ಬೆಂಗಳೂರು: ಚನ್ನಪಟ್ಟಣ ಉಪಚುನಾವಣೆ ಒತ್ತಡದಲ್ಲಿರುವ ಹೆಚ್ಡಿ ಕುಮಾರಸ್ವಾಮಿ ಕುಟುಂಬಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.
ತಮ್ಮ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುವ ಮೂಲಕ ತೇಜೋವಧೆ ನಡೆಸಿದ್ದಾರೆಂದು ಆರೋಪಿಸಿ ಐಪಿಎಸ್ ಅಧಿಕಾರಿ ಚಂದ್ರಶೇಖರ್ ಅವರು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ವಿರುದ್ದ ದೂರು ದಾಖಲಿಸಿದ್ದಾರೆ.
ಸಚಿವರ ವಿರುದ್ಧ ದೂರು ದಾಖಲಿಸಲು ನ್ಯಾಯಾಲಯದಲ್ಲಿ ಅನುಮತಿ ಕೋರಿದ್ದರು. ನ್ಯಾಯಾಲಯ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಹೆಚ್ಡಿಕೆ ಹಾಗೂ ಪುತ್ರನ ವಿರುದ್ದ ಬೆಂಗಳೂರಿನ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗಂಗೇನಹಳ್ಳಿ ಡಿ ನೋಟಿಫಿಕೇಶನ್ ಹಗರಣದಲ್ಲಿ ಲೋಕಾಯುಕ್ತ ವಿಚಾರಣೆಗೆ ಎಚ್ಡಿಕೆ ಹಾಜರಾಗಿದ್ದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಆರೋಪಗಳ ಸುರಿಮಳೆ ಮಾಡಿದ್ದರು.
ಎಂ ಚಂದ್ರಶೇಖರ್ ಅವರು 20 ಕೋಟಿ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ದುರುಪಯೋಗಪಡಿಸಿಕೊಂಡು ಭಾರೀ ದೊಡ್ಡಮಟ್ಟದಲ್ಲಿ ಭ್ರಷ್ಟಾಚಾರ ನಡೆಸುತ್ತಿದ್ದಾರೆಂದು ಆರೋಪಿಸಿದ್ದಲ್ಲದೇ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ಎಚ್ಡಿಕೆ ಸರ್ಕಾರದ ಗೃಹಕಾರ್ಯದರ್ಶಿಗೆ ದೂರು ಸಲ್ಲಿಸಿದ್ದರು.
ರಾಜ್ಯಪಾಲರ ಅನುಮತಿಗಾಗಿ ಕಾಯುತ್ತಿರುವ ಕುಮಾರಸ್ವಾಮಿ ವಿಚಾರಣೆಯ ಮನವಿಯ ಮಾಹಿತಿ ಸೋರಿಕೆ ಬಗ್ಗೆ ಚಂದ್ರಶೇಖರ್ ಅಧಿಕಾರಿಗಳ ವಿರುದ್ಧ ತನಿಖೆ ನಡೆಸಲು ಕೋರಿದ್ದರು.
ಈ ಬಗ್ಗೆ ಕಿಡಿಕಾರಿದ್ದ ಹೆಚ್ಡಿಕೆ ಈ ಚಂದ್ರಶೇಖರ್ ಯಾರು, ಇವರೇನು ಸಿಎಂ ಆಗಿದ್ದಾರಾ ಅಥವಾ ಸಚಿವರಾಗಿದ್ದಾರಾ ಎಂದು ಹರಿಹಾಯ್ದಿದ್ದ ಕುಮಾರಸ್ವಾಮಿ ಇವರು ಯಾರು ನಿರ್ದೇಶನದಲ್ಲಿ ನಟಿಸುತ್ತಿದ್ದಾರೆ ಎಂದು ಟೀಕಿಸಿದ್ದರು.
ಜೊತೆಗೆ, ಎಡಿಜಿಪಿ ಚಂದ್ರಶೇಕರ್, ಕುಮಾರಸ್ವಾಮಿ ಒಬ್ಬರು ವಿಚಾರಾಧೀನ ಆರೋಪಿ ಎಂದು ಸಂಬೋಧಿಸಿದ್ದರು. ಜೊತೆಗೆ, ಜಾರ್ಜ್ ಬರ್ನಾಡ್ ಶಾ ಅವರ ಉಕ್ತಿಯೊಂದನ್ನು ಉಲ್ಲೇಖಿಸಿ ಹಂದಿಯೊಂದಿಗೆ ಜಗಳ ಮಾಡಬಾರದು. ಅದರಿಂದ ನೀವು ಕೊಳಕಾದರೆ ಹಂದಿಗೆ ಆನಂದವಾಗುತ್ತದೆ ಎಂದು ತಿರುಗೇಟು ನೀಡಿದ್ದರು.
ಎಫ್ಐಆರ್ ಬಗ್ಗೆ HD ಕುಮಾರಸ್ವಾಮಿ ಕಿಡಿ
ಐಪಿಎಸ್ ಅಧಿಕಾರಿಯೊಬ್ಬರ ದೂರಿನ ಮೇರೆಗೆ ನನ್ನ ವಿರುದ್ಧ ಪೊಲೀಸರು ದಾಖಲು ಮಾಡಿರುವ ಎಫ್ಐಆರ್ ಹಾಸ್ಯಾಸ್ಪದ, ದುರುದ್ದೇಶಪೂರಿತ ಎಂದು ಕೇಂದ್ರ ಸಚಿವರ ಹೆಚ್.ಡಿ.ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.
ಉಪ ಚುನಾವಣೆಯ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಪರವಾಗಿ ಅಕ್ಕೂರು ಹೊಸಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಉಪ ಚುನಾವಣೆ ಸಮಯದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರ ಭಾರೀ ಉಮೇದಿನಿಂದ ನಮ್ಮ ವಿರುದ್ಧ ದ್ವೇಷ ಸಾಧನೆ ಮಾಡುತ್ತಿದೆ. ಇದಕ್ಕೆ ನ್ಯಾಯಾಲಯದ ಮೂಲಕವೇ ಉತ್ತರ ಕೊಡುತ್ತೇನೆ ಎಂದರು.
ಎಫ್ ಐಆರ್ ಪ್ರತಿಯನ್ನು ಓದಿದೆ. ಅದರಲ್ಲಿರುವ ದೂರಿನ ಸಾರಾಂಶವನ್ನೂ ಓದಿದೆ. ಅದು ಸಂಪೂರ್ಣ ಹಾಸ್ಯಾಸ್ಪದ ಹಾಗೂ ದುರದ್ದೇಶಪೂರಿತ ಎನ್ನುವುದು ನನಗೆ ಅರ್ಥವಾಯಿತು. ಅಲ್ಲಿ ದೂರುದಾರರೇ ಹೇಳಿಕೊಂಡಿದ್ದಾರೆ, ಕುಮಾರಸ್ವಾಮಿ ಅವರು ಮಾಧ್ಯಮಗೋಷ್ಠಿ ಮಾಡಿ ನನ್ನ ವಿರುದ್ಧ ಆರೋಪ ಮಾಡಿದರು. ಅದಕ್ಕೆ ಕ್ರಮ ಕೈಗೊಳ್ಳಿ ಎಂದು ಕೇಳಿದ್ದಾರೆ.
ನಾನು ಅವರ ಬಗ್ಗೆ ತಪ್ಪು ಮಾಹಿತಿ ನೀಡಿದೇನೆ ಎಂದು ಹೇಳಿಕೊಂಡಿದ್ದಾರೆ? ಬೇಕಾದರೆ ನನ್ನ ಮಾಧ್ಯಮಗೋಷ್ಠಿಯ ವಿಡಿಯೋ ನೋಡಿಕೊಳ್ಳಲಿ ಎಂದು ಕೇಂದ್ರ ಸಚಿವರು ಹೇಳಿದರು.
ನಾನು ಪ್ರೆಸ್ ಮೀಟ್ ಮಾಡಿದೆ ಎಂದು ಎಫ್ಐಆರ್ ಮಾಡಿಸಿದ್ದಾರೆ. ಹೇಳಿಕೆ ನೀಡಿದರು ಎಂದು ಚನ್ನಪಟ್ಟಣದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಮೇಲೆಯೂ ಎಫ್ಐಆರ್ ಮಾಡಿಸಿದ್ದಾರೆ. ಮುಖ್ಯ ಕಾರ್ಯದರ್ಶಿಗೆ ದೂರು ಕೊಟ್ಟರು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರ ಮೇಲೆಯೂ ಎಫ್ಐಆರ್ ಮಾಡಿಸಿದ್ದಾರೆ. ಹಾಗಾದರೆ, ಯಾರೂ ಯಾರ ವಿರುದ್ಧವೂ ಮಾತನಾಡಬಾರದು, ದೂರು ನೀಡಬಾರದು ಎಂದು ಕಾನೂನಿನಲ್ಲಿ ಇದೆಯೇ? ನಮ್ಮ ಬಾಯಿ ಮುಚ್ಚಿಸಲು ಇವರಿಂದ ಸಾಧ್ಯವಿಲ್ಲ ಎಂದು ಕೇಂದ್ರ ಸಚಿವರು ಕಿಡಿ ಕಾರಿದರು.
ಇದೊಂದು ಷಡ್ಯಂತ್ರ ಹಾಗೂ ಕುತಂತ್ರದ ಭಾಗ. ಯಾವಾಗ ಚನ್ನಪಟ್ಟಣದಲ್ಲಿ ಇವರ ಮೋಸ ಕುತಂತ್ರ ನಡೆಯಲ್ಲ ಎಂದು ಗೊತ್ತಾಯಿತೋ ಹೊಸ ಕುತಂತ್ರಕ್ಕೆ ಮುಂದಾಗಿದ್ದಾರೆ. ನಮಗೆ ಬಾಬಾ ಸಾಹೇಬ ಅಂಬೇಡ್ಕರ್ ಅವರ ಸಂವಿಧಾನ ಕಾನೂನಿನ ಮೇಲೆ ಗೌರವ ಇದೆ. ನನ್ನ ಚನ್ನಪಟ್ಟಣದ ಜನರ ಮೇಲೆ ವಿಶ್ವಾಸ ಇದೆ. ಹೀಗಿರುವಾಗ ಇಂತಹ ನೂರು ಎಫ್ ಐಆರ್ ಗಳು ದಾಖಲಾದರೂ ನಾವು ಧೃತಿಗೆಡಲ್ಲ ಎಂದು ಹೇಳಿದರು ಸಚಿವರು.