ದೇವನಹಳ್ಳಿ: ಭಯೋತ್ಪಾದನೆಯನ್ನು ಬೇರು ಸಹಿತ ಕಿತ್ತಾಕಬೇಕು: ದೇಶದ ಸಾರ್ವಭೌಮತೆ ಧಕ್ಕೆ ಬಂದಾಗ ಪಾಕಿಸ್ತಾನವೇ ಆಗಲಿ, ಯಾವುದೇ ದೇಶದ ವಿರುದ್ಧವಾದರೂ ಭಾರತ ಯುದ್ಧ ಮಾಡಿಯೇ ಸಿದ್ಧ, ಇದನ್ನು ಪ್ರತೀ ಸಂದರ್ಭದಲ್ಲೂ ಭಾರತ ಸಾಭೀತು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ (Cmsiddaramaiah) ಅವರು ಗುಡುಗಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿ, ಎರಡು ವರ್ಷ ಸರ್ಕಾರದ ಸಾಧನಾ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.

ಭಾರತವನ್ನು ಕೆಣಕಿದರೆ ಅದು ಪಾಕಿಸ್ತಾನವೇ ಆಗಲಿ, ಯಾವುದೇ ದೇಶವಾಗಲಿ ನಾವು ಸಹಿಸಲ್ಲ. ಯಾವುದೇ ಹಂತದ ಯುದ್ಧಕ್ಕೆ ಭಾರತ ಸದಾ ಸಿದ್ಧ, ಸದಾ ಸನ್ನದ್ಧ ಆಗಿರುತ್ತದೆ. ಅನಿವಾರ್ಯತೆ ಆದಾಗ ಯುದ್ಧಕ್ಕೆ ಮುಂದಡಿ ಇಟ್ಟು ನಮ್ಮ ಸಾರ್ವಭೌಮತೆಯನ್ನು ಕಾಪಾಡಿಕೊಳ್ಳುವುದು ನಮಗೆ ಗೊತ್ತಿದೆ. ಇದನ್ನು ಭಾರತ ಪ್ರತೀ ಸಂದರ್ಭದಲ್ಲೂ ಸಾಭೀತು ಪಡಿಸಿದೆ. ಇತಿಗಾಸದುದ್ದಕ್ಕೂ ನಾವು ಈ ಎಚ್ಚರವನ್ನು ಮತ್ತು ಸಾರ್ವಭೌಮತೆಯನ್ನು ಕಾಪಾಡಿಕೊಂಡೇ ಬಂದಿದ್ದೇವೆ. ಮುಂದಕ್ಕೂ ಇದನ್ನು ಕಾಪಾಡಿಕೊಳ್ಳುತ್ತೇವೆ ಎಂದರು.
ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತು ಹಾಕುವುದು, ಪ್ರತಿಯೊಬ್ಬ ಭಾರತೀಯರಿಗೆ ಸೂಕ್ತ ರಕ್ಷಣೆ ಕೊಡುವುದು ನಮ್ಮ ಈ ಕ್ಷಣದ ಆಧ್ಯತೆಯಾಗಿದೆ. ಇದರಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.
ಭಾರತ ಬುದ್ದ, ಬಸವರ, ಗಾಂಧಿ, ಅಂಬೇಡ್ಕರ್ ಅವರ ನಾಡು. ಇಲ್ಲಿ ಭಯೋತ್ಪಾದನೆಗೆ, ಅಶಾಂತಿಗೆ ಅವಕಾಶ ಇಲ್ಲ. ಅನಿವಾರ್ಯವಾದರೆ ಯುದ್ಧಕ್ಕೂ ಸಿದ್ದ ಎನ್ನುವ ಮಾತನ್ನು ನೆನ್ನೆ ನಾನು ಹೇಳಿದ್ದೆ. ಆದರೆ ಭಯೋತ್ಪಾದಕರ ವಿರುದ್ಧ, ಪಾಕಿಸ್ತಾನದ ವಿರುದ್ಧ ಯುದ್ಧವೇ ಬೇಡ ಎಂದು ಹೇಳಿದ್ದೇನೆ ಎಂದು ಸುಳ್ಳು ಸುಳ್ಳೇ ಬಿಜೆಪಿ ಪ್ರಚಾರ ಮಾಡುತ್ತಿದೆ. ಆದರೆ ನನ್ನ ಮಾತನ್ನು ತಿರುಚಿ ಯುದ್ದವೇ ಬೇಡ ಎಂದು ಹೇಳಿದ್ದೇನೆ ಎಂದು ನನ್ನದಲ್ಲದ ಅಭಿಪ್ರಾಯವನ್ನು ತಿರುಚಿ ತೋರಿಸುತ್ತಿದ್ದಾರೆ. ಇದು ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂಪಾಯಿಯನ್ನು ಜನರಿಗೆ
ಇಲ್ಲಿಯವರೆಗೆ ಗ್ಯಾರಂಟಿಗಳ ಮೂಲಕ 80 ಸಾವಿರ ಕೋಟಿ ರೂಪಾಯಿಯನ್ನು ಜನರ ಜೇಬಿಗೆ ಹಾಕಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸರ್ಕಾರದ ಎರಡು ವರ್ಷದ ಸಾಧನಾ ಸಮಾವೇಶದಲ್ಲಿ ಗ್ರಾಮಾಂತರ ಜಿಲ್ಲೆಯ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿದ ಬಳಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.
ಗ್ರಾಮಾಂತರ ಜಿಲ್ಲೆಯಲ್ಲಿ ಸಾವಿರ ಸಾವಿರ ಕೋಟಿ ವೆಚ್ಚದ ಕಾಮಗಾರಿಗಳಿಗೆ ಒಂದೇ ದಿನ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಬಿಜೆಪಿ ಪರಿವಾರದ ಸುಳ್ಳುಗಳೆಗೆ ಅಭಿವೃದ್ಧಿ ಮೂಲಕವೇ ಉತ್ತರ ನೀಡುತ್ತಿದ್ದೇವೆ ಎಂದರು.
ಬಿಜೆಪಿ ಕನ್ನಡಕದ ಗಾಜುಗಳು ಅವರ ಅಧಿಕಾರಾವಧಿಯ ಕಲೆಗಳಿಂದ ಕೂಡಿದೆ. ಅದಕ್ಕೇ ಅವರು ನೋಡುವ ಕಡೆಯಲ್ಲೆಲ್ಲಾ ಕಲೆಗಳೇ ಕಾಣುತ್ತಿವೆ. ಬಿಜೆಪಿ ತನ್ನ ಕನ್ನಡಕ ಕ್ಲೀನ್ ಮಾಡಿಕೊಂಡರೆ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾಣುತ್ತದೆ ಎಂದು ಟೀಕಿಸಿದರು.
ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಅಭಿವೃದ್ಧಿ ಮತ್ತು ಪ್ರಗತಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನಗಳನ್ನು ನೀಡಿ, ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದೆ. ಚುನಾವಣೆ ವೇಳೆ ನಾವು ಕೊಟ್ಟ ಭರವಸೆಗಳನ್ನೆಲ್ಲಾ ಈಡೇರಿಸುತ್ತಲೇ ಇದ್ದೇವೆ.
ಅಧಿಕಾರಕ್ಕೆ ಬಂದ ಬಳಿಕ ಮೊದಲ ಕ್ಯಾಬಿನೆಟ್ ನಲ್ಲೇ ಗ್ಯಾರಂಟಿಗಳನ್ನು ಜಾರಿ ಮಾಡಿ ಇದಕ್ಕಾಗಿ 80 ಸಾವಿರ ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿದ್ದೇವೆ ಎಂದರು.