ದೊಡ್ಡಬಳ್ಳಾಪುರ: ಸುಗ್ಗಿ ಹಬ್ಬ ಸಂಕ್ರಾಂತಿಯನ್ನು (Sankranti 2025) ತಾಲೂಕಿನಾಧ್ಯಂತ ಸಡಗರ ಸಂಭ್ರಮಗಳಿಂದ ಆಚರಿಸಲಾಯಿತು. ಜನತೆ ಎಳ್ಳು ಬೆಲ್ಲವನ್ನು ವಿನಿಮಯ ಮಾಡಿಕೊಳ್ಳುವ ಮೂಲಕ ಸಂಕ್ರಾಂತಿ ಶುಭಾಶಯಗಳನ್ನು ಕೋರಿದರು.
ಮನೆಗಳ ಮುಂದೆ ಸಂಕ್ರಾಂತಿಯ ವಿಶೇಷ ಶುಭಾಶಯಗಳನ್ನು ಕೋರುವ ಬಣ್ಣ ಬಣ್ಣದ ರಂಗೋಲಿಗಳ ಚಿತ್ತಾರವು ಹಬ್ಬಕ್ಕೆ ಮೆರುಗು ನೀಡಿದ್ದವು.
ಕಬ್ಬು, ಅವರೇ ಕಾಯಿ, ಕಡಲೇಕಾಯಿಗಳನ್ನು ಗೋವುಗಳಿಗೆ ನೇವೇದ್ಯ ಮಾಡಿ ಪೂಜಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.
ತಾಲೂಕಿನ ಗ್ರಾಮಾಂತರ ಪ್ರದೇಶದಲ್ಲಿ ಸಂಕ್ರಾಂತಿಯಂದು ಪ್ರತಿ ವರ್ಷದಂತೆ ಈ ಬಾರಿಯೂ ಕಾಟಿಮರಾಯನ ಹಬ್ಬದ ಆಚರಣೆ ನಡೆದಿದೆ.

ರೈತರು ತಮ್ಮ ರಾಸುಗಳಿಗೆ ವಿಶೇಷ ಪೂಜೆ ಸಲ್ಲಿಸುವ, ಕಾಟಿಮರಾಯನಿಗೆ ಹರಕೆ ತೀರಿಸುವ, ಅಚರಣೆಗಳು ಎಲ್ಲೆಡೆ ಕಂಡು ಬಂದವು.
ರೈತನ ದುಡಿಮೆಯಲ್ಲಿ ಭಾಗಿಯಾಗುವ ರಾಸುಗಳಿಗೆ ಸಂಕ್ರಾಂತಿಯಂದು ವಿಶೇಷ ಆತಿಥ್ಯ. ರಾಸುಗಳಿಗೆ ಮೈ ತೊಳೆದು, ಕೊಂಬುಗಳಿಗೆ ಬಣ್ಣಗಳನ್ನು ಬಳಿದು ಅಲಂಕಾರ ಮಾಡಲಾಗಿತ್ತು.
ತಾಲೂಕಿನ ಕಾಡನೂರು ಗ್ರಾಮದಲ್ಲಿ ಕಾಟಿಮರಾಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಗಳು ನಡೆದವು.
ತಾಲೂಕಿನ ವಿವಿಧ ಗ್ರಾಮಗಳಲ್ಲಿ ರಾಸುಗಳಿಗೆ ವಿಶೇಷ ಅಲಂಕಾರ ಮಾಡಿ ಕಿಚ್ಚು ಹಾಯಿಸುವ ಆಚರಣೆ ಮಾಡಲಾಯಿತು.
ತಾಲೂಕಿನ ಕುಂಟನಹಳ್ಳಿ, ದೊಡ್ಡತುಮಕೂರು, ಚಿಕ್ಕತುಮಕೂರು, ಮಜರಾಹೊಸಹಳ್ಳಿ, ಮೆಳೇಕೋಟೆ, ಹೆಗ್ಗಡಿಹಳ್ಳಿ ಮೊದಲಾದ ಗ್ರಾಮಗಳಲ್ಲಿ ರಾಸುಗಳಿಗೆ ವಿಶೇಷ ಅಲಂಕಾರ ಮಾಡಿ ಕಿಚ್ಚು ಹಾಯಿಸುವ ಆಚರಣೆ ಮಾಡಲಾಯಿತು.