ದೊಡ್ಡಬಳ್ಳಾಪುರ, (ಜುಲೈ.30); ತಾಲೂಕಿನ ಹಿರಿಯ ರಾಜಕಾರಣಿ ಸಿಡಿ ಸತ್ಯನಾರಾಯಣ ಗೌಡ (86 ವರ್ಷ) ಅವರು ಅನಾರೋಗ್ಯದ ಕಾರಣ ನಿಧನರಾಗಿದ್ದಾರೆ.
ಜ್ವರದ ಕಾರಣ ಬೆಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಿಡಿ ಸತ್ಯನಾರಾಯಣ ಗೌಡ ಅವರು, ಲೋ ಬಿಪಿಯಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.
ಮೃತರಿಗೆ ಪತ್ನಿ, ಹೈಕೋರ್ಟ್ನಲ್ಲಿ ಹಿರಿಯ ವಕೀಲರಾಗಿರುವ ಸಿ.ಎಸ್.ಗಿರೀಶ್ ಕುಮಾರ್ ಸೇರಿದಂತೆ ಮೂರು ಜನ ಪುತ್ರರು ಇದ್ದಾರೆ.
ಮೃತರ ಅಂತ್ಯಕ್ರಿಯೆ ಚನ್ನಾದೇವಿಅಗ್ರಹಾರ ಗ್ರಾಮದಲ್ಲಿ ಮಂಗಳವಾರ ನಡೆಯಿತು. ಇದಕ್ಕೂ ಮುನ್ನ ಸತ್ಯನಾರಾಯಣ ಗೌಡ ಅವರಗೆ ಅಂತಿಮ ನಮನ ಸಲ್ಲಿಸಲು ಸ್ವಗೃಹದ ಬಳಿ ಅವಕಾಶ ಕಲ್ಪಿಸಲಾಗಿತ್ತು.
ಮಾಜಿ ಸಿಎಂ ಡಾ.ಎಂ.ವೀರಪ್ಪಮೊಯ್ಲಿ, ವಿಧಾನಪರಿಷತ್ ಸದಸ್ಯ ರವಿ, ಮಾಜಿ ಸದಸ್ಯರಾದ ಅ.ದೇವೇಗೌಡ, ಇ.ಕೃಷ್ಣಪ್ಪ, ಕೆಪಿಸಿಸಿ ಉಪಾಧ್ಯಕ್ಷ ಟಿ.ವೆಂಕಟರಮಣಯ್ಯ, ಸದಸ್ಯ ಜಿ.ಲಕ್ಷ್ಮೀಪತಿ, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆಪಿ ಜಗನಾಥ್, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಬೈರೇಗೌಡ, ಕಸಬಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ದೊಡ್ಡಬಳ್ಳಾಪುರ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಚುಂಚೇಗೌಡ, ನಿರ್ದೇಶಕರಾದ ಅಂಜನಮೂರ್ತಿ, ರಾಮಣ್ಣ, ತಾಪಂ ಮಾಜಿ ಅಧ್ಯಕ್ಷ ಡಿ.ಸಿ.ಶಶಿಧರ್ ಸೇರಿದಂತೆ ಅನೇಕ ಮುಖಂಡರು ಅಂತಿಮ ನಮನ ಸಲ್ಲಿಸಿದರು.
ಡಿಕೆಶಿ ಸಂತಾಪ; ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾಗಿದ್ದ ಸಿಡಿ ಸತ್ಯನಾರಾಯಣ ಗೌಡ ಅವರ ಅಗಲಿಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
ದೆಹಲಿ ಪ್ರವಾಸದಲ್ಲಿರುವ ಅವರು, ಸತ್ಯನಾರಾಯಣ ಗೌಡ ಅವರ ಪುತ್ರ, ವಕೀಲರಾದ ಗಿರೀಶ್ ಕುಮಾರ್ ಅವರಿಗೆ ಕರೆ ಮಾಡಿ ಸಂತಾಪವನ್ನು ಸೂಚಿಸಿದ್ದು, ದೇಹಲಿಯಿಂದ ಹಿಂತಿರುಗಿದ ನಂತರ ಸ್ವಗೃಹಕ್ಕೆ ಭೇಟಿ ನೀಡುವುದಾಗಿ ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.
ಅಂತೆಯೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಕೂಡ ಸಂತಾಪ ಸೂಚಿಸಿದ್ದಾರೆ.
ಮಧುರೆ ಹೋಬಳಿಯ ಚನ್ನಾದೇವಿ ಅಗ್ರಹಾರ ಗ್ರಾಮದ ಸಿ.ಡಿ.ಸತ್ಯನಾರಾಯಣಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಮಾಜಿ ಪ್ರಧಾನ ಮಂತ್ರಿ ದಿವಂಗತ ಇಂದಿರಾಗಾಂಧಿ ಅವರು ದೊಡ್ಡಬಳ್ಳಾಪುರಕ್ಕೆ ಬಂದಾಗಲು ಅವರೊಂದಿಗೆ ಹೆಚ್ಚು ಪರಿಚಯ ಇದ್ದವರಾಗಿದ್ದರು. ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ,ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯರೊಂದಿಗೆ ನಿಕಟ ಸ್ನೇಹ ಹೊಂದಿದ್ದರು.
1996ರಲ್ಲಿ ದೊಡ್ಡಬಳ್ಳಾಪುರ ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಕನಸವಾಡಿಯಲ್ಲಿನ ಶ್ರೀಶನಿಮಹಾತ್ಮ ದೇವಾಲಯ ಸಮಿತಿಯ ಕಾರ್ಯದರ್ಶಿಯಾಗಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿದ್ದರು.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

