ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ (Dharmasthala) ಸಂಬಂಧಿಸಿದ ಸಂಸ್ಥೆಗಳ ವಿರುದ್ದ ಯಾವುದೇ ಮಾನಹಾನಿ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಅವರ ಅನುಯಾಯಿಗಳಿಗೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ನೀಡಿದೆ ಎಂದು ವರದಿಯಾಗಿದೆ.
ನ್ಯಾ.ಆರ್. ದೇವದಾಸ್ ಅವರಿದ್ದ ಏಕಸದಸ್ಯ ಪೀಠ ಸೋಮವಾರ ಮಹತ್ವದ ಆದೇಶ ನೀಡಿದೆ. ಅಲ್ಲದೆ, ಸಾರ್ವಜನಿಕ ಸಭೆಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಡಾ.ವೀರೇಂದ್ರ ಹೆಗ್ಗಡೆ, ಅವರ ಕುಟುಂಬ, ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳು ಹಾಗೂ ಮುಂದಿನ ಯೋಜನೆಗಳ ಬಗ್ಗೆ ಅಪಪ್ರಚಾರ ಅಥವಾ ಮಾನಹಾನಿ ಹೇಳಿಕೆ ನೀಡದಂತೆ ಆದೇಶಿಸಿದೆ.
ಅಪಪ್ರಚಾರಕ್ಕೆ ಕೋರ್ಟ್ ಗರಂ
ಸಿವಿಲ್ ನ್ಯಾಯಾಲಯದ ತಡೆಯಾಜ್ಞೆ ಇದ್ದರೂ, ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಇತರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿಗಳ ವಿರುದ್ದ ಅಪಪ್ರಚಾರ, ಮಾನಹಾನಿ ಮಾಡಿದ್ದಲ್ಲದೇ ನ್ಯಾಯಾಂಗ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳ ನಿಂದನೆಯನ್ನು ತೀವ್ರವಾಗಿ ಪರಿಗಣಿಸಿ ಈ ಆದೇಶ ನೀಡಿದೆ.
ನ್ಯಾಯಾಂಗ ನಿಂದನೆ, ಅಪಪ್ರಚಾರ, ಮಾನಹಾನಿ
ಅರ್ಜಿಯ ವಿಚಾರಣೆ ವೇಳೆ, ಮಹೇಶ್ ಶೆಟ್ಟಿ ತಿಮರೋಡಿ ಬೇಷರತ್ ಕ್ಷಮೆಯ ಅಫಿಡವಿಟ್ ಸಲ್ಲಿಸಿದ್ದರೂ, ತಮ್ಮ ವರ್ತನೆಯನ್ನು ಸರಿಪಡಿಸಿಕೊಂಡಿಲ್ಲ.
ಮುಂದಿನ ದಿನಗಳಲ್ಲಿ ಮಹೇಶ್ ಶೆಟ್ಟಿ ಹಾಗೂ ಸಹಚರರು ಸಾಮಾಜಿಕ ಜಾಲತಾಣದಲ್ಲಿ, ಸಭೆ, ಸಮಾರಂಭಗಳಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ, ಧರ್ಮಾಧಿಕಾರಿಗಳು, ಕುಟುಂಬ ಸದಸ್ಯರು ಹಾಗೂ ಧರ್ಮಸ್ಥಳದ ಸಂಸ್ಥೆಗಳು, ಮಾಡಿದಲ್ಲಿ ಕಾನೂನಿನಂತೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಖಡಕ್ ಸೂಚನೆ ಕೊಟ್ಟಿದೆ ಎಂದು ವರದಿಯಾಗಿದೆ.
ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಉದಯ ಹೊಳ್ಳ ಹಾಗೂ ಎಸ್.ರಾಜಶೇಖರ್ ಹಿಲಿಯಾರು ವಾದ ಮಂಡಿಸಿದರು.