
ಬೆಂಗಳೂರು: ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಹಿರಿಯ ಕವಿ, ಸಾಹಿತಿ, ವಿಮರ್ಶಕ, ನಾಟಕಕಾರ, ಪ್ರೊಫೆಸರ್ ಚಂದ್ರಶೇಖರ್ ಪಾಟೀಲ್ (ಚಂಪಾ) ಅವರು ನಿಧನರಾದ ವಿಷಯದಿಂದ ತುಂಭಾ ದುಃಖಿತನಾಗಿದ್ದೇನೆ.
ಹಾವೇರಿ ಜಿಲ್ಲೆಯ ಹತ್ತಿಮತ್ತೂರಿನವರಾದ ಚಂಪಾ ಅವರು ಒಬ್ಬ ಕ್ರಾಂತಿಕಾರಿ ಸಾಹಿತಿ. ಕನ್ನಡ ನಾಡು-ನುಡಿಗೆ ಅವರು ಸಲ್ಲಿಸಿದ ಕೊಡುಗೆ ಅಪಾರ. ಗೋಕಾಕ್ ಚಳವಳಿ ಸೇರಿದಂತೆ ಕನ್ನಡಕ್ಕಾಗಿ ನಡೆದ ಹಲವಾರು ಹೋರಾಟಗಳಲ್ಲಿ ಮುಂಚೂಣಿಯಾಗಿ ನಿಂತವರು. ರಾಜ್ಯದಲ್ಲಿ ಕನ್ನಡ ಭಾಷಾ ಮಾಧ್ಯಮ ಕಲಿಕೆಗೆ ಒತ್ತು ನೀಡಿದರು.
ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇಂಗ್ಲಿಷ್ ವಿಭಾಗದಲ್ಲಿ ಅವರು ಪ್ರಾಧ್ಯಾಪಕರಾಗಿ ಚೇರ್ಮನ್ ಆಗಿ ಸೇವೆ ಸಲ್ಲಿಸಿದ್ದಾರೆ. ಸಂಕ್ರಮಣ ಎಂಬ ಸಾಹಿತ್ಯ ಪತ್ರಿಕೆಯ ಸಂಪಾದಕತ್ವದ ಸಾರಥ್ಯವನ್ನು ಅವರು ವಹಿಸಿದ್ದರು. ಅವರು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಕನ್ನಡ ಸಾಹಿತ್ಯ ಕ್ಷೇತ್ರ ಬಡವಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬದವರಿಗೆ ಹಾಗೂ ಅವರ ಅಭಿಮಾನಿಗಳಿಗೆ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಂತಾಪ ಸೂಚಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….