ದೊಡ್ಡಬಳ್ಳಾಪುರ: ಪವರ್ ಸ್ಟಾರ್ ಡಾ.ಪುನೀತ್ ರಾಜ್ಕುಮಾರ್ ಅವರ ಮೊದಲ ವರ್ಷದ ಸ್ಮರಣೆ ಅಂಗವಾಗಿ ತಾಲೂಕಿನ ವಿವಿಧೆಡೆಗಳಲ್ಲಿ ಪುನೀತ್ ಸ್ಮರಣೆ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದ ಅಂಗವಾಗಿ ಪುನೀತ್ ರಾಜ್ಕುಮಾರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರ ಸಾಧನೆಗಳನ್ನು ಸ್ಮರಿಸಲಾಯಿತು. ಮೊದಲನೇ ವರ್ಷದ ಸ್ಮರಣೆಯ ಅಂಗವಾಗಿ ಅನ್ನಸಂತರ್ಪಣೆ ಕಾರ್ಯಕ್ರಮಗಳು ಜರುಗಿದವು.

ನಗರದ ಹೊರಹೊಲಯದ ಡಿಕ್ರಾಸ್ ಮುತ್ಸಂದ್ರದಲ್ಲಿ ನಡೆದ ಪುನೀತ್ ಸ್ಮರಣೆ ಕಾರ್ಯಕ್ರಮದಲ್ಲಿ ಅನ್ನ ಸಂತರ್ಪಣೆ ನಡೆಯಿತು.
ಇದೇ ವೇಳೆ ಕ್ಷಯ ರೋಗಿಗಳನ್ನು ದತ್ತು ಪಡೆದಿರುವ ಇಲ್ಲಿನ ಅಸಂಘಟಿತ ಕಾರ್ಮಿಕರ ಘಟಕದ ಜಿಲ್ಲಾ ಉಪಾಧ್ಯಕ್ಷೆ ನಾಗಲಕ್ಷ್ಮಿ ಅವರು ಕ್ಷಯ ರೋಗಿಗಳಿಗೆ ಪೌಷ್ಠಿಕ ಆಹಾರದ ಕಿಟ್ಗಳನ್ನು ವಿತರಣೆ ಮಾಡುವ ಮೂಲಕ ಅಪ್ಪು ಸ್ಮರಣೆಯನ್ನು ಸಾರ್ಥಕಗೊಳಿಸಿದ್ದು ವಿಶೇಷವಾಗಿತ್ತು.
ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಅಧ್ಯಕ್ಷ ಹುಲಿಕಲ್ ನಟರಾಜ್ ಮಾತನಾಡಿ, ಪುನೀತ್ ರಾಜ್ಕುಮಾರ್ ಅವರ ಸಾಮಾಜಿಕ ಕಳಕಳಿ ವಿಚಾರಗಳು ಇಂದಿನ ಯುವ ಜನತೆಗೆ ಸೂರ್ತಿಯಾಗಬೇಕಿದೆ. ಅಗಾಧ ಪ್ರತಿಭೆ ಹೊಂದಿದ್ದ ಪುನೀತ್ ರಾಜ್ಕುಮಾರ್ ಕನ್ನಡ ಚಿತ್ರರಂಗಕ್ಕೆ ಒಂದು ಮುಕುಟಪ್ರಾಯವಾಗಿದ್ದರು. ಇದಲ್ಲದೇ ಅವರು ಸದ್ದಿಲ್ಲದೇ ಮಾಡಿದ ಸಾಮಾಜಿಕ ಸೇವೆ ಅಜರಾಮರವಾಗಿದೆ ಎಂದರು.
ನಗರಸಭಾ ಸದಸ್ಯ ಟಿ.ಎನ್.ಪ್ರಭುದೇವ್ ಮಾತನಾಡಿ ಪುನೀತ್ ರಾಜ್ ಕುಮಾರ್ ಅವರ ಅಗಲಿಕೆಯಿಂದ ನಾವ್ಯಾರು ಇನ್ನೂ ಹೊರ ಬಂದಿಲ್ಲ ಅವರ ಅಗಲಿಕೆಯ ನೋವು ಇನ್ನೂ ಇದೆ. ಅವರ ಕೊನೆಯ ಚಿತ್ರ ಗಂಧದ ಗುಡಿ ಚಿತ್ರವನ್ನು ಕುಟುಂಬ ಸಮೇತರಾಗಿ ವೀಕ್ಷಿಸಿ ಅವರ ಸಂದೇಶಗಳನ್ನು ಸಾಕಾರಗೊಳಿಸಬೇಕಿದೆ ಎಂದರು.
ಇದೇ ವೇಳೆ ಪುನೀತ್ ರಾಜ್ಕುಮಾರ್ ಸ್ಮರಣೆಯಲ್ಲಿ ಜಯಮ್ಮ ಸಿದ್ದರಾಜು ಅವರ ಪುತ್ರ ಸತೀಶ್ ಅವರು ಕ್ಷಯರೋಗಿಗಳನ್ನು ದತ್ತು ಪಡೆದು ಅವರಿಗೆ ಪೌಷ್ಟಿಕಾಂಶಗಳ ದಿನಸಿ ಕಿಟ್ಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ರೇಣುಕಾ ಯಾದವ್, ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕದ ಜಿಲ್ಲಾ ಉಪಾಧ್ಯಕ್ಷೆ ನಾಗಲಕ್ಷ್ಮೀ, ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ರವಿಕಿರಣ್, ಕ್ಷಯರೋಗ ನಿರ್ಮೂಲನಾ ಘಟಕದ ಯುವರಾಜ್, ಮುಖಂಡರಾದ ಲಕ್ಷ್ಮೀನಾರಾಯಣ್, ಕೃಷ್ಣಪ್ರಸಾದ್ ಮೊದಲಾದವರು ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
