ಬೆಂಗಳೂರು, (ಆಗಸ್ಟ್.15): ದೇಶದಾದ್ಯಂತ 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಗುರುವಾರ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರುಗಳು, ದೇಶದ ಜನತೆಗೆ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯವನ್ನು ಕೋರಿದ್ದಾರೆ.
ಪ್ರಧಾನಿ ಮೋದಿ: ನನ್ನ ಸಹ ಎಲ್ಲಾ ಭಾರತೀಯರಿಗೆ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು. ಜೈ ಹಿಂದ್ ಎಂದು ಹೇಳಿದ್ದಾರೆ.
ಸಿದ್ದರಾಮಯ್ಯ; ನಾಡಿನ ಜನತೆಗೆ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳು.
ಸ್ವಾತಂತ್ರ್ಯೋತ್ಸವ ಎನ್ನುವುದು ಕೇವಲ ಸಂಭ್ರಮಾಚರಣೆಯ ದಿನ ಆಗದೆ, ಪ್ರಜೆಗಳಾದ ನಮ್ಮೆಲ್ಲರ ಕರ್ತವ್ಯವನ್ನು ನೆನಪು ಮಾಡಿಕೊಳ್ಳುವ ದಿನವೂ ಆಗಬೇಕು.
ಪ್ರಜೆಗಳಾಗಿ ನಾವು ಪ್ರತಿಕ್ಷಣವೂ ಜಾಗೃತರಾಗಿದ್ದು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದಮನ ಮಾಡುವ ದುಷ್ಟಶಕ್ತಿಗಳ ಕುಟಿಲ ಪ್ರಯತ್ನವನ್ನು ವಿಫಲಗೊಳಿಸಿ ಅದನ್ನು ರಕ್ಷಿಸುವ ಜವಾಬ್ದಾರಿಯನ್ನು ನಿರ್ವಹಿಸಬೇಕಾಗುತ್ತದೆ.
ಸ್ವಾತಂತ್ರ್ಯದ ಈ ಸಂಭ್ರಮದ ಸಂದರ್ಭದಲ್ಲಿ ಪರಸ್ಪರ ಸಾಮರಸ್ಯ, ಸೌಹಾರ್ದವನ್ನು ಇನ್ನಷ್ಟು ಬಲಪಡಿಸುವ, ಆ ಮೂಲಕ ದಾರ್ಶನಿಕರು ತೋರಿಸಿಕೊಟ್ಟ ಹಾದಿಯಲ್ಲಿ ಮುನ್ನಡೆಯುವ ಸಂಕಲ್ಪ ಮಾಡಬೇಕಾಗಿದೆ.
ಸಾವಿರಾರು ಮಹನೀಯರ ಹೋರಾಟ, ತ್ಯಾಗ, ಪರಿಶ್ರಮಗಳ ಫಲವನ್ನು ನಾವು ಇಂದು ಉಣ್ಣುತ್ತಿದ್ದೇವೆ. ಇಂದು ನಮ್ಮ ಕೈಯಲ್ಲಿರುವ ಸ್ವಾತಂತ್ರ್ಯದ ದೀವಿಗೆಯನ್ನು ಮುಂದಿನ ತಲೆಮಾರಿಗೆ ಜತನದಿಂದ ತಲುಪಿಸುವ ಅತ್ಯಂತ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಹೊಣೆಗಾರಿಕೆಯನ್ನು ಅರಿತುಕೊಂಡು ನಾವು ಮುನ್ನಡೆಯಬೇಕಿದೆ.
ನಾಡಿನ ಸಮಸ್ತರಿಗೂ ಮತ್ತೊಮ್ಮೆ ಸ್ವಾತಂತ್ರ್ಯ ದಿನದ ಶುಭಾಶಯಗಳು ಎಂದಿದ್ದಾರೆ.
ಡಿಕೆ ಶಿವಕುಮಾರ್: ಸಮಸ್ತರಿಗೂ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಸ್ವಾತಂತ್ರ್ಯ ದಿನಾಚರಣೆಯ ಈ ಸುಸಂದರ್ಭದಲ್ಲಿ ದೇಶಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನಗಳನ್ನು ಸ್ಮರಿಸೋಣ. ಸಮೃದ್ಧ, ಸಶಕ್ತ ನವಭಾರತದ ನಿರ್ಮಾಣದ ನಿಟ್ಟಿನಲ್ಲಿ ಒಗ್ಗಟ್ಟಿನಿಂದ ಮುನ್ನಡೆಯೋಣ. ಜೈ ಹಿಂದ್! ಎಂದಿದ್ದಾರೆ.
ಹೆಚ್ಡಿ ಕುಮಾರಸ್ವಾಮಿ: ಭಾರತದ ಸಮಸ್ತ ಜನತೆಗೆ 78ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು ಹಾಗೂ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಸಂಖ್ಯಾತ ದಿವ್ಯಚೇತನಗಳ ಚರಣಗಳಿಗೆ ನನ್ನ ಪ್ರಣಾಮಗಳು.
ಗೌರವಾನ್ವಿತ ಪ್ರಧಾನಿಗಳಾದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸಶಕ್ತ, ಸದೃಢ, ಶ್ರೇಷ್ಠ ರಾಷ್ಟ್ರವಾಗಿ ಅವತರಿಸಿ ಜಗತ್ತಿನ 3ನೇ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುತ್ತಿರುವ ಭಾರತದ ಯಶೋಗಾಥೆಯನ್ನು ಸಂಭ್ರಮಿಸುತ್ತಾ, ಹೊಸ ಕನಸುಗಳೊಂದಿಗೆ ಮುನ್ನಡೆಯೋಣ. ಜೈ ಹಿಂದ್ ಎಂದಿದ್ದಾರೆ.
ಬಿವೈ ವಿಜಯೇಂದ್ರ: ‘ಸಹಸ್ರಾರು ದೇಶಭಕ್ತರ ತ್ಯಾಗ ಮತ್ತು ಬಲಿದಾನದ ಫಲವೇ ಸ್ವಾತಂತ್ರ್ಯ’. ಸ್ವಾಭಿಮಾನಿ, ಸ್ವಾವಲಂಬಿ, ಸಾಂಸ್ಕೃತಿಕ, ವಿಶ್ವಗುರು ಹಾಗೂ ವಿಕಸಿತ ಭಾರತವಾಗುತ್ತಿರುವ ಈ ಸಂದರ್ಭದಲ್ಲಿ ದೇಶದ ಐಕ್ಯತೆ ಹಾಗೂ ಏಳಿಗೆಗಾಗಿ ಶ್ರಮಿಸುವ ಸಂಕಲ್ಪ ಮಾಡೋಣ.
ನಾಡಿನ ಸಮಸ್ತ ಜನತೆಗೆ 78 ನೇ ಸ್ವಾತಂತ್ರ್ಯ ದಿನಾಚರಣೆಯ ಹಾರ್ದಿಕ ಶುಭಾಶಯಗಳು ಎಂದಿದ್ದಾರೆ.
ಬಸವರಾಜ ಬೊಮ್ಮಾಯಿ: ಸಮಸ್ತ ಭಾರತೀಯರಿಗೆ ದೇಶದ 78ನೇ ಸ್ವಾತಂತ್ರ್ಯ ದಿನಾಚರಣೆಯಹಾರ್ದಿಕ ಶುಭಾಶಯಗಳು.
ಸ್ವತಂತ್ರ ಭಾರತಕ್ಕಾಗಿ ಹೋರಾಡಿದ ಎಲ್ಲ ಸ್ವಾತಂತ್ರ್ಯ ಹೋರಾಟಗಾರರಿಗೆ ಶ್ರದ್ಧಾಪೂರ್ವಕ ನಮನಗಳು. ಸ್ವಾತಂತ್ರ್ಯದ ಸಂಭ್ರಮಾಚರಣೆಯ ಜೊತೆಗೆ ಸಂರಕ್ಷಣೆಯ ಕರ್ತವ್ಯವನ್ನೂ ನಾವು ನಿರ್ವಹಿಸೋಣ ಎಂದಿದ್ದಾರೆ.
ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….