ದೊಡ್ಡಬಳ್ಳಾಪುರ: ತಾಲ್ಲೂಕನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಪದೇ ಪದೇ ಕಡೆಗಣಿಸುತ್ತಿದ್ದಾರೆ ಎಂಬುದಕ್ಕೆ ಜಿಲ್ಲೆಯ ದಸರಾ ಸ್ತಬ್ದ ಸಾಕ್ಷಿಯಾಗಿದ್ದು ತಾಲೂಕಿನ ಜನರ ತಾಳ್ಮೆಯನ್ನು ಪದೇ ಪದೇ ಪರೀಕ್ಷೆ ಮಾಡಲಾಗುತ್ತಿದೆ ಎಂದು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ದಸರಾ ಜಂಬೂ ಸವಾರಿ ಮೆರವಣಿಗೆಯಲ್ಲಿ ಭಾಗವಹಿಸಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ತಬ್ದ ಚಿತ್ರದಲ್ಲಿ ದೊಡ್ಡಬಳ್ಳಾಪುರ ತಾಲ್ಲೂಕನ್ನು ಕಡೆಗಣಿಸಲಾಗಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ದೊಡ್ಡಬಳ್ಳಾಪುರಕ್ಕೆ ಜಿಲ್ಲಾಡಳಿತ ಭವನ ಸಮೀಪವಿದ್ದರೂ ಯಾವುದೇ ಜಿಲ್ಲಾಮಟ್ಟದ ಗಮನ ಸೆಳೆಯುವ ಕಾರ್ಯಕ್ರಮಗಳು ದೊಡ್ಡಬಳ್ಳಾಪುರದಲ್ಲಿ ನಡೆದಿಲ್ಲ.
ಮತ್ತೊಂದೆಡೆ ಸಾರ್ವಜನಿಕರು ಮೂಲಭೂತ ಸೌಲಭ್ಯಗಳಿಗೂ ಪರದಾಡುವಂತಾಗಿದೆ. ಹದಗೆಟ್ಟ ರಸ್ತೆಗಳು, ಬಿಬಿಎಂಪಿ ಕಸ, ದೊಡ್ಡಬಳ್ಳಾಪುರ ನಗರದಲ್ಲಿ ರಸ್ತೆ ವಿಸ್ತರಣೆಯಿಲ್ಲದೆ ಸದಾ ಟ್ರಾಫಿಕ್ ಕಿರಿಕಿರಿ, ವಿದ್ಯಾರ್ಥಿಗಳಿಗೆ ಸಕಾಲಕ್ಕೆ ಬಸ್ ಸೌಲಭ್ಯವಿಲ್ಲ ಇಂತಹ ಹಲವು ಸಮಸ್ಯೆಗಳನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಜನರು ಎದುರಿಸುತ್ತಿದ್ದಾರೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಸಮಸ್ಯೆಗಳನ್ನು ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಜಿಲ್ಲಾ ಅಧಿಕಾರಿಗಳು ಅರ್ಥ ಮಾಡಿಕೊಳ್ಳಬೇಕಾಗಿದೆ. ಜಿಲ್ಲೆಯ ನಾಲ್ಕು ತಾಲೂಕನ್ನು ಸಮಾನವಾಗಿ ಕಾಣುವ ಮನೋಭಾವ ರೂಢಿಸಿಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.