ದೊಡ್ಡಬಳ್ಳಾಪುರ: ಸದೃಢ ಪ್ರಜಾಪ್ರಭುತ್ವ ನಿರ್ಮಾಣದಲ್ಲಿ ಮತದಾನದ ಪಾತ್ರ ಅವಶ್ಯವಾಗಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ತಿಳಿಸಿದರು.
ಭಾರತ ಚುನಾವಣಾ ಆಯೋಗ, ತಾಲೂಕು ಆಡಳಿತ, ಸಹಯೋಗದಲ್ಲಿ ನಗರದ ಡಾ.ರಾಜ್ಕುಮಾರ್ ಕಲಾಮಂದಿರದಲ್ಲಿ ನಡೆದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಾತಿ, ಧರ್ಮ ಬೇಧಗಳನ್ನು ಲೆಕ್ಕಿಸದೇ ನಿರ್ಬಯವಾಗಿ ತಮ್ಮ ಹಕ್ಕನ್ನು ಚಲಾಯಿಸಲು ಯುವಕರು ಮುಂದಾಗಬೇಕು ಎಂದರು.
ಉತ್ತಮವಾದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಲು ಪ್ರಜಾಪ್ರಭುತ್ವದಲ್ಲಿ ಮತದಾನದ ಮೂಲಕ ಅವಕಾಶ ಕಲ್ಪಿಸಿದ್ದು, ಮತ ಚಲಾಯಿಸುವುದು ಪ್ರತಿಯೊಬ್ಬರ ಜವಾಬ್ದಾರಿ, ಹಕ್ಕು ಹಾಗೂ ಕರ್ತವ್ಯವಾಗಿದೆ. ದೇಶಕ್ಕೆ ಒಳ್ಳೆಯ ಆಡಳಿತವನ್ನು ತರಲು ಚುನಾವಣೆಯ ಮೂಲಕ ಆಯ್ಕೆ ಮಾಡಲಾಗುತ್ತಿದ್ದು, ಯುವ ಜನತೆ ಮತದಾನದ ಮಹತ್ವವನ್ನು ಅರಿತು ಮತದಾನ ಮಾಡಬೇಕೆಂದು ತಿಳಿಸಿದರು.
ತಹಶೀಲ್ದಾರ್ ಮೋಹನಕುಮಾರಿ ಮಾತನಾಡಿ, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿಯಬಲ್ಲ ಆರಂಭಿಕ ಹಂತವೇ ಚುನಾವಣಾ ಪ್ರಕ್ರಿಯೆಯಾಗಿದ್ದು, ಯುವ ಮತದಾರರು ಪ್ರತಿ ಚುನಾವಣೆಯ ಮತದಾನದಲ್ಲಿ ತಪ್ಪದೇ ತೊಡಗಿಸಿಕೊಂಡಾಗ ಮಾತ್ರ ಪ್ರಜಾಪ್ರಭುತ್ವದ ಆಶಯಗಳು ಅರ್ಥಪೂರ್ಣವಾಗಲಿದೆ.
ಮತದಾನದ ಮಹತ್ವ ಹಾಗೂ ಭಾರತ ಚುನಾವಣಾ ಆಯೋಗ ಸ್ಥಾಪಿಸಿದ ನೆನಪಿಗಾಗಿ 2011 ರಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಮಾಡಲಾಗುತ್ತಿದೆ. ಸಾರ್ವತ್ರಿಕ ಚುನಾವಣೆಗಳಲ್ಲಿ ಶೇ.100 ಮತದಾನವಾದಾಗ ಮಾತ್ರ ಪ್ರಜಾಫ್ರಭುತ್ವ ವ್ಯವಸ್ಥೆ ಬಲಗೊಳ್ಳಲಿದೆ. ಆದರೆ ಚುನಾವಣೆಗಳಲ್ಲಿ ಶೇ.65 ಮತದಾನಗಳಾಗುತ್ತಿರುವುದು ಉತ್ತಮ ಬೆಳವಣಿಗೆಯಲ್ಲ. ಹಲವಾರು ದೇಶಗಳಲ್ಲಿ ಮತದಾನವನ್ನು ಕಡ್ಡಾಯಗೊಳಿಸಲಾಗಿದೆ. ಆದರೆ ನಮ್ಮ ದೇಶದಲ್ಲಿ ಮತದಾನ ಇನ್ನೂ ಕಡ್ಡಾಯವಾಗಿಲ್ಲ. ಮತದಾನ ಮಾಡಲು ಯಾವುದೇ ತಾರತಮ್ಯವಿಲ್ಲ. 18 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾನಕ್ಕೆ ಅರ್ಹರಾಗಿದ್ದು, ಮತದಾರರ ಪಟ್ಟಿಯಲ್ಲಿ ತಮ್ಮ ನೋಂದಾಯಿಸಿಕೊಳ್ಳುವುದಷ್ಟೇ ಅಲ್ಲದೇ ಮತದಾನ ಪ್ರಾಮುಖ್ಯವನ್ನು ಅರಿಯಬೇಕಿದೆ ಎಂದ ಅವರು ಮತದಾರರ ಹೆಸರಗಳನ್ನು ನೋಂದಣಿ ಹಾಗೂ ಪರಿಷ್ಕರಣೆಯಲ್ಲಿ ಮತಗಟ್ಟೆ ಅಕಾರಿಗಳ ಪಾತ್ರ ಮಹತ್ವದ್ದಾಗಿದೆ. ಯಾವುದೇ ಲೋಪಗಳಾಗದಂತೆ ಮತದಾರರ ಪಟ್ಟಿಯನ್ನು ಪರಿಷ್ಕರಿಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಮತದಾರರ ಜಾಗೃತಿಗಾಗಿ ಪ್ರತಿಜ್ಞಾವಿ ಬೋಧಿಸಲಾಯಿತು.
ಉತ್ತಮವಾಗಿ ಕಾರ್ಯ ನಿರ್ವಹಿಸಿದ ಮತಗಟ್ಟೆ ಅಧಿಕಾರಿಗಳಿಗೆ ಪ್ರಶಂಸಾ ಪತ್ರ ನೀಡಲಾಯಿತು.
ಚುನಾವಣಾ ಶಾಖೆಯ ಸಿಬ್ಬಂದಿ ವಿ.ರವಿಕುಮಾರ್ ಅವರನ್ನು ವಿಶೇಷವಾಗಿ ಅಭಿನಂದಿಸಲಾಯಿತು.
ನೂತನವಾಗಿ ನೋಂದಾಯಿಸಿದ ಮತದಾರರಿಗೆ ಗುರುತಿನ ಚೀಟಿಗಳನ್ನು ವಿತರಿಸಲಾಯಿತು. ಮತದಾನದ ಕುರಿತಾಗಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಚುನಾವಣಾ ಶಿರಸ್ತೇದಾರ್ ಕೆ.ಕಿರಣ್ ಕುಮಾರ್, ಕೊಂಗಾಡಿಯಪ್ಪ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಿ.ಎನ್.ಬಾಬು, ಪ್ರಾಂಶುಪಾಲರಾದ ಆನಂದ ಮೂರ್ತಿ, ಸಮಾಜ ಕಲ್ಯಾಣ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಸೋಮಶೇಖರ್, ಸಿಡಿಪಿಓ ಅನಿತಾಲಕ್ಷ್ಮೀ, ನಗರಸಭೆ ಚುನಾವಣಾ ಶಾಖೆಯ ಸುಲ್ತಾನ್, ನಗರ ಠಾಣೆ ಸಬ್ ಇನ್ಸ್ಪಕ್ಟರ್ ಗೋವಿಂದ್, ಪ್ರಾಧ್ಯಾಪಕ ಸದಾಶಿವ, ರಾಮಚಂದ್ರಗೌಡ ಭಾಗವಹಿಸಿದ್ದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….