ದೊಡ್ಡಬಳ್ಳಾಪುರ, (ಸೆ.26): ಕಾಲು ಬಾಯಿ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಸುಗಳಿಗೆ ಲಸಿಕೆಯನ್ನು ಹಾಕುವುದರಿಂದ ಕಾಲು ಬಾಯಿ ರೋಗವನ್ನು ಸಂಪೂರ್ಣವಾಗಿ ತಡೆಗಟ್ಟಬಹುದು. ಸೆ.26 ರಿಂದ ಅ.25ರವರೆಗೆ 4ನೇ ಸುತ್ತಿನ ಕಾಲುಬಾಯಿ ರೋಗ ಲಸಿಕಾ ಕಾರ್ಯಕ್ರಮದಲ್ಲಿ ಎಲ್ಲಾ ಜಾನುವಾರುಗಳಿಗೆ ಲಸಿಕೆ ಕೊಡಿಸಬೇಕಿದೆ ಎಂದು ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಹೇಳಿದರು.
ತಾಲೂಕಿನ ಪಿಂಡಕೂರು ತಿಮ್ಮನಹಳ್ಳಿಯ ಡೈರಿ ಆವರಣದಲ್ಲಿ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಬೆಂಗಳೂರು ಹಾಲು ಒಕ್ಕೂಟದ ಸಹಯೋಗದೊಂದಿಗೆ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದ 4ನೇ ಸುತ್ತಿನ ಕಾಲು ಬಾಯಿ ಜ್ವರ ನಿಯಂತ್ರಣ ಲಸಿಕಾ ಅಭಿಯಾನದ ಅಂಗವಾಗಿ ಕಾಲು ಬಾಯಿ ರೋಗ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಈ ರೋಗಕ್ಕೆ ಯಾವುದೇ ನಿರ್ದಿಷ್ಟ ಚಿಕಿತ್ಸೆ ಇರದ ಕಾರಣ, ಕಾಲು-ಬಾಯಿ ರೋಗ ನಿಯಂತ್ರಿಸಲು ರಾಸುಗಳಿಗೆ ಲಸಿಕೆ ಹಾಕಿಸುವುದೇ ಏಕೈಕ ಮಾರ್ಗವಾಗಿದೆ. ರೈತರು ಸರ್ಕಾರದ ಹಾಗೂ ಬಮೂಲ್ನ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ಮುಂದೆ ಆಗಬಹುದಾದ ತೊಂದರೆಗಳಿಂದ ರಕ್ಷಿಸಿಕೊಳ್ಳಬೇಕಿದೆ ಎಂದರು.
ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ತಾಲೂಕು ಮುಖ್ಯ ಪಶುವೈದ್ಯಾಕಾರಿ ಡಾ.ವಿಶ್ವನಾಥ್ ಮಾತನಾಡಿ, ರೈತರು ರಾಸುಗಳಿಗೆ ಲಸಿಕೆ ಹಾಕಿಸಿಕೊಳ್ಳುವುದರಿಂದ ರಾಸುಗಳಲ್ಲಿನ ಹಾಲಿನ ಪ್ರಮಾಣ ಕಡಿಮೆ ಆಗುವುದಿಲ್ಲ, ರಾಸುಗಳ ಗಾಯಗಳ ಸೂಕ್ತ ಉಪಚಾರದ ಜೊತೆಯಲ್ಲಿ ಖನಿಜ ಮಿಶ್ರಣ ರೋಗ ನಿರೋಧಕ ಶಕ್ತಿ ವೃದ್ಧಿಸುವ ಔಷಗಳನ್ನು ಬಳಸುವುದರಿಂದ ಜಾನುವಾರುಗಳು ನಿಶ್ಯಕ್ತವಾಗುವುದನ್ನು ತಪ್ಪಿಸಬಹುದು. ಕಾಲು ಬಾಯಿ(ಗೆರಸಲು) ಜ್ವರ ರೋಗವು ವೈರಾಣುವಿನಿಂದ ಉಂಟಾಗಲಿದ್ದು, ಇದು ಸೀಳು ಗೊರಸುಗಳುಳ್ಳ ರಾಸುಗಳಲ್ಲಿ ಕಂಡುಬರುತ್ತದೆ. ಈ ದಿಸೆಯಲ್ಲಿ ತಾಲೂಕಿನ ಎಲ್ಲಾ ಗ್ರಾಮಗಳ ಸುಮಾರು 48,933 ಸಾವಿರ ದನ ಮತ್ತು ಎಮ್ಮೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕಲಾಗುತ್ತಿದೆ.
ತಾಲೂಕಿಗೆ 27,250 ಡೋಸ್ಗಳ ಲಸಿಕೆ ಸರಬರಾಜಾಗಿದ್ದು, ಪ್ರತಿ ದಿನ ಬೆಳಿಗ್ಗೆ 6.30 ಗಂಟೆಯಿಂದ 11 ಗಂಟೆಯವರೆಗೆ ನಿಗದಿತ ವೇಳಾಪಟ್ಟಿಯಂತೆ ಗ್ರಾಮಗಳಿಗೆ ಭೇಟಿ ನೀಡಿ, ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ನೀಡಲಿದ್ದಾರೆ.
ತಾಲೂಕಿನಲ್ಲಿ 24ತಂಡಗಳಲ್ಲಿ ಒಟ್ಟು 100 ಸಿಬ್ಬಂದಿಗಳು ರಾಸುಗಳಿಗೆ ಲಸಿಕೆ ಹಾಕಲಿದ್ದು, ರೈತ ಬಾಂಧವರು ತಮ್ಮ 3 ತಿಂಗಳ ಮೇಲ್ಪಟ್ಟ ಎಲ್ಲಾ ರಾಸುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಬಮೂಲ್ ಉಪವ್ಯವಸ್ಥಾಪಕ ಡಾ.ಎಲ್.ಬಿ.ನಾಗರಾಜ್, ಪಿಂಡಕೂರುತಿಮ್ಮನಹಳ್ಳಿ ಎಂಪಿಸಿಎಸ್ ಅಧ್ಯಕ್ಷ ಆನಂದ್, ಕಾರ್ಯದರ್ಶಿ ರವಿಕುಮಾರ್, ಮತ್ತಿತರರು ಹಾಜರಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….