ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯದಲ್ಲಿ ಕನ್ನಡ ಚುನಾವಣೆಯ ವಿಷಯ ಆಗಬೇಕಾಗಿದೆ. ಒಕ್ಕೂಟ ಸರ್ಕಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಕನ್ನಡಿಗರು ಧ್ವನಿ ಎತ್ತಬೇಕಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮಾಜಿ ಕೋಶಾಧ್ಯಕ್ಷ ನಂ.ಮಹಾದೇವ್ ತಿಳಿಸಿದರು.
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಡಾ.ರಾಜ್ ಕುಮಾರ್ ಕಲಾ ಮಂದಿರದ ಆವರಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಒಕ್ಕೂಟ ವ್ಯವಸ್ಥೆಯ ಸರ್ಕಾರದಲ್ಲಿ ಹಿಂದಿ ಭಾಷೆಯ ರಾಜ್ಯಗಳಿಗೆ ಸಿಗುತ್ತಿರುವ ಮನ್ನಣೆ ದಕ್ಷಿಣ ಭಾರತದ ರಾಜ್ಯಗಳಿಗೆ ಸಿಗುತ್ತಿಲ್ಲ. ಕರ್ನಾಟಕ ರಾಜ್ಯಕ್ಕೆ ತೆರಿಗೆ ಪಾಲು ಸಮರ್ಪಕವಾಗಿ ಸಿಗುತ್ತಿಲ್ಲ.
ನಮ್ಮ ರಾಜ್ಯದಲ್ಲಿರುವ ಬ್ಯಾಂಕ್, ಅಂಚೆ, ರೈಲ್ವೆ ಮುಂತಾದ ಕಡೆಗಳಲ್ಲಿ ಕನ್ನಡ ಭಾಷೆಗೆ ಸೂಕ್ತ ಮನ್ನಣೆ ಇಲ್ಲದಾಗಿದೆ. ಒಕ್ಕೂಟ ವ್ಯವಸ್ಥೆ ಸರ್ಕಾರದಲ್ಲಿ ಕರ್ನಾಟಕದ ಜನಪ್ರತಿನಿಧಿಗಳು ಕನ್ನಡದ ಹಿತವನ್ನು ಕಾಪಾಡುವ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕಾಗಿದೆ ಎಂದರು.
ಕನ್ನಡಪರ ಹಿರಿಯ ಹೋರಾಟಗಾರ ತ.ನ.ಪ್ರಭುದೇವ್ ಮಾತನಾಡಿ, ಕನ್ನಡಿಗರ ಹೋರಾಟದ ಫಲವಾಗಿ ಕರ್ನಾಟಕ ಏಕೀಕರಣವಾಯಿತು. ಕರ್ನಾಟಕದಲ್ಲಿ ಕನ್ನಡ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಗೆ ಅಗ್ರ ಸ್ಥಾನ ಇರಲೇಬೇಕು.
ಪ್ರತಿಯೊಬ್ಬ ಕನ್ನಡಿಗರಲ್ಲೂ ಕನ್ನಡ ನಾಡು, ನುಡಿ ವಿಚಾರದಲ್ಲಿ ಅಭಿಮಾನ ಹೊಂದಿರಬೇಕೆಂದು ಕರ್ನಾಟಕದಲ್ಲಿ ಪ್ರತಿಯೊಬ್ಬ ಕನ್ನಡಿಗರೂ ಕನ್ನಡದ ರಾಯಭಾರಿಗಳಾಗಿ ಕನ್ನಡದ ಕೆಲಸ ಮಾಡಬೇಕಾಗಿದೆ. ಕನ್ನಡವನ್ನು ಬಳಸುವ ಮೂಲಕ ಕನ್ನಡ ಉಳಿಸಿ, ಬೆಳೆಸಲು ಮಾತ್ರ ಸಾಧ್ಯ ಎಂಬುದನ್ನು ಎಲ್ಲಾ ಕನ್ನಡಿಗರು ಅರಿಯಬೇಕಾಗಿದೆ.
ಕನ್ನಡ ನಾಡಿನ ಇತಿಹಾಸ, ಭಾಷೆ, ಸಾಹಿತ್ಯ, ಸಂಸ್ಕೃತಿ, ಕಲೆಯ ಬಗ್ಗೆ ಅರಿವು ಮೂಡಿಸುವುದು ಕನ್ನಡಿಗರ ಆದ್ಯ ಕರ್ತವ್ಯವಾಗಿದೆ ಎಂದರು.
ಸನ್ಮಾನ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಡಿ.ಶ್ರೀಕಾಂತ್, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರರಾದ ನಂ.ಮಹಾದೇವ ಮತ್ತು ಜಿ.ಸುರೇಶ್ ಅವರುಗಳಿಗೆ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನ ನಡೆಯಿತು.
ಕಾರ್ಯಕ್ರಮದಲ್ಲಿ ಸೂರ್ಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಆಯುಕ್ತ ವೆಂಕಟರಾಜು, ಭಾರತ ಸೇವಾದಳ ಕಾರ್ಯದರ್ಶಿ ಜ್ಯೋತಿಕುಮಾರ್, ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಗಂಗರಾಜುಶಿರವಾರ, ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು, ಮಾಜಿ ಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿ ಎ.ಜಯರಾಮ್, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಾಪ ಪದಾಧಿಕಾರಿಗಳಾದ ಆರ್.ಗೋವಿಂದರಾಜು, ಜಿ.ಎಂ.ನಾಗರಾಜ್, ಜಿ.ಸುರೇಶ್, ಮುನಿರಾಜು, ಸಫೀರ್, ನಾಗರತ್ನಮ್ಮ, ಚಿದಾನಂದ್, ಕನ್ನಡಪರ ಸಂಘಟನೆಗಳ ಮುಖಂಡರುಗಳಾದ ನಾಗರಾಜು, ಅಗ್ನಿವೆಂಕಟೇಶ್, ಕಾರ್ಮಿಕ ಮುಖಂಡ ಪಿ.ಎ.ವೆಂಕಟೇಶ್, ಕಲಾವಿದರುಗಳಾದ ಬಾಶೆಟ್ಟಿಹಳ್ಳಿ ಮಂಜುನಾಥ್, ತೀರ್ಥಲಿಂಗಪ್ಪ, ದರ್ಗಾಜೋಗಿಹಳ್ಳಿ ಮಲ್ಲೇಶ್, ದರ್ಶನ್ ಮತ್ತು ಕನ್ನಡಪರ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.