ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ವೇಳೆ ಕಿರುಕುಳ ನೀಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ (Krishna Byre Gowda) ಅವರು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇಂದು ವಿಕಾಸಸೌಧದಲ್ಲಿ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಸಿದ್ದು, ಸಭೆಯ ನಡುವೆಯೇ ಸುದ್ದಿಗೋಷ್ಠಿ ನಡೆಸಿ ಸಭೆಯ ಮಾಹಿತಿ ನೀಡಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ಅನ್ವಯ, ಮೈಕ್ರೋ ಫೈನಾನ್ಸ್ ಕಂಪನಿ ಸಾಲ ವಸೂಲಿ ಮಾಡುವ ಸಂದರ್ಭದಲ್ಲಿ ಕೆಲವರು ಅತಿರೇಕ ಮಾಡುತ್ತಿದ್ದಾರೆ.
ಈ ಕುರಿತು ಡಿಸಿ ಹಾಗೂ ಎಸ್.ಪಿ ಅವರು ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳ ಸಭೆ ಕರೆದು RBI ನಿಯಮಗಳನ್ನು ಫೈನಾನ್ಸ್ ನವರು ಪಾಲಿಸಬೇಕು.
ಯದ್ವಾ ತದ್ವಾ ಬೇಜವಾಬ್ದಾರಿಯುತವಾಗಿ ಸಾಲ ನೀಡಬಾರದು. ರೂ.2 ಲಕ್ಷದ ಒಳಗಡೆ ಸಾಲವನ್ನು ಕೊಡಬೇಕು. RBI ನಿಯಮಗಳಲ್ಲಿ ಏನೇನು ನಿಯಮಗಳಿವೆ? ಅವುಗಳನ್ನು ಅನುಸರಿಸುವಂತೆ ಎಚ್ಚರಿಕೆ ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ಮೈಕ್ರೋ ಫೈನಾನ್ಸ್ ವಿರುದ್ಧ ಕ್ರಮಕೈಗೊಳ್ಳಲು RBI ಮತ್ತು ಕೇಂದ್ರ ಸರ್ಕಾರ ರಾಜ್ಯಗಳಿಗೆ ಅಧಿಕಾರ ನೀಡಿಲ್ಲ. ಹಾಗೆಂದು ರಾಜ್ಯ ಸರ್ಕಾರ ಸುಮ್ಮನೆ ಕೂರಲು ಸಾಧ್ಯವಿಲ್ಲ. ಮುಂದೆ ದೊಡ್ಡಮಟ್ಟದಲ್ಲಿ ಉಂಟಾಗಬಹುದಾದ ಸಮಸ್ಯೆ ತಡೆಗಟ್ಟಲು ರಾಜ್ಯ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದರು.