ಗ್ಯಾರಂಟಿ ಬಜೆಟ್: ದೊಡ್ಡಬಳ್ಳಾಪುರ ಸೇರಿ 06 ತಾಲೂಕುಗಳಿಗೆ ಉಪನಗರ ಟೌನ್‌ಶಿಪ್

ಬೆಂಗಳೂರು, (ಫೆ.16): ನಗರದ ಹೊರವಲಯದಲ್ಲಿರುವ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ಗಳನ್ನಾಗಿ (Satellite Townships) ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆಯಲ್ಲಿ ಮಾತನಾಡಿದ ಅವರು, 2024-25 ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಪ್ರಾಮುಖ್ಯತೆ ನೀಡಲು 5,000 ಕೋಟಿ ರೂ.ಗಳ ಯೋಜನೆಗಳನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. 

ಡಾ|| ಡಿ.ಎಂ.ನಂಜುಂಡಪ್ಪ ವರದಿಯನ್ನು 2002 ರಲ್ಲಿ ಸಲ್ಲಿಸಲಾಗಿದ್ದು, ಕಳೆದ 22 ವರ್ಷಗಳಲ್ಲಿ ಈ ವರದಿಯ ಆಧಾರದ ಮೇಲೆ ಹಿಂದುಳಿದ ಪ್ರದೇಶಗಳಲ್ಲಿ ಅಸಮತೋಲನೆಯನ್ನು ನಿವಾರಿಸಲು ಬಹಳಷ್ಟು ಯೋಜನೆಗಳನ್ನು ಮತ್ತು ಬಂಡವಾಳ ಹೂಡಿಕೆಯನ್ನು ಮಾಡಲಾಗಿದೆ. ಇದರಿಂದ ಆಗಿರುವ ಬದಲಾವಣೆಗಳು ಮತ್ತು ಪರಿಣಾಮಗಳನ್ನು ಅಧ್ಯಯನ ಮಾಡಲು ಪ್ರಸಕ್ತ ಸಾಲಿನಲ್ಲಿ ಒಂದು ಉನ್ನತಾಧಿಕಾರಿ ಸಮಿತಿಯನ್ನು ರಚಿಸಲಾಗುವುದು. ಈ ಸಮಿತಿಯ ಮೂಲಕ ಪ್ರಸ್ತುತ ರಾಜ್ಯದಲ್ಲಿನ ಆರ್ಥಿಕ ಮತ್ತು ಪ್ರಾದೇಶಿಕ ಅಸಮಾನತೆಯ ಆಧಾರದ ಮೇಲೆ ಜಿಲ್ಲೆ ಮತ್ತು ತಾಲ್ಲೂಕುಗಳನ್ನು ವರ್ಗೀಕರಿಸಿ ಹೊಸ ಅಭಿವೃದ್ಧಿ ಸೂಚ್ಯಂಕಗಳನ್ನು ತಯಾರಿಸಲಾಗುವುದು. 

ಕರ್ನಾಟಕ ರಾಜ್ಯ ಪರಿವರ್ತನಾ ಸಂಸ್ಥೆಯ (SITK) ಮೂಲ ಉದ್ದೇಶಗಳನ್ನು ಮತ್ತು ಕಾರ್ಯವನ್ನು ಸೂಕ್ತವಾಗಿ ಬಿಂಬಿಸುವ ನಿಟ್ಟಿನಲ್ಲಿ ಸಂಸ್ಥೆಯ ಹೆಸರನ್ನು ಬದಲಾವಣೆ ಮಾಡಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವೆಂದು (KSPPC) ಪುನರ್ರಚಿಸಲಾಗುವುದು.

ನಗರಾಭಿವೃದ್ಧಿ: ಬೆಂಗಳೂರು ನಗರವನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ನಾವು ಬ್ರಾಂಡ್‌ ಬೆಂಗಳೂರು ಪರಿಕಲ್ಪನೆಯನ್ನು ರೂಪಿಸಿ ಜಾರಿಗೊಳಿಸುತ್ತಿದ್ದೇವೆ. ಜನರ ಬದುಕಿನ ಗುಣಮಟ್ಟ ಸುಧಾರಣೆಗಾಗಿ ಹಾಗೂ ಹೂಡಿಕೆದಾರರನ್ನು ಆಕರ್ಷಿಸಲು ವಿವಿಧ ವಲಯಗಳಲ್ಲಿ ಗಣನೀಯ ಸುಧಾರಣೆಗಳನ್ನು ತರಲು ಹಲವಾರು ದಿಟ್ಟ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಪ್ರಸಕ್ತ ಸಾಲಿನಲ್ಲಿ ಸಂಪನ್ಮೂಲಗಳ ಹೆಚ್ಚಳ, ಸಂಚಾರ ದಟ್ಟಣೆ ನಿವಾರಣೆ, ಗುಣಮಟ್ಟದ ರಸ್ತೆಗಳ ನಿರ್ಮಾಣ, ಶುದ್ಧ ಕುಡಿಯುವ ನೀರು ಪೂರೈಕೆ, ಉತ್ತಮ ಸಾರ್ವಜನಿಕ ಸಾರಿಗೆ ಮತ್ತು ಸ್ವಚ್ಛ-ಸುಂದರ ಬೆಂಗಳೂರು ನಿರ್ಮಾಣದ ಕುರಿತು ಹೆಚ್ಚಿನ ಗಮನ ಹರಿಸುತ್ತೇವೆ. 

ಬಿ.ಬಿ.ಎಂ.ಪಿ ಯಲ್ಲಿ ತೆರಿಗೆ ಮತ್ತು ತೆರಿಗೆಯೇತರ ಸಂಪನ್ಮೂಲಗಳನ್ನು ಕ್ರೊಢೀಕರಿಸಲು ಸರ್ಕಾರವು ಹಲವು ಉಪಕ್ರಮಗಳನ್ನು ಕೈಗೊಳ್ಳಲಿದೆ;

• 2023-24ನೇ ಸಾಲಿನಲ್ಲಿ 4,300 ಕೋಟಿ ರೂ. ತೆರಿಗೆ ಸಂಗ್ರಹ ಮಾಡುವ ಮುಖಾಂತರ ದಾಖಲೆಯ ತೆರಿಗೆ ಸಂಗ್ರಹ ಮಾಡುವತ್ತ ಮುನ್ನಡೆದಿದೆ. ಇದು 2022-23ನೇ ಸಾಲಿಗಿಂತ 1,000 ಕೋಟಿ ರೂ. ಗಳಷ್ಟು ಹೆಚ್ಚಾಗಿದೆ. 2024-25ರಲ್ಲಿ ತೆರಿಗೆ ಸಂಗ್ರಹ ವ್ಯವಸ್ಥೆಯಲ್ಲಿ ಸೋರಿಕೆ ತಡೆಗಟ್ಟುವ ಮೂಲಕ 6,000 ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹದ ನಿರೀಕ್ಷೆ ಇದೆ.

• ಪ್ರಸಕ್ತ ಸಾಲಿನಿಂದ ಪರಿಷ್ಕೃತ ಜಾಹೀರಾತು ನೀತಿ ಮತ್ತು Premium FAR ನೀತಿಯನ್ನು ಜಾರಿಗೆ ತರುವ ಮೂಲಕ ಹೆಚ್ಚುವರಿಯಾಗಿ 2,000 ಕೋಟಿ ರೂ.ಗಳಷ್ಟು ತೆರಿಗೆಯೇತರ ಸಂಪನ್ಮೂಲ ಸಂಗ್ರಹಿಸುವ ಗುರಿ ಹೊಂದಲಾಗಿದೆ. 

• ಬಿಬಿಎಂಪಿ ವ್ಯಾಪ್ತಿಯ ಎಲ್ಲಾ 20 ಲಕ್ಷ ಆಸ್ತಿಗಳ ಆಸ್ತಿ ತೆರಿಗೆ ದಾಖಲೆಗಳನ್ನು ಡಿಜಿಟಲೀಕರಣಗೊಳಿಸಿ 2024-25ನೇ ಸಾಲಿನಿಂದ ಮಾಲೀಕರಿಗೆ ಡಿಜಿಟಲ್‌ ಇ-ಖಾತಾ ಮತ್ತು ಆಸ್ತಿ ತೆರಿಗೆ ಪಾವತಿ ವಿವರಗಳನ್ನು ದೊರಕಿಸಲಾಗುವುದು. 

ಮೇಲೆ ವಿವರಿಸಿರುವಂತೆ ಸಂಗ್ರಹವಾಗುವ ಹೆಚ್ಚುವರಿ ಸಂಪನ್ಮೂಲಗಳಿಂದ ಆದ್ಯತೆಯ ಮೇಲೆ ಬೆಂಗಳೂರಿನ ಸಂಚಾರ ದಟ್ಟಣೆಯ ಸಮಸ್ಯೆಯನ್ನು ನಿವಾರಿಸಲು ಸರ್ಕಾರವು ವಿವಿಧ ಯೋಜನೆಗಳನ್ನು ಕೈಗೆತ್ತಿಕೊಳ್ಳಲಿದೆ;

• ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಗರದ ಪ್ರಮುಖ ರಸ್ತೆಗಳಲ್ಲಿ 147 ಕಿ.ಮೀ ಉದ್ದದ ವೈಟ್‌ ಟಾಪಿಂಗ್‌ ಕಾಮಗಾರಿಗಳನ್ನು 1,700 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಮಂಜೂರಾತಿ ನೀಡಲಾಗಿದೆ. ಈ ಕಾಮಗಾರಿಗಳನ್ನು ಡಿಸೆಂಬರ್‌ 2025 ರೊಳಗೆ ಪೂರ್ಣಗೊಳಿಸಲಾಗುವುದು.

• ಭೂಮಿಯ ಅಲಭ್ಯತೆ ಮತ್ತು ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ತೊಡಕುಗಳ ಕಾರಣ ಅಸ್ತಿತ್ವದಲ್ಲಿರುವ ರಸ್ತೆಗಳ ವಿಸ್ತರಣೆಯು ಅತ್ಯಂತ ಕಷ್ಟಸಾಧ್ಯವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಸುರಂಗ ಮಾರ್ಗ (Tunnel) ನಿರ್ಮಿಸುವ ಮೂಲಕ ನಗರದಲ್ಲಿ ಸಂಚಾರ ದಟ್ಟಣೆಯನ್ನು ಬಗೆಹರಿಸಲು ನಿರ್ಧರಿಸಿದೆ. ಈ ವರ್ಷ ಸಂಚಾರ ದಟ್ಟಣೆ ಅತ್ಯಂತ ತೀವ್ರವಾಗಿರುವ ಹೆಬ್ಬಾಳ ಜಂಕ್ಷನ್‌ ನಲ್ಲಿ ಪ್ರಾಯೋಗಿಕವಾಗಿ ಟನೆಲ್‌ ಅನ್ನು ನಿರ್ಮಿಸಲಾಗುವುದು. 

• ನಾಲಾ ಬಫರ್‌ ವಲಯದೊಳಗೆ ನಾಲಾ ಬಫರ್‌ ಅನ್ನು ಬಳಸಿಕೊಂಡು ಸರ್ವಋತು ರಸ್ತೆಗಳನ್ನು ನಿರ್ಮಿಸುವ ಹೊಸ ಪರಿಕಲ್ಪನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಈ ಯೋಜನೆಯಡಿ ಈಗಾಗಲೇ 200 ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುತ್ತಿದ್ದು, ಪ್ರಸಕ್ತ ಸಾಲಿನಲ್ಲಿ ಹೆಚ್ಚುವರಿಯಾಗಿ 100 ಕಿ.ಮೀ. ಉದ್ದದ ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. 

• ಸುಗಮ ಸಂಚಾರ-ಬ್ರಾಂಡ್‌ ಬೆಂಗಳೂರು ಯೋಜನೆಯಡಿ ಅಂತಾರಾಷ್ಟ್ರೀಯ ಮಟ್ಟದ ತಜ್ಞ ಸಂಸ್ಥೆಯನ್ನು ನೇಮಿಸಿಕೊಳ್ಳಲಾಗಿದೆ. ಈ ಸಂಸ್ಥೆಯು ನೀಡುವ ವರದಿಯನ್ನು ಆಧರಿಸಿ, ಬೆಂಗಳೂರಿನ ಸಂಚಾರ ದಟ್ಟಣೆಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು.

ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡುವುದರ ಜೊತೆಗೆ ಬೆಂಗಳೂರಿನ ಆರ್ಥಿಕ ಚಟುವಟಿಕೆಗಳು ದೊಡ್ಡ ಪ್ರಮಾಣದಲ್ಲಿ ವೃದ್ಧಿಸಲು ಸಹಕಾರಿಯಾಗುವಂತೆ ಪೆರಿಫೆರಲ್‌ ರಿಂಗ್‌ ರೋಡ್‌ ಅನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂಬ ಹೊಸ ಪರಿಕಲ್ಪನೆಯಲ್ಲಿ ಪರಿಚಯಿಸಲು ಉದ್ದೇಶಿಸಲಾಗಿದೆ. 

ಈ ಯೋಜನೆಯಡಿ 73 ಕಿ.ಮೀ. ಉದ್ದದ ರಸ್ತೆಯನ್ನು 27,000 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ನಿರ್ಮಾಣ ಮಾಡಲು RFP ಕರೆಯಲಾಗಿದೆ. ಈ ಯೋಜನೆಯನ್ನು ಇದೇ ಸಾಲಿನಲ್ಲಿ ಪ್ರಾರಂಭ ಮಾಡಲು ಉದ್ದೇಶಿಸಿದೆ.  

ಬೆಂಗಳೂರು ನಗರದಲ್ಲಿ 250 ಮೀಟರ್‌ ಎತ್ತರದ ಸ್ಕೈ-ಡೆಕ್‌ (Sky-Deck) ನಿರ್ಮಾಣಕ್ಕಾಗಿ ನೂತನ ಪರಿಕಲ್ಪನೆ ಒದಗಿಸುವಂತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ವಾಸ್ತುವಿನ್ಯಾಸಗಾರರನ್ನು ಆಹ್ವಾನಿಸಿದೆ. ಇದರಿಂದ ನಗರದ ಒಳಗೆ ಆಕರ್ಷಕವಾದ ಪ್ರವಾಸಿ ತಾಣವನ್ನು ಸೃಜಿಸಿದಂತಾಗುತ್ತದೆ.

ನಗರಾಭಿವೃದ್ಧಿ ಇಲಾಖೆಯ ಅಂಗಸಂಸ್ಥೆಗಳಾದ BBMP, BMRCL, BWSSB, BDA ಗಳ ವ್ಯಾಪ್ತಿಯಲ್ಲಿ ಪ್ರತಿ ತಿಂಗಳು ವಿದ್ಯುತ್‌ ಶುಲ್ಕ ಪಾವತಿಯ ಆರ್ಥಿಕ ಹೊರೆ ಕಡಿಮೆಗೊಳಿಸಲು ಸೋಲಾರ್‌ ಪಾರ್ಕ್‌ ಅನ್ನು Captive/Group Captive ಮೂಲಕ ಸ್ಥಾಪಿಸಲಾಗುವುದು.

ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ ಸೇವೆಯೊಂದಿಗೆ ಮೆಟ್ರೋ ರೈಲು ಹಾಗೂ ಸಬ್‌-ಅರ್ಬನ್‌ ರೈಲು ಯೋಜನೆಗಳು ಜನರ ಸುಗಮ ಸಂಚಾರದ ದೃಷ್ಟಿಯಿಂದ ಕ್ರಾಂತಿಕಾರಿ ಬದಲಾವಣೆ ತರಲಿವೆ.

ಈ ಬಹುವಿಧ ಸಾರಿಗೆ ವ್ಯವಸ್ಥೆಗಳನ್ನು ಒಗ್ಗೂಡಿಸಿ, ಪರಸ್ಪರ ಸಮನ್ವಯದಿಂದ ಕಾರ್ಯಾಚರಣೆ ಮಾಡುವ ಮೂಲಕ ಜನರು ಹೆಚ್ಚು ಹೆಚ್ಚಾಗಿ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಅವಲಂಬಿಸಲು ಪ್ರೇರೇಪಿಸುವುದು ನಮ್ಮ ಆದ್ಯತೆಯಾಗಿದೆ. ಇದರಿಂದ ಸಂಚಾರ ದಟ್ಟಣೆ ಹಾಗೂ ಪರಿಸರ ಮಾಲಿನ್ಯಗಳ ನಿಯಂತ್ರಣ ಸಾಧ್ಯವಾಗುವುದಲ್ಲದೆ, ಬದುಕು ಇನ್ನಷ್ಟು ಸುಗಮವಾಗಲಿದೆ. 

ದೇಶದ ಅತ್ಯುತ್ತಮ ಮೆಟ್ರೋ ಸೇವೆಗಳಲ್ಲಿ ಮುಂಚೂಣಿಯಲ್ಲಿರುವ ನಮ್ಮ ಮೆಟ್ರೋ ರೈಲು ಯೋಜನೆಯು ಬೆಂಗಳೂರು ನಗರದ ಸಂಚಾರ ವ್ಯವಸ್ಥೆಯ ಜೀವನಾಡಿಯಾಗಿದೆ. 8 ಲಕ್ಷಕ್ಕೂ ಹೆಚ್ಚಿನ ಜನರು ಪ್ರತಿನಿತ್ಯ ಮೆಟ್ರೋ ಸೇವೆಯನ್ನು ಬಳಸುತ್ತಿದ್ದಾರೆ. ಪ್ರಸ್ತುತ ಕಾರ್ಯಾಚರಣೆಯಲ್ಲಿರುವ 74 ಕಿ.ಮೀ. ಮಾರ್ಗದೊಂದಿಗೆ 2025ರ ಮಾರ್ಚ್‌ ವೇಳೆಗೆ ಹೆಚ್ಚುವರಿಯಾಗಿ 44 ಕಿ.ಮೀ. ಮಾರ್ಗ ಸೇರ್ಪಡೆಯಾಗಲಿದೆ. 

ಮೆಟ್ರೋ ಯೋಜನೆ ಹಂತ-2 ಮತ್ತು 2ಎ ಯೋಜನೆಯಡಿ ಹೊರವರ್ತುಲ ರಸ್ತೆ- ವಿಮಾನ ನಿಲ್ದಾಣ ಮಾರ್ಗವು 2026ರ ಜೂನ್‌ ವೇಳೆಗೆ ಪೂರ್ಣಗೊಳ್ಳಲಿದೆ. ಪ್ರಸಕ್ತ ಸಾಲಿನಲ್ಲಿ ಮೆಟ್ರೋ ಸೇವೆಯ ಇತಿಹಾಸದಲ್ಲಿಯೇ ಪ್ರಥಮ ಬಾರಿ ಕಾರ್ಯಾಚರಣೆಯು ಲಾಭದಾಯಕವಾಗಿ (Operational Profit) ಪರಿಣಮಿಸಿರುವುದು ಹೆಮ್ಮೆಯ ಸಂಕೇತವಾಗಿದೆ.

ನಮ್ಮ ಮೆಟ್ರೋ ಹಂತ-3 ರಡಿ ಅಂದಾಜು 15,611 ಕೋಟಿ ರೂ. ವೆಚ್ಚದ ಯೋಜನೆಗೆ ರಾಜ್ಯ ಸರ್ಕಾರವು ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕೇಂದ್ರ ಸರ್ಕಾರದ ಅನುಮೋದನೆಯ ನಿರೀಕ್ಷೆಯಲ್ಲಿದೆ.

ನಮ್ಮ ಮೆಟ್ರೋ ಹಂತ-3ಎ ರಡಿಯಲ್ಲಿ ಸರ್ಜಾಪುರದಿಂದ ಅಗರ, ಕೋರಮಂಗಲ ಡೈರಿ ವೃತ್ತ, ಮೇಖ್ರಿ ವೃತ್ತ ಮೂಲಕ ಹೆಬ್ಬಾಳವನ್ನು ಸಂಪರ್ಕಿಸುವ ಮಾರ್ಗ ನಿರ್ಮಾಣ ಕುರಿತು ಡಿ.ಪಿ.ಆರ್. ಕರಡು ಸಿದ್ಧಪಡಿಸಲಾಗಿದ್ದು, ಕೇಂದ್ರ ಸರ್ಕಾರದ ಅನುಮೋದನೆಗೆ ಸಲ್ಲಿಸಲಾಗುವುದು.

ಮಂದಗತಿಯಲ್ಲಿ ಸಾಗುತ್ತಿದ್ದ ಬೆಂಗಳೂರು ಉಪನಗರ ರೈಲು ಯೋಜನೆಯನ್ನು ನಮ್ಮ ಸರ್ಕಾರವು ಅಧಿಕಾರಕ್ಕೆ ಬಂದ ನಂತರ ಚುರುಕುಗೊಳಿಸಿ, ಬೈಯ್ಯಪ್ಪನಹಳ್ಳಿಯಿಂದ ಚಿಕ್ಕಬಾಣಾವರ ವರೆಗಿನ ಕಾರಿಡಾರ್‌-2ರ ಸಿವಿಲ್‌ ಕಾಮಗಾರಿಗಳನ್ನು ವೇಗವಾಗಿ ಅನುಷ್ಠಾನಗೊಳಿಸಲಾಗುತ್ತಿದೆ. 

ಕಾರಿಡಾರ್‌-4 ರ ಹೀಲಲಿಗೆಯಿಂದ ರಾಜಾನುಕುಂಟೆ ವರೆಗಿನ 46.2 ಕಿ.ಮೀ. ಉದ್ದದ ಮಾರ್ಗ ನಿರ್ಮಾಣಕ್ಕೆ ಕಾರ್ಯಾದೇಶ ನೀಡಲಾಗಿದೆ. Rolling Stock ಮತ್ತು ಅದರ ಕಾರ್ಯಾಚರಣೆ ಮತ್ತು ನಿರ್ವಹಣೆಗೆ RFP ಆಹ್ವಾನ ಮಾಡಲಾಗಿದೆ. European Investment Bank ಮತ್ತು ಜರ್ಮನಿಯ KFW ಬ್ಯಾಂಕುಗಳ ಜೊತೆಗೆ ಆರ್ಥಿಕ ನೆರವಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆಯ ಅಗತ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಗಮನ ಸೆಳೆದು ಹೆಚ್ಚಿನ ಅನುದಾನ ನೀಡುವಂತೆ ಒತ್ತಾಯಿಸಲಾಗುವುದು ಮತ್ತು ಕೇಂದ್ರ ಸರ್ಕಾರ ನೀಡುವ ಅನುದಾನಕ್ಕೆ ಎದುರಾಗಿ ರಾಜ್ಯ ಸರ್ಕಾರದ ಪಾಲಿನ ಅನುದಾನವನ್ನು ಒದಗಿಸಲಾಗುವುದು. 

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪ್ರತಿದಿನ ಸರಾಸರಿ 42 ಲಕ್ಷ ಜನರಿಗೆ ಸೇವೆಯನ್ನು ಒದಗಿಸುತ್ತಿದ್ದು, ದೇಶದಲ್ಲಿಯೇ ಅತ್ಯುತ್ತಮ ನಗರ ಸಾರಿಗೆ ವ್ಯವಸ್ಥೆಗಳಲ್ಲಿ ಒಂದಾಗಿದೆ. ಮುಂದಿನ ದಿನಗಳಲ್ಲಿ 1,334 ಹೊಸ ಎಲೆಕ್ಟ್ರಿಕ್‌ ಬಸ್‌ಗಳು ಮತ್ತು 820 ಬಿಎಸ್-6 ಡೀಸೆಲ್‌ ಬಸ್ಸುಗಳನ್ನು ಬಿ.ಎಂ.ಟಿ.ಸಿ.ಗೆ ಸೇರ್ಪಡೆಗೊಳಿಸಲಾಗುವುದು. 

ಪ್ರಯಾಣಿಕರ ಹಿತದೃಷ್ಟಿಯಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಮಹಿಳಾ ಸುರಕ್ಷತೆಯನ್ನು ಒಳಗೊಂಡ Vehicle Tracking ಹೊಂದಿರುವ ಮೊಬೈಲ್‌ ಆಪ್‌ ಅನ್ನು ಅನುಷ್ಠಾನಗೊಳಿಸಲಾಗುತ್ತಿದೆ. 

ಜಪಾನ್‌ ಸರ್ಕಾರದ ಸಹಯೋಗದೊಂದಿಗೆ ಬೆಂಗಳೂರು ನಗರದಲ್ಲಿ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು Area Traffic Signal Control System ಅನ್ನು ನಗರದ ಪ್ರಮುಖ 28 ಜಂಕ್ಷನ್‌ಗಳಲ್ಲಿ ಅಳವಡಿಸುವ ಮೂಲಕ ಟ್ರಾಫಿಕ್‌ ಸಿಗ್ನಲ್‌ ನಲ್ಲಿ ವಾಹನಗಳ ಸಂದಣಿಯನ್ನು ಶೇ.30ರಷ್ಟು ಹಾಗೂ ಸರಾಸರಿ ವಿಳಂಬವನ್ನು ಶೇ.13ರಷ್ಟು ಕಡಿಮೆಗೊಳಿಸಲಾಗುವುದು.

ನಗರದ ಅಭಿವೃದ್ಧಿಯ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳ ಜೊತೆಯಲ್ಲಿ ನಾಗರಿಕರ ಬದುಕಿನ ಗುಣಮಟ್ಟ ಸುಧಾರಣೆಗೂ ನಮ್ಮ ಸರ್ಕಾರ ಆದ್ಯತೆ ನೀಡುತ್ತಿದ್ದು, ಉತ್ತಮ ಪರಿಸರ, 24×7 ಕುಡಿಯುವ ನೀರಿನ ಪೂರೈಕೆ ಮತ್ತು ಸ್ವಚ್ಛತೆಯ ನಿರ್ವಹಣೆಗೆ ಒತ್ತು ನೀಡಲಾಗುವುದು. ಈ ನಿಟ್ಟಿನಲ್ಲಿ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲಾಗುವುದು;

• ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ವತಿಯಿಂದ 5,550 ಕೋಟಿ ರೂ. ಅಂದಾಜು ವೆಚ್ಚದಲ್ಲಿ 775 ಎಂ.ಎಲ್.ಡಿ ಸಾಮರ್ಥ್ಯದ ಕಾವೇರಿ ಹಂತ-5 ಯೋಜನೆಯನ್ನು ಮೇ 2024 ರಲ್ಲಿ ಕಾರ್ಯಾರಂಭಗೊಳಿಸುವ ಮೂಲಕ 12 ಲಕ್ಷ ಜನರಿಗೆ ಪ್ರತಿದಿನ 110 ಲೀಟರ್‌ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು.

• ಕಾವೇರಿ ಹಂತ-5 ರಡಿಯಲ್ಲಿ ಒಳಚರಂಡಿ ಕಾಮಗಾರಿಗಳನ್ನು ಡಿಸೆಂಬರ್‌ 2024 ರಲ್ಲಿ ಪೂರ್ಣಗೊಳಿಸಲಾಗುವುದು. ಇದರಿಂದ 228 ಕಿ.ಮೀ ವ್ಯಾಪ್ತಿಯಲ್ಲಿ ಒಳಚರಂಡಿ ಕೊಳವೆಯನ್ನು ಅಳವಡಿಸಲಾಗುವುದು ಮತ್ತು 13 ಎಸ್.ಟಿ.ಪಿ ಘಟಕಗಳಿಂದ 100 ಎಂ.ಎಲ್.ಡಿ ರಷ್ಟು ಒಳಚರಂಡಿ ನೀರನ್ನು ಸಂಸ್ಕರಿಸುವ ಸಾಮರ್ಥ್ಯವನ್ನು ಸೃಜಿಸಲಾಗುವುದು. 

• 07 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳನ್ನು (ಎಸ್.ಟಿ.ಪಿ) 441 ಕೋಟಿ ರೂ.ಗಳ ಮೊತ್ತದಲ್ಲಿ ಉನ್ನತೀಕರಿಸಲಾಗುವುದು. ಇದರಿಂದ 268 ಎಂ.ಎಲ್.ಡಿ ತ್ಯಾಜ್ಯ ನೀರನ್ನು ಪ್ರತಿನಿತ್ಯ ಸಂಸ್ಕರಿಸಿ ಮರುಬಳಕೆ ಮಾಡಲು ಅನುಕೂಲವಾಗಲಿದೆ. 

• ಬಿ.ಬಿ.ಎಂ.ಪಿ ವ್ಯಾಪ್ತಿಗೆ ಸೇರ್ಪಡೆಯಾದ 110 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯವನ್ನು ಒದಗಿಸುವ ಯೋಜನೆಯ ಎರಡನೇ ಹಂತವನ್ನು 200 ಕೋಟಿ ರೂ.ಗಳ ಮೊತ್ತದಲ್ಲಿ ಪ್ರಾರಂಭಿಸಲಾಗುವುದು.   

ಮನೆಗಳಿಂದ ತ್ಯಾಜ್ಯ ಸಂಸ್ಕರಣಾ ಘಟಕಗಳವರೆಗೂ ತ್ಯಾಜ್ಯಗಳ ವಿಲೇವಾರಿಯನ್ನು ವ್ಯವಸ್ಥಿತವಾಗಿ ನಿರ್ವಹಿಸಲು ಬೆಂಗಳೂರು ನಗರ ಜಿಲ್ಲೆಯನ್ನು ನಾಲ್ಕು ವಲಯಗಳನ್ನಾಗಿ ವಿಂಗಡಿಸಿ, ಪ್ರತಿಯೊಂದು ವಲಯಕ್ಕೂ ನುರಿತ ಸಂಸ್ಥೆಯನ್ನು ಪಾರದರ್ಶಕವಾಗಿ ನೇಮಿಸಲಾಗುವುದು. ನಗರದ ಹೊರವಲಯದ ನಾಲ್ಕು ಕಡೆಗಳಲ್ಲಿ 50 ರಿಂದ 100 ಎಕರೆ ಜಮೀನನ್ನು ಗುರುತಿಸಿ ಮುಂದಿನ 30 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟು ವೈಜ್ಞಾನಿಕ ತ್ಯಾಜ್ಯ ವಿಲೇವಾರಿಗೆ ಅವಕಾಶ ಕಲ್ಪಿಸಲಾಗುವುದು.  

ಬಿಬಿಎಂಪಿಯ ಅರಣ್ಯ, ಕೆರೆ ಮತ್ತು ತೋಟಗಾರಿಕಾ ವಿಭಾಗವನ್ನು ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ನಿರ್ವಹಣಾ ವಿಭಾಗ ಎಂದು ಮರುನಾಮಕರಣ ಮಾಡಿ, ಕಾರ್ಯವ್ಯಾಪ್ತಿಯನ್ನು ವಿಸ್ತರಿಸಲಾಗಿದೆ. ನಗರದಲ್ಲಿ ವಾತಾವರಣದ ಸ್ವಚ್ಛತೆಗಾಗಿ ಮರಗಳ ಗಣತಿ, ಕೆರೆ ಮತ್ತು ಉದ್ಯಾನವನಗಳ ತಂತ್ರಾಂಶ ಆಧಾರಿತ ಮೇಲ್ವಿಚಾರಣೆ ಹಾಗೂ ಕೆರೆ ಮತ್ತು ಉದ್ಯಾನಗಳ ಅಭಿವೃದ್ಧಿಯಲ್ಲಿ ಸಾರ್ವಜನಿಕ ಸಹಭಾಗಿತ್ವವನ್ನು ಹೆಚ್ಚಿಸಲು ಪ್ರತ್ಯೇಕ ನೀತಿ ಜಾರಿಗೊಳಿಸಲಾಗುವುದು.

ಬಿಬಿಎಂಪಿ ಸಹಯೋಗದೊಂದಿಗೆ ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದಲ್ಲಿ ಸರ್ವಜ್ಞ ಉದ್ಯಾನವನವನ್ನು ಅಭಿವೃದ್ಧಿಪಡಿಸಲಾಗುವುದು.

ಬೆಂಗಳೂರು ಹಾಗೂ 10 ಮಹಾನಗರ ಪಾಲಿಕೆಗಳಲ್ಲಿ ವಾಣಿಜ್ಯ ಮತ್ತು ವ್ಯಾಪಾರದ ದೃಷ್ಠಿಯಿಂದ ರಾತ್ರಿಯ ವೇಳೆ ವ್ಯಾಪಾರ-ವಹಿವಾಟಿನ ಮೇಲಿನ ನಿರ್ಬಂಧವನ್ನು ಬೆಳಗಿನ ಜಾವ ಒಂದು ಗಂಟೆಯವರೆಗೆ (1:೦೦ am) ವಿಸ್ತರಿಸಲಾಗುವುದು ಎಂದಿದ್ದಾರೆ‌

ಪೌರಾಡಳಿತ: ಬೆಂಗಳೂರಿಗೆ ಪರ್ಯಾಯವಾಗಿ ರಾಜ್ಯದಲ್ಲಿ ಸುಸ್ಥಿರವಾದ ಮೂಲಸೌಕರ್ಯಗಳನ್ನು ಒಳಗೊಂಡ ಮತ್ತು ಉದ್ಯೋಗಾವಕಾಶಗಳನ್ನು ಸೃಜಿಸುವಂತೆ ಆಕರ್ಷಕ ನಗರಗಳನ್ನು ಅಭಿವೃದ್ಧಿಪಡಿಸುವ ಮೂಲಕ ಬೆಂಗಳೂರಿನ ಮೇಲಿನ ಒತ್ತಡವನ್ನು ತಗ್ಗಿಸಲು ಸರ್ಕಾರವು ವಿವಿಧ ಯೋಜನೆಗಳನ್ನು ರೂಪಿಸಲಿದೆ.

• ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ 2.0 ಅಡಿ ರಾಜ್ಯದ 10 ಮಹಾನಗರ ಪಾಲಿಕೆಗಳಲ್ಲಿ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗಾಗಿ 2,000 ಕೋಟಿ ರೂ. ಗಳನ್ನು ಒದಗಿಸಲಾಗುವುದು.

• ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ, ಕೆ.ಜಿ.ಎಫ್‌, ತುಮಕೂರಿನ ವಸಂತನರಸಾಪುರ ಮತ್ತು ಬಳ್ಳಾರಿ ನಗರಗಳ ಸಮೀಪದಲ್ಲಿ ಇಂಟಿಗ್ರೇಟೆಡ್ ಟೌನ್‌ಶಿಪ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು.

• ಬೆಂಗಳೂರಿನ ಹೊರವಲಯದಲ್ಲಿರುವ ದೇವನಹಳ್ಳಿ, ನೆಲಮಂಗಲ, ಹೊಸಕೋಟೆ, ದೊಡ್ಡಬಳ್ಳಾಪುರ, ಮಾಗಡಿ ಮತ್ತು ಬಿಡದಿಯಲ್ಲಿ ರಸ್ತೆ ಮತ್ತು ರೈಲು ಸಂಪರ್ಕದೊಂದಿಗೆ ಉಪನಗರ ಟೌನ್‌ಶಿಪ್‌ಗಳನ್ನಾಗಿ (Satellite Townships) ಅಭಿವೃದ್ಧಿಪಡಿಸಲಾಗುವುದು.

• ಬೆಂಗಳೂರಿನ BIEC ನಿಂದ ತುಮಕೂರುವರೆಗೆ ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೇವನಹಳ್ಳಿವರೆಗೆ ಸಾರ್ವಜನಿಕ ಖಾಸಗಿ

• ಸಹಭಾಗಿತ್ವದಲ್ಲಿ ಮೆಟ್ರೋ ರೈಲು ಯೋಜನೆಗಳನ್ನು ಪ್ರಾರಂಭಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು. 

ರಾಜ್ಯದ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜನದಟ್ಟಣೆಯು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ರಿಂಗ್‌ ರಸ್ತೆಯ ಮೇಲೆ ಒತ್ತಡ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರು ನಗರಕ್ಕೆ ಪೆರಿಫೆರಲ್‌ ರಿಂಗ್‌ ರಸ್ತೆಯನ್ನು ಪಿಪಿಪಿ ಅಥವಾ ಟೌನ್‌ ಪ್ಲಾನಿಂಗ್‌ ಮಾದರಿಯಲ್ಲಿ ನಿರ್ಮಿಸಲು ಕಾರ್ಯಸಾಧ್ಯತಾ ವರದಿಯನ್ನು ತಯಾರಿಸಲಾಗುವುದು. 

ನಗರ ಪ್ರದೇಶದ ಎಲ್ಲಾ ಮನೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಅಮೃತ್ 2.0 ಕೇಂದ್ರ ಪುರಸ್ಕೃತ ಯೋಜನೆಯಡಿ ಅನುಷ್ಠಾನಗೊಳಿಸಲಾಗುತ್ತಿದ್ದು, ಇದರಲ್ಲಿ ರಾಜ್ಯದ ಪಾಲು 4,615 ಕೋಟಿ ರೂ. ಗಳಾಗಿದೆ. ಕಳೆದ ವರ್ಷ ಈ ಉದ್ದೇಶಕ್ಕಾಗಿ ನಾವು 320 ಕೋಟಿ ರೂ. ಅನುದಾನ ಒದಗಿಸಿದ್ದು, ಈ ವರ್ಷ 200 ಕೋಟಿ ರೂ. ಒದಗಿಸಿ, 7.5 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕದ ಮೂಲಕ ಕುಡಿಯುವ ನೀರನ್ನು ಒದಗಿಸುವ ಗುರಿ ಹೊಂದಿದ್ದೇವೆ.

ಕೇಂದ್ರ ಪುರಸ್ಕೃತ ಸ್ವಚ್ಛ ಭಾರತ್ ಮಿಷನ್ 2.0 ಅಡಿಯಲ್ಲಿ ದ್ರವ ಹಾಗೂ ಘನ ತ್ಯಾಜ್ಯ ಸಂಸ್ಕರಣೆಗೆ ಕೇಂದ್ರ ಸರ್ಕಾರದ ಪಾಲು 2,185 ಕೋಟಿ ರೂ.ಗಳನ್ನು ಒಳಗೊಂಡಂತೆ 5,072 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ. ಪ್ರಸಕ್ತ ವರ್ಷದಲ್ಲಿ ನಮ್ಮ ಜಲ ಮೂಲಗಳನ್ನು ಮಲಿನಗೊಳಿಸುವ ದ್ರವ ತ್ಯಾಜ್ಯಗಳ ಸಂಸ್ಕರಣೆ, ಲೆಗೆಸಿ ತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಆದ್ಯತೆ ನೀಡುವ ಮೂಲಕ ನಗರಗಳಲ್ಲಿ ಸ್ವಚ್ಛ ವಾತಾವರಣ ನಿರ್ಮಾಣ ಮಾಡಲು ಒತ್ತು ನೀಡಲಾಗುವುದು.

ಸ್ಥಳೀಯ ಸಂಸ್ಥೆ, ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರದ ಜಂಟಿ ಸಹಭಾಗಿತ್ವದ ಯೋಜನೆಯಾದ ಅಮೃತ್‌ 2.0 ಅಡಿಯಲ್ಲಿ, 539 ಕೋಟಿ ರೂ. ಮೊತ್ತದಲ್ಲಿ ಕೆರೆ ಹಾಗೂ ಜಲಮೂಲಗಳ ಪುನಶ್ಚೇತನ ಮತ್ತು ಉದ್ಯಾನವನಗಳ ಅಭಿವೃದ್ಧಿ ಕಾಮಗಾರಿಗಳನ್ನು ಆಯ್ದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕೈಗೊಳ್ಳಲಾಗುವುದು.

ನಗರ ಪ್ರದೇಶಗಳಲ್ಲಿ ಆಸ್ತಿಗಳ ಅಕ್ರಮ ನೋಂದಣಿ ತಡೆಗಟ್ಟಲು ಹಾಗೂ ಆಸ್ತಿ ನೋಂದಣಿ ಮತ್ತು ಖಾತಾ ನಮೂದನ್ನು ಇನ್ನಷ್ಟು ಸರಳೀಕರಣಗೊಳಿಸಲು, ಕಾವೇರಿ ಮತ್ತು ಇ-ಆಸ್ತಿ ತಂತ್ರಾಂಶಗಳ ಸಂಯೋಜನೆಯನ್ನು ರಾಜ್ಯಾದ್ಯಂತ ಜಾರಿಗೊಳಿಸಲಾಗುವುದು.

ಆಸ್ತಿ ತೆರಿಗೆ ಮತ್ತು ಇನ್ನಿತರೆ ಶುಲ್ಕಗಳನ್ನು ಪರಿಣಾಮಕಾರಿಯಾಗಿ ವಸೂಲಿ ಮಾಡಲು ಹಾಗೂ ತೆರಿಗೆ ಸೋರಿಕೆಯನ್ನು ತಡೆಗಟ್ಟಲು 3ಡಿ ಡ್ರೋನ್‌ ತಂತ್ರಜ್ಞಾನವನ್ನು ಬಳಸಿಕೊಂಡು ಸ್ವತ್ತುಗಳ ಮ್ಯಾಪಿಂಗ್‌ ಮತ್ತು ಮರು ಮೌಲ್ಯಮಾಪನವನ್ನು ಕೈಗೊಳ್ಳಲಾಗುವುದು.

ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ಸಮರ್ಪಕವಾಗಿ ವಸೂಲು ಮಾಡಲು, ಸ್ಥಳೀಯ ಮಹಿಳಾ ಸ್ವ-ಸಹಾಯ ಗುಂಪುಗಳ ಸೇವೆಯನ್ನು ಪಡೆಯಲಾಗುವುದು. 

ನೇರಪಾವತಿಯಡಿ ಕೆಲಸ ನಿರ್ವಹಿಸುತ್ತಿರುವ 24,005 ಪೌರಕಾರ್ಮಿಕರನ್ನು ಈಗಾಗಲೇ ಖಾಯಂಗೊಳಿಸಲು ಸರ್ಕಾರದಿಂದ ಅನುಮೋದನೆ ನೀಡಲಾಗಿದೆ.  ನೇರಪಾವತಿಯಡಿಯಲ್ಲಿ ಬಾಕಿ ಉಳಿದಿರುವ ಪೌರಕಾರ್ಮಿಕರಿಗೂ ಹಂತ ಹಂತವಾಗಿ ಖಾಯಂಗೊಳಿಸಲು ಕ್ರಮವಹಿಸಲಾಗುವುದು. 

ಸಮರ್ಪಕ ಹಾಗೂ ಯೋಜಿತ ನಗರೀಕರಣಕ್ಕಾಗಿ ಒಂದು ಲಕ್ಷಕ್ಕೂ ಅಧಿಕ ಜನಸಂಖ್ಯೆ ಹೊಂದಿರುವ ಎಲ್ಲಾ ಸ್ಥಳೀಯ ಯೋಜನಾ ಪ್ರಾಧಿಕಾರಗಳನ್ನು ನಗರಾಭಿವೃದ್ಧಿ ಪ್ರಾಧಿಕಾರಗಳನ್ನಾಗಿ ಉನ್ನತೀಕರಿಸಲು ಕ್ರಮಕೈಗೊಳ್ಳಲಾಗುವುದು.ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನಡೆಯುವ ಸಭೆಗಳ ಕಾರ್ಯಕಲಾಪಗಳನ್ನು ನೇರ ಪ್ರಸಾರ ಮಾಡಲಾಗುವುದು. 

ಮೈಸೂರಿನ ಪ್ರಖ್ಯಾತ ಲ್ಯಾನ್ಸ್‌ಡೌನ್‌ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಯನ್ನು ಪಾರಂಪರಿಕ ಶೈಲಿಯಲ್ಲಿಯೇ ಅಭಿವೃದ್ಧಿಪಡಿಸಲು ಕ್ರಮವಹಿಸಲಾಗುವುದು.

ಇಂಧನ: ಗೃಹ ವಿದ್ಯುತ್‌ ಬಳಕೆದಾರರಿಗೆ 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ನೀಡುವ ಗೃಹಜ್ಯೋತಿ ಗ್ಯಾರಂಟಿ ಯೋಜನೆಯನ್ನು ಜುಲೈ 1 ರಿಂದ ಅನ್ವಯವಾಗುವಂತೆ ಜಾರಿಗೊಳಿಸಲಾಗಿದೆ. ಈ ಯೋಜನೆಯಡಿ 1.65 ಕೋಟಿ ಗ್ರಾಹಕರು ನೋಂದಾಯಿಸಿಕೊಂಡಿದ್ದು, ಅಂದಾಜು 5 ಕೋಟಿಯಷ್ಟು ಜನರು ಉಚಿತ ವಿದ್ಯುತ್‌ ಸೌಲಭ್ಯ ಪಡೆಯುತ್ತಿದ್ದಾರೆ.

ಇದರೊಂದಿಗೆ ಕುಟೀರ ಜ್ಯೋತಿ, ಭಾಗ್ಯ ಜ್ಯೋತಿ, ಅಮೃತ ಜ್ಯೋತಿ ಮೊದಲಾದ ಯೋಜನೆಗಳ ಫಲಾನುಭವಿಗಳನ್ನೂ ಸಹ ಗೃಹಜ್ಯೋತಿ ಯೋಜನೆಯ ವ್ಯಾಪ್ತಿಗೆ ಸೇರ್ಪಡೆಗೊಳಿಸಲಾಗಿದೆ. ಅಲ್ಲದೆ, 48 ಯುನಿಟ್‌ ಒಳಗಿನ ಸರಾಸರಿ ಬಳಕೆಗೆ ಶೇ.10ರಷ್ಟು ಹೆಚ್ಚುವರಿ ವಿದ್ಯುತ್‌ ಬದಲಿಗೆ 10 ಯುನಿಟ್‌ಗಳಷ್ಟು ಹೆಚ್ಚುವರಿ ವಿದ್ಯುತ್‌ ಒದಗಿಸಲು ತೀರ್ಮಾನಿಸಲಾಗಿದೆ.

ಹಿಂದಿನ ಸರ್ಕಾರದ ಅವಧಿಯಲ್ಲಿ ವಿದ್ಯುತ್‌ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯದಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ಮುಂದಿನ 7 ವರ್ಷಗಳಲ್ಲಿ ಇಂಧನ ವಲಯಕ್ಕೆ ಹೆಚ್ಚಿನ ಬಂಡವಾಳವನ್ನು ಆಕರ್ಷಿಸುವ ಮೂಲಕ ವಿದ್ಯುತ್‌ ಉತ್ಪಾದನೆಯ ಸ್ಥಾಪಿತ ಸಾಮರ್ಥ್ಯವನ್ನು‌ 32,000 ಮೆಗಾವ್ಯಾಟ್‌ ನಿಂದ 60,000 ಮೆಗಾವ್ಯಾಟ್ ಗಳಿಗೆ ಹೆಚ್ಚಿಸಲಾಗುವುದು.

ರಾಜ್ಯವು ಉತ್ಪಾದಿಸುತ್ತಿರುವ ವಿದ್ಯುತ್ತಿನ ಶೇ.63 ರಷ್ಟು ಇಂಧನವು ನವೀಕರಿಸಬಹುದಾದ ಇಂಧನದಿಂದ ಆಗಿರುತ್ತದೆ.  ನಮ್ಮ ಸರ್ಕಾರದ ಸಕಾರಾತ್ಮಕ ನೀತಿಗಳಿಂದ ಈ ವಲಯದಲ್ಲಿ ಸಾವಿರಾರು ಕೋಟಿ ರೂ. ಖಾಸಗಿ ಹೂಡಿಕೆಯನ್ನು ಮಾಡಲಾಗುತ್ತಿದೆ. ಈ ನೀತಿಗಳನ್ನು ಇನ್ನಷ್ಟು ಹೂಡಿಕೆದಾರರ ಸ್ನೇಹಿಯನ್ನಾಗಿ ಮಾಡಲು ಕ್ರಮವಹಿಸಲಾಗುವುದು.

ರೈತರನ್ನು ಸ್ವಾವಲಂಬಿಗಳನ್ನಾಗಿ ಮಾಡಲು PM-KUSUM Component-B ಯೋಜನೆಯಡಿ 1,174 ಕೋಟಿ ರೂ. ಅಂದಾಜು ವೆಚ್ಚದಲ್ಲಿ 40,000 ಜಾಲ ಮುಕ್ತ (Off Grid) ಸೋಲಾರ್ ಪಂಪ್ ಸೆಟ್‌ಗಳನ್ನು ಸ್ಥಾಪಿಸಲಾಗುತ್ತಿದೆ. ಇದರಲ್ಲಿ ಕೇಂದ್ರ ಸರ್ಕಾರದ ಪಾಲು ಶೇ.30ರಷ್ಟಿದ್ದು, ರಾಜ್ಯ ಸರ್ಕಾರದ ವತಿಯಿಂದ ನೀಡುವ ಸಹಾಯಧನವನ್ನು ಶೇ.30ರಿಂದ ಶೇ.50ಕ್ಕೆ ಹೆಚ್ಚಿಸಲಾಗಿದೆ. 

ಕರ್ನಾಟಕ ವಿದ್ಯುತ್‌ ನಿಗಮವು Tehri Hydro Development Corporation India Limited (THDCIL) ಸಹಯೋಗದೊಂದಿಗೆ ತೇಲುವ (Floating) ಸೌರ ಹಾಗೂ ಭೂಸ್ಥಾಪಿತ (Ground mounted) ಸೌರ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ.

ಕೃಷಿ ಪಂಪ್‌ಸೆಟ್‌ ಫೀಡರ್‌ ಸೌರೀಕರಣ ಯೋಜನೆ ಹಂತ-I ಅಡಿಯಲ್ಲಿ 1,320 ಮೆಗಾ ವ್ಯಾಟ್‌ ವಿಕೇಂದ್ರೀಕೃತ ಉತ್ಪಾದನೆಗೆ ಕ್ರಮವಹಿಸಲಾಗಿದೆ. ಇದರಿಂದ 3.37 ಲಕ್ಷ ರೈತರಿಗೆ ಅನುಕೂಲವಾಗಲಿದೆ. ಇದಲ್ಲದೆ, ಹಂತ-II ಅಡಿಯಲ್ಲಿ 1,192 ಮೆಗಾ ವ್ಯಾಟ್‌ ಸೌರ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ 4.30 ಲಕ್ಷ ಐ.ಪಿ. ಸೆಟ್‌ಗಳನ್ನು ಸೌರೀಕರಣಗೊಳಿಸಲು  ಉದ್ದೇಶಿಸಲಾಗಿದೆ.

ಗ್ರೀನ್‌ ಹೈಡ್ರೋಜನ್‌ ಭವಿಷ್ಯದ ಇಂಧನ. ಖಾಸಗಿ ಬಂಡವಾಳವನ್ನು ಈ ವಲಯಕ್ಕೆ ಆಕರ್ಷಿಸಲು 300 ಕಿಲೋ ವ್ಯಾಟ್‌ ಸಾಮರ್ಥ್ಯದ ಗ್ರೀನ್ ಹೈಡ್ರೋಜನ್ ಸ್ಥಾವರವನ್ನು ಪ್ರಾಯೋಗಿಕವಾಗಿ ಅಂದಾಜು 10 ಕೋಟಿ ರೂ. ವೆಚ್ಚದಲ್ಲಿ MNRE ನಿಧಿಯಿಂದ ಸ್ವಯಂ-ಸುಸ್ಥಿರ ಘಟಕದ ಆಧಾರದ ಮೇಲೆ KREDL ವತಿಯಿಂದ ಅನುಷ್ಠಾನಗೊಳಿಸಲಾಗುವುದು ಮತ್ತು ಗ್ರೀನ್ ಹೈಡ್ರೋಜನ್ ನೀತಿಯನ್ನು ರೂಪಿಸಲಾಗುವುದು. 

KREDL ನಿಂದ ಪ್ರತೀ ಎಸ್ಕಾಂ ವ್ಯಾಪ್ತಿಯ ಆಯ್ದ ಒಂದು ಹಿಂದುಳಿದ ಗ್ರಾಮದಲ್ಲಿ ಪ್ರಾಯೋಗಿಕವಾಗಿ ಮೈಕ್ರೋಗ್ರಿಡ್ ವ್ಯವಸ್ಥೆಯ (Microgrid) ಮೂಲಕ ಬ್ಯಾಟರಿ ಶೇಖರಣೆಯನ್ನು ಹೊಂದಿದ 500 ಕಿಲೋ ವ್ಯಾಟ್‌ ಸಾಮರ್ಥ್ಯದ ಸೌರ ಘಟಕದ ಸ್ಥಾಪನೆಯ ಮೂಲಕ ಸದರಿ ಗ್ರಾಮಗಳನ್ನು ಸ್ವಾವಲಂಬಿ ಗ್ರಾಮಗಳನ್ನಾಗಿ ಮಾಡಲು ಉದ್ದೇಶಿಸಿದೆ. 

ನವೀಕರಿಸಬಹುದಾದ ಇಂಧನವನ್ನು ಬೃಹತ್‌ ಪ್ರಮಾಣದಲ್ಲಿ ಉತ್ಪಾದಿಸಿ ಬೇಡಿಕೆ ಹೆಚ್ಚಿರುವ ಕೇಂದ್ರಗಳು ಮತ್ತು ಗ್ರೀನ್ ಹೈಡ್ರೋಜನ್ ಹಬ್‌ಗಳಿಗೆ ರವಾನಿಸಲು 765 kV ಯ Ultra High Voltage (UHV) ಟ್ರಾನ್ಸ್‌ಮಿಷನ್ ಮಾರ್ಗಗಳನ್ನು ನಿರ್ಮಿಸಲು ಕ್ರಮ ವಹಿಸಲಾಗುವುದು.

ಪ್ರಸರಣ ಮಾರ್ಗಗಳ ನಿರ್ವಹಣೆಯಲ್ಲಿ ನಿಗದಿತ ಸ್ಥಗಿತಗಳು ಹಾಗೂ ದೀರ್ಘಾವಧಿಯ ಸ್ಥಗಿತಗಳನ್ನು ತಪ್ಪಿಸಲು 66 kV ಮತ್ತು 110 kV ಮೊಬೈಲ್/ ವಾಹನ ಮೇಲಿರಿಸಿರುವ ಸಬ್‌ಸ್ಟೇಷನ್‌ಗಳನ್ನು ಖರೀದಿಸಲಾಗುವುದು.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಹುಮಹಡಿ ಕಟ್ಟಡಗಳ ಬೆಳವಣಿಗೆಯಿಂದಾಗಿ ಹೆಚ್ಚುತ್ತಿರುವ ವಿದ್ಯುತ್‌ ಬೇಡಿಕೆಯನ್ನು ನೀಗಿಸಲು, ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸಬ್‌ಸ್ಟೇಷನ್‌ಗಳನ್ನು ಉನ್ನತೀಕರಿಸಲಾಗುವುದು.

ವಿದ್ಯುತ್ ಚಾಲಿತ ವಾಹನಗಳಿಗೆ ಉತ್ತೇಜನ ನೀಡಲು 2,500 EV Charging ಕೇಂದ್ರಗಳನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಲಾಗುವುದು. ಅಲ್ಲದೇ, ವಿದ್ಯುತ್‌ ಸರಬರಾಜು ಕಂಪನಿಗಳ ಮೂಲಕ 35 ಕೋಟಿ ರೂ. ವೆಚ್ಚದಲ್ಲಿ 100 ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಲೋಕೋಪಯೋಗಿ: ಪ್ರಸಕ್ತ ಸಾಲಿನಲ್ಲಿ ಕೆಶಿಪ್-4 ಯೋಜನೆಯನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 875 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಯನ್ನು ಬಾಹ್ಯ ಹಣಕಾಸು ಸಂಸ್ಥೆಯ ನೆರವಿನೊಂದಿಗೆ 5,736 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುವುದು. 

ರಾಜ್ಯದಲ್ಲಿನ 1,300 ಕಿ.ಮೀ. ಉದ್ದದ ಪ್ರಮುಖ ರಸ್ತೆಗಳನ್ನು 4,000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಪ್ರಸಕ್ತ ಸಾಲಿನಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ (SHDP) ಹಂತ-5ನ್ನು ಪ್ರಾರಂಭಿಸಲಾಗುವುದು.

ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ. ಉದ್ದದ ಮೇಲ್ಸೇತುವೆ (Elevated Corridor) ನಿರ್ಮಾಣ ಕಾಮಗಾರಿಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು.

ಬೆಂಗಳೂರು-ಮಂಡ್ಯ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೈಸೂರು ಹೊರವಲಯದಲ್ಲಿರುವ ಜಂಕ್ಷನ್ನಲ್ಲಿ ವಾಹನ ಸಂಚಾರ ದಟ್ಟಣೆಯನ್ನು ನೀಗಿಸಲು ಎನ್.ಹೆಚ್.ಎ.ಐ ಸಹಯೋಗದೊಂದಿಗೆ ಮೇಲುಸೇತುವೆ ನಿರ್ಮಾಣ ಮಾಡಲಾಗುವುದು. 

ಮೈಸೂರಿನ ಕುಕ್ಕರಹಳ್ಳಿ ಬಳಿ ಹಾಗೂ ಕೆ.ಆರ್.ಎಸ್. ರಸ್ತೆ, ಶಿವಮೊಗ್ಗ-ಬೊಮ್ಮನಕಟ್ಟೆ ರಸ್ತೆ, ಗದಗ ಜಿಲ್ಲೆಯ ರೋಣದ ಮಲ್ಲಾಪುರ, ಚನ್ನಪಟ್ಟಣ-ಬೈರಾಪಟ್ಟಣ ಮಾರ್ಗ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಒಟ್ಟು 6 ರೈಲ್ವೆ ಮೇಲು ಹಾಗೂ ಕೆಳಸೇತುವೆಗಳ ನಿರ್ಮಾಣವನ್ನು 350 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲಾಗುವುದು.

ಸಮರ್ಪಿತ ಆರ್ಥಿಕ ಕಾರಿಡಾರ್ಗಳು ಆರ್ಥಿಕ ಅಭಿವೃದ್ಧಿಗೆ ಪೂರಕ ಮೂಲಸೌಕರ್ಯ ಜಾಲವನ್ನು ಒದಗಿಸುತ್ತವೆ. ರಾಜ್ಯದ ಮೂಲಕ ಹಾದು ಹೋಗುವ ಮುಂಬೈ-ಚೆನ್ನೈ ಕಾರಿಡಾರ್ನಲ್ಲಿ ನಾವು ಹಲವಾರು ಕೈಗಾರಿಕಾ ಅಭಿವೃದ್ಧಿ ಚಟುವಟಿಕೆಗಳನ್ನು ಕೈಗೊಂಡಿದ್ದೇವೆ. ಇದೇ ಮಾದರಿಯಲ್ಲಿ ರಾಜ್ಯ ಸರ್ಕಾರವು ಎರಡು ಆರ್ಥಿಕ ಕಾರಿಡಾರ್ ಅಭಿವೃದ್ಧಿಪಡಿಸಲು ಉದ್ದೇಶಿಸಿದೆ. ಒಂದು ಕಾರಿಡಾರ್ ಮಂಗಳೂರು ಬಂದರಿನಿಂದ ಬೆಂಗಳೂರು ವರೆಗೆ ಅಭಿವೃದ್ಧಿಪಡಿಸಲಾಗುವುದು. ಇದರಿಂದ ಬಂದರು ಸಂಪರ್ಕ ಸುಲಭವಾಗುವುದಲ್ಲದೆ, ಯುರೋಪ್ ಮತ್ತು ಮಧ್ಯಪ್ರಾಚ್ಯ ರಾಷ್ಟ್ರಗಳಿಗೆ ಸರಕು ಸಾಗಾಣಿಕೆ ಅವಧಿ ಗಣನೀಯವಾಗಿ ಕಡಿಮೆಯಾಗಲಿದೆ. ಇನ್ನೊಂದು ಕಾರಿಡಾರ್ ಅನ್ನು ಬೀದರ್ ಹಾಗೂ ಬೆಂಗಳೂರು ನಡುವೆ ಅಭಿವೃದ್ಧಿಪಡಿಸುವ ಮೂಲಕ ಕಲ್ಯಾಣ ಕರ್ನಾಟಕ ಪ್ರದೇಶದ ಆರ್ಥಿಕ ಅಭಿವೃದ್ಧಿಯನ್ನು ಚುರುಕುಗೊಳಿಸಲಾಗುವುದು.

ವಾಣಿಜ್ಯ ಮತ್ತು ಕೈಗಾರಿಕೆ: ಕರ್ನಾಟಕ ಸರ್ಕಾರವು 2023-24ನೇ ಸಾಲಿನಲ್ಲಿ ಸುಮಾರು 88,150 ಕೋಟಿ ರೂ.ಗಳ ಹೂಡಿಕೆಯನ್ನು ಆಕರ್ಷಿಸಿದೆ. Electronic System Design and Manufacturing (ESDM), ವಿದ್ಯುತ್ ಚಾಲಿತ ವಾಹನಗಳಿಗೆ ಲಿಥಿಯಂ ಅಯಾನ್ ಬ್ಯಾಟರಿ ತಯಾರಿಕೆ, ತಯಾರಿಕಾ ವಲಯ, ಆಟೊಮೊಬೈಲ್, ಡೇಟಾ ಸೆಂಟರ್ ಮತ್ತಿತರ ವಲಯಗಳಲ್ಲಿ ಈ ಹೂಡಿಕೆಗಳನ್ನು ಮಾಡಲಾಗುತ್ತಿದೆ.

ಬೆಂಗಳೂರು ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ Knowledge Health Care, Innovation and Research City (KHIR) ಅಭಿವೃದ್ಧಿಪಡಿಸಲು ಯೋಜಿಸಲಾಗಿದ್ದು, ಈ ಯೋಜನೆಯಿಂದ ಅಂದಾಜು 40,000 ಕೋಟಿ ರೂ.ಗಳ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 80,000 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆಯಿದೆ.

ಕೈಗಾರಿಕಾ ಅಭಿವೃದ್ಧಿಯಲ್ಲಿ ಕರ್ನಾಟಕದ ಉನ್ನತ ಸ್ಥಾನವನ್ನು ಉಳಿಸಿಕೊಳ್ಳಲು ಹಾಗೂ ಇನ್ನೂ ಹೆಚ್ಚು ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಹೊಸ ಕೈಗಾರಿಕಾ ನೀತಿಯನ್ನು ಜಾರಿಗೆ ತರಲಾಗುವುದು.

ರಾಜ್ಯಕ್ಕೆ ವಿದೇಶಿ ಹೂಡಿಕೆಗಳನ್ನು ಆಕರ್ಷಿಸಲು ಫೆಬ್ರವರಿ 2025ರಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು (Global Investor’s Meet) ಆಯೋಜಿಸಲಾಗುವುದು. 

ಗ್ರಾಮೀಣ ಜನರಲ್ಲಿ ಆರ್ಥಿಕ ಶಿಸ್ತು ಮತ್ತು ಉಳಿತಾಯ ಮನೋಭಾವವನ್ನು ಉತ್ತೇಜಿಸಲು ಎಂ.ಎಸ್.ಐ.ಎಲ್. ವತಿಯಿಂದ ಚಿಟ್‌ಫಂಡ್‌ ಅನ್ನು ಗ್ರಾಮಾಂತರ ಪ್ರದೇಶಗಳಿಗೆ ವಿಸ್ತರಿಸಲಾಗುವುದು.

ಯಶವಂತಪುರದಲ್ಲಿ ಕೆ.ಎಸ್‌.ಡಿ.ಎಲ್ ವತಿಯಿಂದ ಜಮೀನಿನಲ್ಲಿ ವಿವಿಧ ಸರ್ಕಾರಿ ಇಲಾಖೆಗಳನ್ನು ನಿರ್ವಹಿಸಲು ಸುಸಜ್ಜಿತ ಕಛೇರಿ ಸಂಕೀರ್ಣವನ್ನು ನಿರ್ಮಿಸಲಾಗುವುದು. 

ವಿವಿಧ ಜಿಲ್ಲೆಗಳಲ್ಲಿ ಅಸ್ತಿತ್ವದಲ್ಲಿರುವ ಕೈಗಾರಿಕಾ ವಸಾಹತುಗಳನ್ನು ಕೇಂದ್ರ ಸರ್ಕಾರದ ಸಹಯೋಗದಲ್ಲಿ 39 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕರ್ನಾಟಕ ಸಣ್ಣ ಪ್ರಮಾಣದ ಕೈಗಾರಿಕೆಗಳ ನಿಗಮದ (KSSIDC) ಮೂಲಕ ಮೇಲ್ದರ್ಜೆಗೇರಿಸಲಾಗುವುದು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಜಂಟಿ ಸಹಭಾಗಿತ್ವದಲ್ಲಿ ಬೆಂಗಳೂರು-ಮುಂಬಯಿ ಎಕನಾಮಿಕ್‌ ಕಾರಿಡಾರ್‌ ಯೋಜನೆಯಡಿ ಧಾರವಾಡ ಸಮೀಪ ಸುಮಾರು 6,000 ಎಕರೆ ಜಮೀನಿನಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಒತ್ತು ನೀಡುವ ಸಂಬಂಧ ಕೈಗಾರಿಕಾ ನೋಡ್ ಅನ್ನು ಅಭಿವೃದ್ಧಿಪಡಿಸುವ ಮೂಲಕ ಉತ್ತರ ಕರ್ನಾಟಕದ ನಿರುದ್ಯೋಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಹಾಗೂ ಆರ್ಥಿಕ ಬೆಳವಣಿಗೆಗಳಿಗೆ ಉತ್ತೇಜನ ನೀಡಲು ತೀರ್ಮಾನಿಸಿದೆ. 

ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಸ್ಟಾಕ್ ಎಕ್ಸ್ಚೇಂಜ್ಗಳಲ್ಲಿ  ಐಪಿಓ ಬಿಡುಗಡೆ ಮಾಡಲು ತಗಲುವ ವೆಚ್ಚದಲ್ಲಿ ಗರಿಷ್ಠ ಮಿತಿ 25 ಲಕ್ಷ ರೂ. ಗಳಿಗೆ ಒಳಪಟ್ಟು ಶೇ.50 ರಷ್ಟು ಸಹಾಯಧನ ನೀಡಲಾಗುವುದು.

ಸರ್ಕಾರಿ ಇಲಾಖೆಗಳು, ಸಾರ್ವಜನಿಕ ಉದ್ದಿಮೆಗಳು ಮತ್ತು ಎಂ.ಎಸ್.ಎಂ.ಇ.ಗಳನ್ನು TReDS ವೇದಿಕೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಎಂ.ಎಸ್.ಎಂ.ಇ. ಗಳಿಗೆ ಬರಬೇಕಾದ ಪಾವತಿಗಳು ಕಾಲಮಿತಿಯೊಳಗೆ ಸ್ವೀಕೃತಿಯಾಗಿ ಅವುಗಳ ನಗದು ಹರಿವು ಸಧೃಡಗೊಳಿಸಬೇಕು ಎಂಬ ಉದ್ದೇಶದಿಂದ TReDS ಸೇವಾ ಪೂರೈಕೆದಾರರೊಂದಿಗೆ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗುವುದು.

ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿಶೇಷ ಘಟಕ ಯೋಜನೆಯಡಿ ಕರ್ನಾಟಕ ಚರ್ಮ ಮತ್ತು ಫ್ಯಾಷನ್ ತಂತ್ರಜ್ಞಾನ ಸಂಸ್ಥೆಯಲ್ಲಿ (ಕೆಐಎಲ್‌ಟಿ) ಡಿಪ್ಲೊಮಾ ಇನ್ ಲೆದರ್ ಅಂಡ್ ಫ್ಯಾಶನ್ ಟೆಕ್ನಾಲಜಿ ಕೋರ್ಸ್ ಮಾಡಲು ಪ್ರೋತ್ಸಾಹಧನ ನೀಡಲಾಗುವುದು.

ರಾಜ್ಯದಲ್ಲಿನ ಕಟ್ಟಡಕಲ್ಲು ಸೇರಿದಂತೆ ಎಲ್ಲಾ ಉಪ ಖನಿಜಗಳ ಅನಧಿಕೃತ ಗಣಿಗಾರಿಕೆಯನ್ನು ನಿಯಂತ್ರಿಸುವ ಜೊತೆಗೆ ಸಂಪೂರ್ಣ ಖನಿಜ ಬಳಕೆ ಪ್ರಮಾಣವನ್ನು ಡ್ರೋನ್ ಸರ್ವೆ ಮೂಲಕ ವೈಜ್ಞಾನಿಕವಾಗಿ ಅಂದಾಜಿಸುವ ವ್ಯವಸ್ಥೆಯನ್ನು ರಾಜ್ಯಾದ್ಯಂತ ಅನುಷ್ಠಾನಗೊಳಿಸಿ, ರಾಜಸ್ವ ಸಂಗ್ರಹಣೆಯನ್ನು ಹೆಚ್ಚಿಸಲಾಗುವುದು. ಇದರಿಂದ ಉದ್ಯಮ ಸ್ನೇಹಿ, ಸರಳ ಮತ್ತು ಉತ್ತರದಾಯಿತ್ವ ಹೊಂದಿರುವ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. 

ಸಾರ್ವಜನಿಕ ಹಾಗೂ ಸರ್ಕಾರಿ ಕಾಮಗಾರಿಗಳಿಗೆ ನಿಗದಿತ ಬೆಲೆಯಲ್ಲಿ ಮರಳು ಲಭ್ಯಪಡಿಸಲು ಹೊಸ ಮರಳು ನೀತಿ 2020 ಅನ್ನು ಅನುಮೋದಿಸಲಾಗಿದೆ. ಸರ್ಕಾರದ ಎಲ್ಲಾ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ ಈ ನೀತಿಯನ್ನು ಜಾರಿಗೊಳಿಸುವಲ್ಲಿನ ಗೊಂದಲಗಳನ್ನು ನಿವಾರಿಸಿ ಸಾರ್ವಜನಿಕರಿಗೆ ಸುಲಭವಾಗಿ ಹಾಗೂ ಯೋಗ್ಯ ದರದಲ್ಲಿ ಮರಳನ್ನು ಒದಗಿಸಲಾಗುವುದು.  

ಮಂಡ್ಯದ ಮೈಶುಗರ್‌ ಕಾರ್ಖಾನೆಯ ಆವರಣದಲ್ಲಿ ಹೊಸ ಸಕ್ಕರೆ ಕಾರ್ಖಾನೆಯನ್ನು ರ್ಮಿಸಲಾಗುವುದು. ಸರ್ಕಾರದ ಅನುದಾನ, ಇತರೆ ಮೂಲಗಳು ಹಾಗೂ ಕಾರ್ಖಾನೆಯ Asset Monetisation ಮೂಲಕ ಸಂಪನ್ಮೂಲವನ್ನು ಕ್ರೋಢೀಕರಿಸಲಾಗುವುದು.  

ರಾಜ್ಯದಲ್ಲಿ ಜವಳಿ ಹಾಗೂ ನೇಕಾರಿಕೆ ಅಭಿವೃದ್ಧಿ, ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಜಿಸಲು 2024-29ರ ಅವಧಿಗೆ 10,000 ಕೋಟಿ ರೂ.ಗಳ ಬಂಡವಾಳ ಹೂಡಿಕೆ ಹಾಗೂ 2 ಲಕ್ಷ ಉದ್ಯೋಗಗಳ ಸೃಜನೆಯ ಗುರಿಯೊಂದಿಗೆ ಹೊಸ ಜವಳಿ ನೀತಿಯನ್ನು ಜಾರಿಗೊಳಿಸಲಾಗುವುದು.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಕಲಬುರಗಿ ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಪಿ.ಪಿ.ಪಿ. ಮಾದರಿಯಲ್ಲಿ ಮೆಗಾ ಟೆಕ್ಸ್ಟೈಲ್ ಪಾರ್ಕ್ನ್ನು ಸ್ಥಾಪಿಸಲಾಗುತ್ತಿದೆ. ಇದರಿಂದ 1 ಲಕ್ಷ ಜನರಿಗೆ ನೇರ ಉದ್ಯೋಗ ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಸೃಜನೆಯಾಗುವ ನಿರೀಕ್ಷೆಯಿದೆ. ಈ ಯೋಜನೆಗೆ ಪೂರಕವಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು.

ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ (ರಾಯಚೂರು) ಮತ್ತು ಮೈಸೂರು ವಿಭಾಗಗಳಲ್ಲಿ ನೂತನ ಜವಳಿ ಪಾರ್ಕ್ಗಳನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾಗುವುದು. ಇದರಿಂದ ಸುಮಾರು 10,000 ಉದ್ಯೋಗ ಸೃಷ್ಟಿಯಾಗಲಿದೆ.

ಬಳ್ಳಾರಿಯಲ್ಲಿ ಅಸಂಘಟಿತವಾಗಿರುವ ಜೀನ್ಸ್ ಉದ್ದಿಮೆಗಳನ್ನು ಸಂಘಟಿಸಿ, ವಿಶ್ವದರ್ಜೆಗೆ ಉನ್ನತೀಕರಿಸಲು ಮೂಲ ಸೌಕರ್ಯಗಳನ್ನು ಒಳಗೊಂಡಂತೆ ಜೀನ್ಸ್ ಅಪಾರೆಲ್ ಪಾರ್ಕ್ ಹಾಗೂ ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಅಭಿವೃದ್ಧಿಪಡಿಸಲಾಗುವುದು.  

ಜವಳಿ ಪಾರ್ಕ್ಗಳು ಇಲ್ಲದಿರುವ ರಾಜ್ಯದ 25 ಜಿಲ್ಲೆಗಳಲ್ಲಿ ಮಿನಿ ಜವಳಿ ಪಾರ್ಕ್ಗಳನ್ನು ಸ್ಥಾಪಿಸುವ ಉದ್ದಿಮೆದಾರರಿಗೆ ಮೂಲಸೌಕರ್ಯಕ್ಕಾಗಿ ಜವಳಿ ನೀತಿಯನ್ವಯ ಸಹಾಯಧನವನ್ನು ನೀಡಲಾಗುವುದು. 

ಮಹಾತ್ಮಾ ಗಾಂಧೀಜಿಯವರು ಭೇಟಿ ನೀಡಿದ್ದ ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಖಾದಿ ಚಟುವಟಿಕೆ ಪ್ರೋತ್ಸಾಹಕ್ಕಾಗಿ ಕ್ರಮವಹಿಸಲಾಗುವುದು ಎಂದಿದ್ದಾರೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವೇಳೆ ಸುಪ್ರೀಂ ಕೋರ್ಟ್ ಆದೇಶವನ್ನೂ ಪಾಲಿಸಿದಂತಿಲ್ಲ: ಬಿ.ವೈ. ವಿಜಯೇಂದ್ರ

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra)

[ccc_my_favorite_select_button post_id="112894"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ರೈಲ್ವೇ ಸ್ಟೇಷನ್ ಬಳಿ ನಡೆದಿದ್ದು ಕೊಲೆ..! ಪ್ರಕರಣ ದಾಖಲು

ಮಂಗಳವಾರ ಬೆಳಗ್ಗೆ ವ್ಯಕ್ತಿಯೋರ್ವನ ಮೃತ ದೇಹ ನಗರದ ಹೊರವಲಯದಲ್ಲಿರುವ ರೈಲ್ವೇ ನಿಲ್ದಾಣದ ಬಳಿ ಪತ್ತೆಯಾಗಿದ್ದು, ಹತ್ಯೆ (Murder) ನಡೆದಿರುವ ಕುರಿತು ಸಿಸಿ ಟಿವಿಯಲ್ಲಿ ದೃಶ್ಯ ಸೆರೆ

[ccc_my_favorite_select_button post_id="112854"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!