ಬೆಂ.ಗ್ರಾ.ಜಿಲ್ಲೆ,(ಡಿ.05): ಜಲಜೀವನ ಮಿಷನ್ ಯೋಜನೆಯಡಿ ಗ್ರಾಮೀಣ ಪ್ರದೇಶದ ಎಲ್ಲಾ ಮನೆಗಳಿಗೆ ನಲ್ಲಿಗಳ ಮೂಲಕ ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಪ್ರಧಾನಮಂತ್ರಿಯವರ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಅಂತರ್ಜಲ ಮಟ್ಟ ಹೆಚ್ಚಳ ಹಾಗೂ ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣೆಯನ್ನು ಜಲಜೀವನ ಮಿಷನ್ ಹಾಗೂ ಗ್ರಾಮೀಣಾಭಿವೃದ್ಧಿ, ಪಂಚಾಯತರಾಜ್ ಇಲಾಖೆಗಳು ಪರಸ್ಪರ ಸಮನ್ವಯದಿಂದ ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಸದಸ್ಯರಾದ ಬಿ.ಎನ್.ಬಚ್ಚೇಗೌಡ ಹೇಳಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಇಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮೇಲ್ವಿಚಾರಣಾ (ದಿಶಾ) ಸಮಿತಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು,
ಜಿಲ್ಲೆಯಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಹಾಗೂ ಆಸ್ಪತ್ರೆಯ ವ್ಯವಸ್ಥೆ ತೃಪ್ತಿಕರವಾಗಿದೆ.ಸಾಂಸ್ಥಿಕ ಹಾಗೂ ಸುರಕ್ಷಿತ ಹೆರಿಗೆಗಳಿಗೆ ಆದ್ಯತೆ ನೀಡಬೇಕು. ಚಿಕಿತ್ಸೆಗೆ ಬರುವ ಮಹಿಳೆಯರು ಹಾಗೂ ಸಾರ್ವಜನಿಕರೊಂದಿಗೆ ವೈದ್ಯಕೀಯ ಮತ್ತು ಅರೆವೈದ್ಯಕೀಯ ಸಿಬ್ಬಂದಿ ಸೌಜನ್ಯದಿಂದ ವರ್ತಿಸಿ,ಸರ್ಕಾರಿ ಆಸ್ಪತ್ರೆಗಳ ಬಗೆಗೆ ಭರವಸೆ ಹೆಚ್ಚಿಸಬೇಕು. ದೊಡ್ಡಬಳ್ಳಾಪುರ ನಗರದಲ್ಲಿ ಜನೌಷಧಿ ಮಳಿಗೆಗಳನ್ನು ಸ್ಥಾಪಿಸಬೇಕು. ಜಿಲ್ಲೆಯಲ್ಲಿ ಈ ಬಾರಿ ರಾಗಿ ಫಸಲು ಅತ್ಯುತ್ತಮವಾಗಿ ಬಂದಿದೆ,ರಾಗಿ ಕುಯ್ಲು ಯಂತ್ರಗಳ ಬಳಕೆಗೆ ಪ್ರತಿ ಗಂಟೆಗೆ ನಿಗದಿಪಡಿಸಿರುವ ದರಗಳನ್ನು ಮಾತ್ರ ರೈತರಿಂದ ಸಂಗ್ರಹಿಸುವುದನ್ನು ಕೃಷಿ ಮತ್ತು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಪ್ರಧಾನ ಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಸ್ವಯಂ ಉದ್ಯೋಗಕ್ಕಾಗಿ ಪ್ರಸ್ತಾವನೆ ಸಲ್ಲಿಸಿರುವ ಅರ್ಹ ಅಭ್ಯರ್ಥಿಗಳಿಗೆ ಬ್ಯಾಂಕುಗಳು ತ್ವರಿತ ಸಾಲ ಮಂಜೂರಾತಿ ನೀಡಬೇಕು. ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮಾಂಸ ಮಾರಾಟ ಮಾಡುವವರ ಸಮೀಕ್ಷೆ ಕಾರ್ಯ ಕೈಗೊಂಡು, ಅವರ ಪರವಾನಿಗೆಗಳನ್ನು ಪರಿಶೀಲಿಸಬೇಕು. ಮಾಂಸದ ತ್ಯಾಜ್ಯಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡದ,ಅನಧಿಕೃತ ಮಾರಾಟಗಾರರ ವಿರುದ್ಧ ಕ್ರಮವಹಿಸಬೇಕು ಎಂದು ಬಿ.ಎನ್.ಬಚ್ಚೇಗೌಡ ಹೇಳಿದರು.
ವಿಧಾನಪರಿಷತ್ ಸದಸ್ಯ ಅ.ದೇವೇಗೌಡ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಮಾಧ್ಯಮ ಶಾಲೆಗಳಲ್ಲಿ, ಇಂಗ್ಲೀಷ್ನ್ನು ಒಂದು ಭಾಷೆಯಾಗಿ ಕಲಿಸಬೇಕು. ಕನ್ನಡ ಮಾಧ್ಯಮ ಶಿಕ್ಷಣದ ಮೌಲ್ಯ, ಮಹತ್ವ ಹೆಚ್ಚಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ, ಕುಡಿಯುವ ನೀರು, ಸುಸಜ್ಜಿತ ಕಟ್ಟಡ, ಸ್ವಚ್ಛತೆ, ಗುಣಮಟ್ಟದ ಶಿಕ್ಷಣ ದೊರೆಯುವಂತೆ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಆಸಕ್ತಿಯಿಂದ ಕ್ರಮವಹಿಸಬೇಕು. ಜಿಲ್ಲೆಯಲ್ಲಿ ಏಳು ಜನೌಷಧಿ ಕೇಂದ್ರಗಳು ಮಾತ್ರ ಇವೆ.ಡಿ.ಫಾರ್ಮ್, ಬಿ.ಫಾರ್ಮ್ ಪದವಿ ಪೂರ್ಣಗೊಳಿಸಿದ ಆಸಕ್ತ,ಅರ್ಹರಿಂದ ಪ್ರಸ್ತಾವನೆಗಳನ್ನು ಪಡೆದು ಸ್ಥಾಪಿಸಲು ಅನುಮೋದನೆ ಒದಗಿಸಿಕೊಡಬೇಕು.ಆಸಕ್ತ ಯುವಕರು, ಮಹಿಳೆಯರಿಗೆ ಒಳನಾಡು ಮೀನುಗಾರಿಕೆ ತರಬೇತಿ ನೀಡಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ರೇವಣಪ್ಪ ಮಾತನಾಡಿ, ಜಿಲ್ಲೆಯಲ್ಲಿ ಬಹುತೇಕ ಕೊಳವೆ ಬಾವಿಗಳನ್ನು ಆಧರಿಸಿಯೇ ಜಲ ಜೀವನ ಮಿಷನ್ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ. ಎಲ್ಲಾ ಜಲಮೂಲಗಳ ಹತ್ತಿರ ಮರುಪೂರಣ ಘಟಕಗಳು, ಚೆಕ್ ಡ್ಯಾಮುಗಳು, ನಾಲಾಬಂದ್ ಮತ್ತಿತರ ಅಂತರ್ಜಲ ಹೆಚ್ಚಿಸುವ ಕಾರ್ಯಗಳನ್ನು ಕೈಗೊಳ್ಳಬೇಕು. ಕಾರ್ಯನಿರ್ವಹಿಸುತ್ತಿರುವ ಹಾಗೂ ಕಾರ್ಯನಿರ್ವಹಿಸದ ಎಲ್ಲಾ ಕೊಳವೆ ಬಾವಿ ಮತ್ತು ಜಲಮೂಲಗಳ ಬಳಿ ತಲಾ 95 ಸಾವಿರ ರೂ.ಘಟಕ ವೆಚ್ಚದಡಿ ಈ ಕಾರ್ಯಗಳನ್ನು ಕೈಗೊಳ್ಳಲು ಅವಕಾಶವಿದೆ. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಮೂಲಕ ಸಮಗ್ರ ಕ್ರಿಯಾ ಯೋಜನೆ ಸಿದ್ಧಪಡಿಸಬೇಕು ಎಂದು ಸೂಚಿಸಿದರು. ಗ್ರಾಮ ಪಂಚಾಯತಿಗಳಲ್ಲಿಯೂ ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಅವಕಾಶವಿದೆ ಈ ನಿಟ್ಟಿನಲ್ಲಿ ಜಿಲ್ಲೆಯ ಗ್ರಾಮ ಪಂಚಾಯತಿಗಳಿಂದ ಪ್ರಸ್ತಾವನೆ ಪಡೆದು ಸಂಬಧಿಸಿದ ಪ್ರಾಧಿಕಾರಕ್ಕೆ ಕಳಿಸಿ ಅನುಮೋದನೆ ಪಡೆದು ಮಳಿಗೆ ಪ್ರಾರಂಭಿಸಬೇಕು, ಇದರಿಂದ ಬಡವರು, ಜನಸಾಮಾನ್ಯರಿಗೆ ಅನುಕೂಲವಾಗಲಿದೆ ಎಂದರು.ಕೊಯಿರಾದಲ್ಲಿ ಚಿರತೆ ಹಾವಳಿ ಬಗ್ಗೆ ಸಾರ್ವಜನಿಕ ದೂರುಗಳಿವೆ ಅರಣ್ಯ ಇಲಾಖೆಯು ಜಾಗೆ ಗುರುತಿಸಿ, ಕಂದಕ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಿದರೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಅನುಮೋದನೆ ನೀಡಲಾಗುವುದು. ದಿಶಾ ಸಮಿತಿ ಸಭೆಗಳಿಗೆ ಅಧಿಕಾರಿಗಳಿಗೆ ಗೈರು ಹಾಜರಾಗಬಾರದು, ಅಂತಹ ಅಧಿಕಾರಿಗಳ ವಿರುದ್ಧ ಕ್ರಮವಹಿಸಲಾಗುವುದು ಎಂದರು.
ಜಿಪಂ ಉಪಕಾರ್ಯದರ್ಶಿ ನಾಗರಾಜ, ಡಿಆರ್ಡಿಎ ಯೋಜನಾ ನಿರ್ದೇಶಕ ವಿಠಲ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು,ಸಮಿತಿಯ ನಾಮನಿರ್ದೇಶಿತ ಸದಸ್ಯರು ಸಭೆಯಲ್ಲಿ ಭಾಗವಹಿಸಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

