
ದೊಡ್ಡಬಳ್ಳಾಪುರ, (ಡಿ.04): ವಿಧಾನಸಭೆ ಚುನಾವಣೆಗೆ ತಿಂಗಳುಗಳು ಬಾಕಿ ಇರುವಾಗಲೇ, ಹನುಮ ಜಯಂತಿಯಂದು ತಾಲೂಕಿನ ರಾಜಘಟ್ಟ ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ, ಜನರ ಬಳಿಗೆ ತೆರಳುವ ಚುನಾವಣೆ ಪ್ರಚಾರವನ್ನು ಶಾಸಕ ಟಿ.ವೆಂಕಟರಮಣಯ್ಯ ಅಧಿಕೃತವಾಗಿ ಆರಂಭಿಸಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ತಾಲೂಕಿನ ರಾಜಘಟ್ಟ ಗ್ರಾಮದ ಆಂಜನೇಯಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ, ರಾಜಘಟ್ಟದಲ್ಲಿ ಕಾಂಗ್ರೆಸ್ ನಡಿಗೆ ಹಳ್ಳಿ ಕಡೆಗೆ, ಶಾಸಕರ ನಡಿಗೆ ಜನಾಶೀರ್ವಾದ ಕಡೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ವೇಳೆ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪಮೊಯ್ಲಿ ಮಾತನಾಡಿ, ದೇಶದ ಅಭಿವೃದ್ಧಿ, ಬಡ ಜನರ ಕಲ್ಯಾಣಕ್ಕೆ ಕಾಂಗ್ರೆಸ್ ಸರ್ಕಾರ ನೀಡಿದ ಕೊಡುಗೆ ಅಪಾರವಾಗಿದೆ. ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಕಾರ್ಖಾನೆ, ಯಾವುದೇ ಯೋಜನೆ ನೋಡಿದರು ಜಾರಿಗೆ ತಂದಿದ್ದು ಕಾಂಗ್ರೆಸ್ ಪಕ್ಷ. ಆದರೆ ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಸರ್ಕಾರವಾಗಲಿ, ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಸರ್ಕಾರವಾಗಲಿ ಜನರಪರವಾದ ಯಾವುದೇ ಯೋಜನೆಯನ್ನು ಜನರಿಗಾಗಿ ನೀಡುತ್ತಿಲ್ಲ. ಈ ನಿಟ್ಟಿನಲ್ಲಿ ಜನರ ಅಭಿವೃದ್ಧಿಗೆ ಕಾಂಗ್ರೆಸ್ ಪಕ್ಷ ಮತ್ತೆ ರಾಜ್ಯ ಹಾಗೂ ಕೇಂದ್ರದಲ್ಲಿ ಅಧಿಕಾರಕ್ಕೆ ಬರಬೇಕಿದೆ ಎಂದರು.
ವಿಧಾನಪರಿಷತ್ ಸದಸ್ಯ ಎಸ್.ರವಿ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿಹೋಗಿದ್ದು, ಕಾಮಗಾರಿಗಳಿಗೆ 4%ಕಮಿಷನ್, ಸಬ್ ಇನ್ಸ್ಪೆಕ್ಟರ್ ನೇಮಕದಲ್ಲಿ ಅಕ್ರಮ, ಮತದಾರರ ಚೀಟಿ ಕಳವು ಸೇರಿದಂತೆ ರಾಜ್ಯದ ಘನತೆಯನ್ನು ಹಾಳು ಮಾಡುತ್ತಿದೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ತರಲು ಜನತೆ ಸಿದ್ಧರಾಗಿದ್ದು, ಪಕ್ಷದ ಮುಖಂಡರು, ಕಾರ್ಯಕರ್ತರು ಅವರ ವಿಶ್ವಾಸಗಳಿಸಬೇಕಿದೆ.
ಸಿದ್ದರಾಮಯ್ಯ ಸರ್ಕಾರದ ಅಧಿಕಾರದ ಅವಧಿಯಲ್ಲಿ ದೊಡ್ಡಬಳ್ಳಾಪುರದ ಅಭಿವೃದ್ಧಿ ಎಂದರೇನೆಂದು ತೋರಿಸಿದವರು ಶಾಸಕ ಟಿ.ವೆಂಕಟರಮಣಯ್ಯ, ಸಚಿವರುಗಳ ಕಾಡಿಬೇಡಿ ತಾಲೂಕನ್ನು ಅಭಿವೃದ್ಧಿ ಪಡಿಸಿದ್ದಾರೆ. ಆದರೆ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಮಲತಾಯಿ ಧೋರಣೆ ಮಾಡಿ, ದೊಡ್ಡಬಳ್ಳಾಪುರವನ್ನು ಅಭಿವೃದ್ಧಿಯಿಂದ ವಂಚಿತವಾಗಿಸಿದೆ.
ದೊಡ್ಡಬಳ್ಳಾಪುರದ ಅಭಿವೃದ್ಧಿಗೆ ಹಾಗೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ದೊಡ್ಡಬಳ್ಳಾಪುರ ಶಾಸಕರಾಗಿ ಮತ್ತೆ ಟಿ.ವೆಂಕಟರಮಣಯ್ಯ ಅವರನ್ನು ಆಯ್ಕೆ ಮಾಡಬೇಕಿದ್ದು, ಪಕ್ಷದ ಮುಖಂಡರು ಅವರಿಗೆ ಬೆಂಬಲವಾಗಿ ನಿಂತು ಕಾಂಗ್ರೆಸ್ ಅಧಿಕಾರಕ್ಕೆ ತರಬೇಕೆಂದು ಮನವಿ ಮಾಡಿದರು.
ಶಾಸಕ ಟಿ.ವೆಂಕಟರಮಣಯ್ಯ ಮಾತನಾಡಿ, ರಾಜ್ಯದ ಬಡ ಜನತೆ ನೆಮ್ಮದಿಯಿಂದ ಊಟವನ್ನು ಮಾಡಲು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ. ಈ ಹಿಂದೆ ಮಾಡಿದ್ದ ಅಭಿವೃದ್ಧಿ ಕಾರ್ಯಗಳ ಜೊತೆಗೆ, ತಾಲೂಕಿನ ಕೆರೆಗಳಿಗೆ ನೀರು ಹರಿಸುವುದು, ಜಿಲ್ಲಾ ಆಸ್ಪತ್ರೆ ಸ್ಥಾಪನೆ ಮುಂತಾದ ಅನೇಕ ಯೋಜನೆಗಳು ನನ್ನದಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸೋಣವೆಂದರು.
ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಜಗನಾಥ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ, ಜಿಪಂ ಮಾಜಿ ಸದಸ್ಯ ಚುಂಚೇಗೌಡ, ಕೆಪಿಸಿಸಿ ಸದಸ್ಯ ಮುನಿರಾಜು, ನಗರಸಭೆ ಸದಸ್ಯೆ ನಾಗವೇಣಿ, ತಾಪಂ ಮಾಜಿ ಅಧ್ಯಕ್ಷ ನಾರಾಯಣಗೌಡ, ಮುಖಂಡರಾದ ಸತ್ಯನಾರಾಯಣಗೌಡ, ನಾರನಹಳ್ಳಿ ಗೋವಿಂದರಾಜ್, ಅಪ್ಪಿ ವೆಂಕಟೇಶ್, ಆದಿತ್ಯ ನಾಗೇಶ್, ಅಖಿಲೇಶ್, ಸಿದ್ದರಾಮಪ್ಪ, ಜವಾಜಿ ರಾಜೇಶ್, ವಿಶ್ವನಾಥ್, ನಾಗರಾಜ್, ರೇವತಿ, ಪ್ರಭಾ, ಮಮತಾ ಸೇರಿದಂತೆ ಅನೇಕ ಮುಖಂಡರು ಇದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
