿಂದುಗಳ ಸಂಖ್ಯೆ ಹೆಚ್ಚಾಗಿದ್ದು, ಕ್ರೈಸ್ತ ಸಮುದಾಯದ ಪ್ರಮಾಣ 2.8 ರಿಂದ 1.8ಕ್ಕೆ ಇಳಿದಿದೆ. ಮತಾಂತರ ಕಾಯ್ದೆ ಜಾರಿಗೆ ತರುತ್ತಿರುವ ಹುನ್ನಾರ ಅರ್ಥಮಾಡಿಕೊಳ್ಳಬೇಕಿದೆ ಎಂದರು.
ಪ್ರತಿಭಟನೆಯಲ್ಲಿ ಪ್ರಾಂತ ರೈತ ಸಂಘ, ಕನ್ನಡ ಪಕ್ಷ, ಸಂವಿಧಾನ ರಕ್ಷಣೆಗಾಗಿ ನಾಗರೀಕ ವೇದಿಕೆ, ಕರ್ನಾಟಕ ರಾಜ್ಯ ರೈತ ಶಕ್ತಿ ಸಂಘ, ಕ್ರೈಸ್ತ ಸಂಘಟನೆ, ಮುಸ್ಲಿಂ ಸಂಘಟನೆಯ, ದಲಿತ ಸಂಘಟನೆ, ಸಿಐಟಿಯು ಜಿಲ್ಲಾ ಸಮಿತಿ ಸೇರಿದಂತೆ ಅನೇಕರು ಇದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….