ದೊಡ್ಡಬಳ್ಳಾಪುರ, (ನ.27): ಶುಕ್ರವಾರ ರಾತ್ರಿ ತಾಲ್ಲೂಕಿನ ಜಿ.ಹೊಸಹಳ್ಳಿ ಗ್ರಾಮದ ಕರ್ನಾಟಕ ಗ್ರಾಮೀಣ ಬ್ಯಾಂಕಿನ ಬಾಗಿಲನ್ನು ಗ್ಯಾಸ್ ಕಟರ್’ನಿಂದ ಕತ್ತರಿಸಿ ಸುಮಾರು ರೂ 3.50 ಕೋಟಿ ಚಿನ್ನಾಭರಣ ಹಾಗೂ ಸುಮಾರು ರೂ14 ಲಕ್ಷ ನಗದು ಕಳವು ಮಾಡಿರುವ ಪ್ರಕರಣ ಪೊಲೀಸರಿಗೆ ಸವಾಲಾಗಿ ಪರಿಣಮಿಸಿದೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಪತ್ತೆಗಾಗಿ ವಿಶೇಷ ಪೊಲೀಸ್ ತಂಡ ರಚಿಸಲಾಗಿದ್ದು, ಬ್ಯಾಂಕಿನಲ್ಲಿದ್ದ ಸಿಸಿಟಿವಿ ವಿಡಿಯೋ ಪರಿಶೀಲನೆ ಸೇರಿದಂತೆ ಎಲ್ಲಾ ರೀತಿಯ ಆಧುನಿಕ ತನಿಖಾ ವಿಧಾನಗಳನ್ನು ಅನುಸರಿಸಲಾಗುತ್ತಿದೆ.

ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳು ಸೇರಿದಂತೆ ಇತರೆಡೆಗಳಲ್ಲಿನ ಚಿನ್ನಾಭರಣ ಅಂಗಡಿಗಳತ್ತಲು ಪೊಲೀಸರು ಹದ್ದಿನಕಣ್ಣು ಇರಿಸಿದ್ದಾರೆ. ಕಳ್ಳತನ ಪ್ರಕರಣ ನಡೆದು ಸುಮಾರು 48 ಗಂಟೆಗಳು ಕಳೆದಿದ್ದರು ಕಳ್ಳರ ಬಗ್ಗೆ ಪೊಲೀಸರಿಗೆ ಖಚಿತ ಸುಳಿವು ದೊರೆತಿಲ್ಲ ಎನ್ನಲಾಗಿದೆ.
ಜಿ.ಹೊಸಹಳ್ಳಿ ಗ್ರಾಮದಲ್ಲಿನ ಕರ್ನಾಟಕ ಗ್ರಾಮೀಣ ಬ್ಯಾಂಕ್ ಇರುವ ಕಟ್ಟಡ ಅತ್ಯಂತ ಹಳೇಯದಾಗಿದೆ. ಬ್ಯಾಂಕಿಗೆ ಅಗತ್ಯ ಇರುವ ಸುರಕ್ಷತೆಯ ಯಾವುದೇ ಮಾನದಂಡಗಳು ಸಹ ಇಲ್ಲದೇ ಇರುವುದೇ ಕಳ್ಳರು ಈ ಬ್ಯಾಂಕನ್ನೇ ಕಳ್ಳತನಕ್ಕೆ ಕೃತ್ಯಕ್ಕೆ ಆಯ್ಕೆ ಮಾಡಿಕೊಳ್ಳಲು ಕಾರಣವಾಗಿದೆ ಎನ್ನುವ ಮಾತುಗಳು ಕೇಳಿಬಂದಿವೆ.
ಇಷ್ಟೊಂದು ದೊಡ್ಡ ಮೊತ್ತದ ಚಿನ್ನಾಭರಣಗಳನ್ನು ತಾಲ್ಲೂಕು ಕೇಂದ್ರದಿಂದ 22 ಕಿ.ಮೀ ದೂರದ ಹಳ್ಳಿಯಲ್ಲಿನ ಬ್ಯಾಂಕಿನಲ್ಲಿ ಇಡುವ ಅಗತ್ಯ ಇರಲಿಲ್ಲ. ಈ ಬಗ್ಗೆ ಬ್ಯಾಂಕಿನ ಅಧಿಕಾರಿಗಳು ಕನಿಷ್ಠ ಮುನ್ನೆಚ್ಚರಿಕೆಯನ್ನಾದರು ವಹಿಸಬೇಕಿತ್ತು ಎನ್ನುವ ಮಾತುಗಳು ಪೊಲೀಸರು ಹಾಗೂ ಬ್ಯಾಂಕಿನ ಗ್ರಾಹಕರಿಂದ ಕೇಳಿಬರುತ್ತಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
