ಬೆಂಗಳೂರು, (ಜೂ.01); ಅಕ್ರಮ ಗಣಿಗಾರಿಕೆ ಹಾಗೂ ಸ್ಪೋಟಕ ವಸ್ತುಗಳನ್ನು ದಾಸ್ತಾನು ಮಾಡಿದ ಪ್ರಕರಣದಲ್ಲಿ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದ ಕಾರಣಕ್ಕೆ ಪೊಲೀಸ್ ಠಾಣೆ ಮುಂದೆ ಪ್ರತಿಭಟಿಸಿದ್ದಲ್ಲದೆ, ಅವಾಚ್ಯ ಶಬ್ದಗಳಿಂದ ಪೊಲೀಸರನ್ನು ನಿಂದಿಸಿದ್ದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಹೈಕೋರ್ಟ್ ಚಾಟಿ ಬೀಸಿದೆ.
ಆರೋಪಿಯನ್ನು ಬಂಧಿಸಿದರೆ ಶಾಸಕರಾದವರು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಎಷ್ಟು ಸರಿ? ಠಾಣೆಗೆ ತೆರಳಿ ಪೊಲೀಸ ರನ್ನು ಏಕೆ ಪ್ರಶ್ನಿಸಬೇಕು? ಭಯೋತ್ಪಾದಕರನ್ನು ಬಂಧಿಸಿ ಠಾಣೆಗೆ ಕರೆತಂದಾಗ, ಬಂಧಿತ ಅಮಾಯಕನಾಗಿದ್ದಾನೆ ಎಂದು ಆತನ ಪತ್ನಿ ಹೇಳಿದರೆ ಆಗ ಶಾಸಕರು ಏನು ಮಾಡುತ್ತಾರೆ? ಆಗಲೂ ಪೊಲೀಸರನ್ನು ಪ್ರಶ್ನೆ ಮಾಡುತ್ತಾರೆಯೇ? ಶಾಸಕರು ಹೀಗೆ ನಡೆದುಕೊಂಡರೆ ಪೊಲೀಸರು ತಮ್ಮ ಕರ್ತವ್ಯ ನಿರ್ವಹಿಸಲು ಹೇಗೆ ಸಾಧ್ಯವಾಗುತ್ತದೆ? ಪೊಲೀಸರು ತಮ್ಮ ಕೆಲಸಮಾಡಬಾರದೇ? ಎಂದುನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ಪೀಠ ಕಟುವಾಗಿ ಪ್ರಶ್ನಿಸಿತು.
ಅಲ್ಲದೆ, ಶಾಸಕರು ಇರುವುದು ಶಾಸನವನ್ನು ರೂಪಿಸಲು. ಶಾಸನ ರಚನೆ ಮಾಡುವುದರಲ್ಲಿ ತಮ್ಮ ಕೊಡುಗೆ ನೀಡಬೇಕು. ಅದು ಬಿಟ್ಟು ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಸೂಕ್ತವಲ್ಲ. ಮುಂದೊಂದು ದಿನ ನ್ಯಾಯಾಧೀಶರು ಹೇಗೆ ಕೆಲಸ ಮಾಡುತ್ತಿದ್ದಾರೆ ಎಂದು ನೋಡಲು ಬಯಸಿ ಶಾಸಕರು ಕೋರ್ಟ್ಗೆ ಬಂದು ಕುಳಿತರೆ ನಾವೇನು ಮಾಡುವುದು? ಈ ರೀತಿಯ ವರ್ತನೆ ಸಹಿಸಲಾಗದು. ಇಂತಹ ಬೆಳವಣಿಗೆಗೆ ಅಂತ್ಯಹಾಡಬೇಕಿದೆ ಎಂದರು.
ಪೊಲೀಸರನ್ನು ಅವಾಚ್ಯ ಶಬ್ದಗಳಲ್ಲಿ ನಿಂದಿಸಿದಹಾಗೂ ಪ್ರತಿಭಟನೆ ಮೂಲಕ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಎರಡು ಪ್ರತ್ಯೇಕ ಎಫ್ಐಆರ್ ಗಳನ್ನು ರದ್ದುಪಡಿಸುವಂತೆ ಕೋರಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಪೀಠ, ಶಾಸಕರ ನಡೆಗೆ ಈ ರೀತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿತು.
ಅಂತಿಮವಾಗಿ ಬೆಳ್ತಂಗಡಿ ಠಾಣಾ ಪೊಲೀಸರಿಗೆ ನೋಟಿಸ್ ಜಾರಿ ಗೊಳಿಸಿ ವಿಚಾರಣೆ ಮುಂದೂಡಿದ ನ್ಯಾಯಪೀಠ, ಮುಂದಿನ ವಿಚಾರಣೆಯವರೆಗೆ ಪೊಲೀಸರು ಶಾಸಕರ ವಿರುದ್ಧ ಯಾವುದೇ ಕ್ರಮ ಜರುಗಿಸದೆ ಸಮಾಧಾನದಿಂದ ಇರಬೇಕೆಂದು ಸೂಚಿಸಿತು ಎಂದು ವರದಿಯಾಗಿದೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….