ಬೆಂಗಳೂರು: ರಾಜ್ಯದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ನಿರೀಕ್ಷೆಯಂತೆಯೇ ಫಲಿತಾಂಶ ಬಂದಿದೆ. ಮೂರೂ ಕಡೆ ಗೆದ್ದು, ಕಾಂಗ್ರೆಸ್ ಸರಕಾರವನ್ನು ಬೀಳಿಸುವ ಭ್ರಮೆಯಲ್ಲಿ ತೇಲಾಡುತ್ತಿದ್ದ ಬಿಜೆಪಿಗೆ (BJP) ಪ್ರಬುದ್ಧ ಮತದಾರರು ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ ಹೇಳಿದ್ದಾರೆ.
ಉಪಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕ ಮಾತನಾಡಿದ ಅವರು, ‘ಮಾಜಿ ಪ್ರಧಾನಿ ದೇವೇಗೌಡರು ಕೂಡ ಸಿದ್ದರಾಮಯ್ಯನವರ ಸರಕಾರವನ್ನು ಬೀಳಿಸುವ ಮಾತುಗಳನ್ನಾಡಿದ್ದರು. ಆದರೆ ಚನ್ನಪಟ್ಟಣದ ಜನ ಅವರ ಮೊಮ್ಮಗನ ವಿರುದ್ಧ ಜನಾದೇಶ ನೀಡಿದ್ದಾರೆ ಎಂದಿದ್ದಾರೆ.
ರಾಜ್ಯದ ಕಾಂಗ್ರೆಸ್ ಸರಕಾರವನ್ನು ಯಾರೂ ಕಿತ್ತೊಗೆಯಲಾರರು. ಆ ಶಕ್ತಿ ಇರುವುದು ಜನರಿಗೆ ಮಾತ್ರ. ಈ ಫಲಿತಾಂಶ ಅದನ್ನು ಎತ್ತಿ ತೋರಿಸಿ, ಸ್ಪಷ್ಟ ಸಂದೇಶ ನೀಡಿದೆ ಎಂದು ಅವರು ವಿಶ್ಲೇಷಿಸಿದ್ದಾರೆ.
ಶಿಗ್ಗಾಂವಿಯಲ್ಲಿ ಕೂಡ ಬಿಜೆಪಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಪುತ್ರನನ್ನೇ ಬಿಜೆಪಿ ಕಣಕ್ಕೆ ಇಳಿಸಿತ್ತು. ಅಲ್ಲಿ ನಮ್ಮ ಪಕ್ಷದಿಂದ ಅಲ್ಪಸಂಖ್ಯಾತ ಸಮುದಾಯದವರು ಅಭ್ಯರ್ಥಿ ಆಗಿದ್ದರು. ಮತದಾರರು ಅವರ ಪರವಾಗಿ ಜನಾದೇಶ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ಎಲ್ಲ ಜನ ಸಮುದಾಯಗಳಿಗೂ ಸಮಾನ ಅವಕಾಶ ನೀಡುತ್ತ ಬಂದಿದೆ ಎಂದು ಅವರು ವಿವರಿಸಿದ್ದಾರೆ.