
ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ನಿರೀಕ್ಷೆಯಂತೆಯೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ (Annamailai) ಹಿಂದೆ ಸರಿದಿದ್ದಾರೆ.
ಕೊಯಮತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷ ಹುದ್ದೆಗೆ ನಾನು ಸ್ಪರ್ಧೆ ಮಾಡುವುದಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಪಕ್ಷಕ್ಕೆ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡುತ್ತೇವೆ. ನಾನು ಅಧ್ಯಕ್ಷ ಸ್ಥಾನದ ರೇಸ್ನಲ್ಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಪಕ್ಷಕ್ಕೆ ಉಜ್ವಲ ಭವಿಷ್ಯ ಇರಬೇಕೆಂದು ನಾನು ಬಯಸುತ್ತೇನೆ. ಅನೇಕ ನಾಯಕರು ಬಿಜೆಪಿ ಬೆಳವಣಿಗೆಗಾಗಿ ತಮ್ಮ ಪ್ರಾಣವನ್ನೇ ನೀಡಿದ್ದಾರೆ. ನಾನೂ ಸಹ ಈ ಪಕ್ಷಕ್ಕೆ ಒಳ್ಳೆಯದನ್ನೇ ಬಯಸುತ್ತೇನೆ. ಇದರ ಹೊರತಾಗಿ ನಾನು ಯಾವುದೇ ರಾಜಕೀಯ ಊಹಾಪೋಹಗಳಿಗೆ ಉತ್ತರ ಕೊಡುವುದಿಲ್ಲ ಎಂದು ಅಣ್ಣಾಮಲೈ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಬಿಜೆಪಿ ಇತರ ಪಕ್ಷಗಳಿಗಿಂತ ಭಿನ್ನವಾಗಿದ್ದು, ಒಗ್ಗಟ್ಟಿನಿಂದ ಅಧ್ಯಕ್ಷರನ್ನ ಆಯ್ಕೆ ಮಾಡುತ್ತೇವೆ ಎಂದು ಅಣ್ಣಾಮಲೈ ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ.
ಎಐಎಡಿಎಂ ಕೆ-ಬಿಜೆಪಿ 2026 ರ ಚುನಾವಣೆ ದೃಷ್ಟಿಯಿಂದ ಮೈತ್ರಿಗೆ ಮುಂದಾಗಿದ್ದು, ಈ ಹಿನ್ನೆಲೆಯಲ್ಲಿ ಚುರುಕುಗೊಂಡ ರಾಜಕೀಯ ಲೆಕ್ಕಾಚಾರಗಳಿಂದಾಗಿ ಅಣ್ಣಾಮಲೈ ಬಿಜೆಪಿ ತಮಿಳುನಾಡು ಅಧ್ಯಕ್ಷ ಸ್ಥಾನ ತೊರೆದಿದ್ದಾರೆ.
ಎಐಎಡಿಎಂ ಕೆ-ಬಿಜೆಪಿ ಎರಡೂ ಪಕ್ಷಗಳಿಗೆ ಒಂದೇ ಸಮುದಾಯದಿಂದ (ಗೌಡರ್ ಸಮುದಾಯದ) ನಾಯಕರಿದ್ದ ಕಾರಣಕ್ಕೆ ಬಿಜೆಪಿ ಅಧ್ಯಕ್ಷರ ಬದಲಾವಣೆಗೆ ಎಐಎಡಿಎಂಕೆ ಪಟ್ಟು ಹಿಡಿದಿತ್ತು ಎನ್ನಲಾಗುತ್ತಿದೆ.

