ಕಾಂಗ್ರೆಸ್ ಸರ್ಕಾರದ ದೂರದೃಷ್ಟಿಯುಳ್ಳ ಅಭಿವೃದ್ಧಿ ಪರ ಬಜೆಟ್.. BJPಯವರ ಸುಳ್ಳನ್ನು ಬಯಲು ಮಾಡಿದೆ: ಟಿ.ವೆಂಕಟರಮಣಯ್ಯ

ಬೆಂಗಳೂರು: (ಫೆ.16); ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 15 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು,‌‌ ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ನಿಕಟಪೂರ್ವ ಶಾಸಕ ಟಿ.ವೆಂಕಟರಮಣಯ್ಯ ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವರು, ಬಜೆಟ್ ಆರ್ಥಿಕ ಶಿಸ್ತಿನಿಂದ ಕೂಡಿದ್ದು, ಆಶಾದಾಯಕ ಬಜೆಟ್ ಆಗಿದೆ. ಮುಖ್ಯಮಂತ್ರಿಗಳು ಪ್ರಸಕ್ತ ಸಾಲಿನಲ್ಲಿ ಐದು ಗ್ಯಾರಂಟಿಗಳಿಗೆ 52 ಸಾವಿರ ಕೋಟಿ ಮೀಸಲಿಟ್ಟಿದ್ದು, ಬಡವರ, ದೀನದಲಿತರ, ಅಲ್ಪಸಂಖ್ಯಾತರ ಅಭಿವೃದ್ಧಿ ಬಜೆಟ್ ಮಂಡಿಸಿದ್ದಾರೆ ಎಂದು ಶ್ಲಾಘಿಸಿದರು. 

ದೇಶದ ಪ್ರತಿಷ್ಠಿತ ಇಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಪ್ರಸಕ್ತ ಸಾಲಿನಲ್ಲಿ 500 ಪ್ರತಿಭಾವಂತ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಗಳಿಂದ ಎರಡು ವರ್ಷ ಉಚಿತ ಜೆಇಇ/ಎನ್ಇಇಟಿ ತರಬೇತಿ ನೀಡುವ ಯೋಜನೆ ಘೋಷಣೆ ಮಾಡಿರುವುದು ಸ್ವಾಗತರ್ಹ. 

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ 100 ಸಂಖ್ಯಾಬಲದ ಮೆಟ್ರಿಕ್‌ ನಂತರದ 75 ಬಾಲಕರ ಮತ್ತು 75 ಬಾಲಕಿಯರ ವಸತಿನಿಲಯಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಪ್ರಾರಂಭಿಸುವುದು.‌ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ 100 ಸಂಖ್ಯಾಬಲದ 150 ಮೆಟ್ರಿಕ್‌ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹಾಗೂ 174 ಮೊರಾರ್ಜಿ ದೇಸಾಯಿ ವಸತಿ ಶಾಲೆ/ ಕಾಲೇಜುಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು 200 ಕೋಟಿ ರೂ. ವೆಚ್ಚದಲ್ಲಿ ಹಂತ ಹಂತವಾಗಿ ಒದಗಿಸುವುದು.‌

ಬಾಡಿಗೆ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ವಿದ್ಯಾರ್ಥಿನಿಲಯಗಳಿಗೆ ನಾಲ್ಕು ಕೋಟಿ ರೂ. ಗಳ ಘಟಕ ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡುವುದು.‌ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಆಶ್ರಮ ಶಾಲೆಗಳನ್ನು ಡಿ.ದೇವರಾಜು ಅರಸು ವಸತಿ ಶಾಲೆಗಳೆಂದು ಮರುನಾಮಕರಣ ಮಾಡಲಾಗುತ್ತದೆ ಎಂದು ಹೇಳಿರುವುದು ಉತ್ತಮ ಬೆಳವಣಿಗೆ ಎಂದಿದ್ದಾರೆ.

ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ಗಳನ್ನಾಗಿ (Satellite Townships) ಅಭಿವೃದ್ಧಿಪಡಿಸಲಾಗುತ್ತಿರುವುದು ರಾಜ್ಯ ಸರ್ಕಾರಕ್ಕೆ ಇರುವ ಅಭಿವೃದ್ಧಿ ಚಿಂತನೆಯನ್ನು ತೋರುತ್ತದೆ. ಆದರೆ ಈ ಅಭಿವೃದ್ಧಿ ಪಥದಲ್ಲಿ ದೊಡ್ಡಬಳ್ಳಾಪುರ ತಾಲೂಕು ಮತ್ತಷ್ಟು ಹೆಚ್ಚಿನ ಪಾಲು ಪಡೆಯಲು ಕಳೆದ ಚುನಾವಣೆ ಫಲಿತಾಂಶ ಹಿನ್ನಡೆಯನ್ನು ಮಾಡಿದೆ ಎಂದಿದ್ದಾರೆ.

ಒಟ್ಟಾರೆ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್ನಲ್ಲಿ ರೈತ ಪರ, ಕೃಷಿ ವಲಯ, ಶಿಕ್ಷಣ, ಆರೋಗ್ಯ, ಕೈಗಾರಿಕೆ, ತಂತ್ರಜ್ಞಾನ, ಉದ್ಯೋಗ ಸೃಷ್ಟಿ, ಹಿಂದುಳಿದ ವರ್ಗಗಳ ಕಲ್ಯಾಣ, ಬಂಡವಾಳ ಹೂಡಿಕೆ, ಮೂಲಸೌಲಭ್ಯ ಅಭಿವೃದ್ಧಿ, ಮಹಿಳಾ ಸಬಲೀಕರಣ, ಯುವಜನರ ಶ್ರೇಯೋಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಆಗಿದೆ ಎಂದು ತಿಳಿಸಿದ್ದಾರೆ.

ಇನ್ನು ಗ್ಯಾರಂಟಿಗಳು ಬಹುಕಾಲ ಇರುವುದಿಲ್ಲ ಎಂದು ಟೀಕೆ ಮಾಡುತ್ತಿದ್ದ ಬಿಜೆಪಿಗರಿಗೆ ನಮ್ಮ‌ ಸರ್ಕಾರದ ಅಭಿವೃದ್ಧಿ ಪರ ಬಜೆಟ್ ನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ಕೇಂದ್ರ ಸರ್ಕಾರದ ರಾಜ್ಯ ಪಾಲಿನ ತೆರಿಗೆ ಹಣ ಕೊಡದೆ ಅನ್ಯಾಯವೆಸಗುತ್ತಿರುವುದನ್ನೆಲ್ಲ ಜನರ ಮುಂದೆ ಎಳೆಎಳೆಯಾಗಿ ಬಿಚ್ಚಿಡುತ್ತಿದ್ದೇವೆ. ಇದನ್ನು ಸಹಿಸಲು ಸಾಧ್ಯವಾಗದ ರಾಜ್ಯ ಬಿಜೆಪಿ ನಾಯಕರು ಇಲ್ಲದ ನಾಟಕವಾಡುತ್ತಿದ್ದಾರೆ ಎಂದು ವೆಂಕಟರಮಣಯ್ಯ ಅವರು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

error: Content is protected !!