
ಬೆಂಗಳೂರು, (ಆಗಸ್ಟ್.03): ಮೂಡ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಆಯೋಜಿಸಿರುವ ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಅನುಮತಿ ಕೊಡಲು ರಾಜ್ಯ ಸರಕಾರ ನಿರ್ಧರಿಸಿದ ಬೆನ್ನಲ್ಲೇ, ರೂಟ್ ಮ್ಯಾಪ್ ಸಿದ್ದಪಡಿಸಿರುವ ಬಿಜೆಪಿ-ಜೆಡಿಎಸ್ ನಾಯಕರು ಹೆಜ್ಜೆ ಹಾಕಲು ಸಿದ್ಧರಾಗಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ನಾಡದೇವತೆ ಚಾಮುಂಡೇಶ್ವರಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ವಿಶೇಷ ಪೂಜೆ ಸಲ್ಲಿಸಿದರು.

ಈ ಕುರಿತು ಟ್ವಿಟ್ ಮಾಡಿರುವ ಅವರ, ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ, ನಾಡ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ದರ್ಶನಾಶೀರ್ವಾದ ಪಡೆಯಲಾಯಿತು.
ನಿವೇಶನ ವಂಚಿತ ಸೂರು ರಹಿತರಿಗಾಗಿ, ಪರಿಶಿಷ್ಟ ಪಂಗಡದ ಕಲ್ಯಾಣಕ್ಕೆ ಮೀಸಲಾದ ಹಣದ ರಕ್ಷಣೆಗಾಗಿ, ಭ್ರಷ್ಟ ಅಧಿಕಾರಸ್ಥರಿಗೆ ಶಿಕ್ಷೆ ಕೊಡಿಸುವುದಕ್ಕಾಗಿ, ಜನವಿರೋಧಿ ಕಾಂಗ್ರೆಸ್ ಸರ್ಕಾರ ವಿರದ್ಧದ ಹೋರಾಟ ತಾರ್ಕಿಕ ಅಂತ್ಯ ಕಾಣುವವರೆಗೂ ನಮ್ಮ ಹೋರಾಟಕ್ಕೆ ತಾಯಿ ಶ್ರೀ ಚಾಮುಂಡೇಶ್ವರಿಯ ಅನುಗ್ರಹಕ್ಕಾಗಿ ನಿವೇದಿಸಿಕೊಳ್ಳಲಾಯಿತ್ತಲ್ಲದೇ ಪ್ರಾಕೃತಿಕ ವಿಕೋಪದಿಂದ ಬೆಟ್ಟ, ಗುಡ್ಡಗಳು ಕುಸಿದು ಜಲಕಂಟಕಕ್ಕೆ ಸಿಲುಕಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಜನರ ಒಳತಿಗಾಗಿ ದೇವಿಯಲ್ಲಿ ಪ್ರಾರ್ಥಿಸಲಾಯಿತು.
ಪಾದಯಾತ್ರೆಯ ಪ್ರಾರಂಭದ ದಿನವಾದ ಇಂದಿನಿಂದ ಕೊನೆಯ ದಿನದವರೆಗೂ ಬಿಜೆಪಿ ಹಾಗೂ ಜೆಡಿಎಸ್ ನ ಪ್ರಮುಖರು ಹಾಗೂ ಕಾರ್ಯಕರ್ತರು ಜೊತೆಗೂಡಿ ವಿಶ್ವಾಸಪೂರ್ಣ ಹೆಜ್ಜೆಯನ್ನಿಟ್ಟು ಪ್ರತಿಭಟನೆಯನ್ನು ಪರಿಣಾಮಕಾರಿಯಾಗಿ ಹಂತ ತಲುಪಿಸುವ ಸಂಕಲ್ಪ ಮಾಡೋಣ ಎಂದರು.
ಇನ್ನು ‘ಭ್ರಷ್ಟ ಕಾಂಗ್ರೆಸ್ ತೊಲಗಿಸಿ’ ಎಂಬ ಘೋಷಣೆಯಡಿ ಹಮ್ಮಿಕೊಂಡಿರುವ ಏಳು ದಿನಗಳ ಮೈಸೂರು ಚಲೋ ಪಾದಯಾತ್ರೆಗೆ ಶನಿವಾರ ಬೆಳಗ್ಗೆ 9.30ಕ್ಕೆ ಕೆಂಗೇರಿಯ ಕೆಂಪಮ್ಮ ದೇವಸ್ಥಾನದ ಬಳಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ. ಈ ಪಾದಾಯಾತ್ರೆ ಒಟ್ಟು 124 ಕಿ.ಮೀ ಪಾದಯಾತ್ರೆ ಸಾಗಲಿದೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ವಿರುದ್ಧದ ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಬಿಜೆಪಿ ಮತ್ತು ಜೆಡಿಎಸ್ ಜಂಟಿಯಾಗಿ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ರಾಜ್ಯದಲ್ಲಿ ಭ್ರಷ್ಟ ಹಾಗೂ ಹಗರಣಗಳ ಸರಕಾರವಿದ್ದು, ಬಡವರ ವಿರೋಧಿ, ಪರಿಶಿಷ್ಟ ಸಮುದಾಯಗಳ ವಿರೋ ಧಿ ಸರಕಾರದಿಂದ ಅಭಿವೃದ್ಧಿ ಶೂನ್ಯ ಕೊಡುಗೆ ನೀಡಿದ್ದು, ಇದೊಂದು ಆಸಮರ್ಥ ಸರಕಾರ ಎಂದು ಟೀಕಿಸಿದರು.
ಎಲ್ಲ ಸಮುದಾಯಗಳಿಗೆ ಮೋಸ ಮಾಡಿ. ಪರಿಶಿಷ್ಟರ ಹಣ ಲೂಟಿ ಮಾಡಿದ್ದಲ್ಲದೇ ಅಹಿಂದ ಹೆಸರಿನಲ್ಲಿ ಅಧಿಕಾರಕ್ಕೇರಿದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜತೆಗೂಡಿ ಸದನದ ಒಳಗೆ ಮತ್ತು ಹೊರಗೆ ಹೋರಾಟ ಮಾಡಿ, ಒಂಟಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದೇವೆ. ಹಗರಣ, ಭ್ರಷ್ಟಾಚಾರ ಸಂಬಂಧ ನಮ್ಮ ಪ್ರಶ್ನೆಗಳಿಗೆ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ಮೊದಲು ಉತ್ತರಿಸಲಿ ಎಂದು ತಿಳಿಸಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….
